Saturday, July 8, 2023

ನಿಲ್ದಾಣವಲ್ಲದ ನಿಲ್ದಾಣದಲ್ಲಿ…

 

ಪಶ್ಚಿಮ ಘಟ್ಟದ ಸೆರಗ ಹಿಡಿದು ಅದರ ತೊಡೆಯ ಮೇಲೆ ಮಲಗಿದ ರಮ್ಯ ರೈಲು ನಿಲ್ದಾಣ! ಕಾವಲಿಗೆ ನಿಂತ ಬೆಟ್ಟ ಸಾಲು. ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಸಾಗುವ ನೋಟ ಎಂತಹ ಜಡ ಭರತರನ್ನೂ ಕವಿಯಾಗಿಸಬಲ್ಲದು! ಭಾರತದ ಉದ್ದಗಲಕ್ಕೂ ಇಷ್ಟು ವಿಶಿಷ್ಟವಾದ ಮತ್ತೊಂದು ರೈಲು ನಿಲ್ದಾಣವಿರಲಿಕ್ಕಿಲ್ಲ. ಯಡಕುಮರಿ. ಎಂತಹ ವಿಚಿತ್ರ ಹೆಸರು. ಹೆಚ್ಚು ಕಡಿಮೆ ಎಡಕುಮೇರಿ ಅಥವಾ ಯಡಕುವೇರಿ ಎಂಬ ಹೆಸರು ಕೇಳಿರದ ಚಾರಣಿಗ ಇಲ್ಲವೇನೋ.


ತೇಜಸ್ವಿಯವರ ಜುಗಾರಿ ಕ್ರಾಸ್ ಓದಿದವರಿಗೆ ಕುಂಟರಾಮನ ಕಥಾ ಪ್ರಸಂಗ ಎಡಕುವೇರಿಯ ಸುರಂಗಗಳನ್ನು ನೆನಪಿಸುತ್ತೆ. ಅಂತಹ ಬೀಕರತೆ ಇಲ್ಲಿನ ಸುರಂಗಗಳಿಗೆ ಲಭಿಸಿದೆ. ಎಡಕುಮರಿ ಸನಿಹದಲ್ಲೇ ನಡೆಯುವ ಕತಾ ಪ್ರಸಂಗವೊಂದನ್ನು ಗಿರಿ ಮನೆ ಶ್ಯಾಂ ರಾವ ಕಟ್ಟಿ ಕೊಟ್ಟ ನೆನಪು. ಭಯಾನಕ ಹುಲಿಯೊಂದನ್ನು ಭೇಟೆಯಾಡಿದ ಫಾರೆಸ್ಟರ್‌ ಕೊನೆಗೆ ಅಮಾನತಿಗೆ ಒಳಗಾಗುವ ಕತೆ ಇಲ್ಲಿಯೇ ನಡೆದುದು. ಇಂತಹ ಮಾನವ ತಲುಪಲಾಗದ ಹಳ್ಳಿ ನಮ್ಮ ದೇಶದಲ್ಲಿ ಹಲವಿರಬಹುದು ಆದರೆ ತಲುಪಲಾಗದ ಸ್ಟೇಷನ್‌ ಒಂದು ಇದೆ ಎಂಬುದೇ  ಒಂತರಾ ವಿಚಿತ್ರವಲ್ಲವೇ? ಮಾನವ ನಾಗರಿಕತೆಯ ಸೋಂಕಿಗೆ ಒಳಗಾಗಲು ನೀವು ಬರೋಬ್ಬರಿ ೮ ಕಿ. ಮೀಟರ್‌ ನಡೆಯಬೇಕು! ಸುಬ್ರಮಣ್ಯದಿಂದ ಹೊರಟು ದೋಣಿಗಲ್ಲು ದಾಟಿದರೆ ಮುಂದೆ ಸಿಗುವುದೇ ಯಡಕುಮರಿ.


            ಇಲ್ಲಿ ನೀವು ದಾಟುವ ಸುರಂಗಗಳು ಹಲವು. ದಾಟುವ ತೊರೆಗಳು ನೂರಾರು. ಮಳೆಗಾಲ ಬಂತೆಂದರೆ ತೊರೆಗಳ ಮೆರವಣಿಗೆ. ಮಳೆಗಾಲ ಪೂರ್ಣ ಹಸಿರು ಚಾದರ ಹೊದ್ದ ಬೆಟ್ಟ ಗುಡ್ಡಗಳು. ಬೇಸಿಗೆಯಲ್ಲೂ ಹಸಿರಾಗಿರುತ್ತವೆ. ಕಡಿದಾದ ಕಣಿವೆಗಳಲ್ಲಿ ಹನಿಗಳ ಕಲರವ. ಜೀರುಂಡೆ ಗಾಯನ. ದಿನಕ್ಕೊಂದು ರೈಲು ಬಂದರೆ ಮುಗೀತು. ಮತ್ತೆರಡು ರಾತ್ರಿಗೆ. ಉಳಿಯುವುದು ನೀರವ ಏಕಾಂತ.‌ ಕೇಳುವವರೇ ಇಲ್ಲದ ಕ್ಯಾರೆ ಎನ್ನದ ದಿವ್ಯ ಮೌನ. ಮಾತಿಗೆ ಮೌನ ಸ್ವೆಟರಿನ ಮುಚ್ಚಿಗೆ. ಜೀರುಂಡೆಗಳ ಸಮೂಹಗಾಯನ. ಇನಿಯಳೊಂದಿಗೆ ಮುದ್ದು ಮಾಡುತ್ತಾ ಕೂರಬಹುದಾದ ಜಾಗ. 



ಇಲ್ಲಿನ ರೈಲ್ವೆ ಮಾಸ್ತರರನ್ನು ಮಾತಾಡಿಸಿದೆ. ಇಲ್ಲಿನ ಕಲ್ಲು ಬಂಡೆಗಳಂತೆ ಆತ ನಮ್ಮೊಡನೆಯೂ ಮಾತು ಬಿಟ್ಟಿದ್ದ! ಈ ಏಕಾಂತದ ಮಜವನ್ನು ಅನುಭವಿಸಿದವನಿಗೇ ಗೊತ್ತು ಎಂಬಂತೆ ಮುಗುಮ್ಮಾಗಿದ್ದ!

            ಇಲ್ಲಿ ನೇಮಕವಾದ ಹೊರಮುಖಿ ವ್ಯಕ್ತಿತ್ವದ ಸ್ಟೇಶನ್‌ ಮಾಸ್ಟ್ರುಗಳಿಗೆ ಬಹಳ ಕಷ್ಟ! ವಿದ್ಯುತ್‌ ಬೇರೆ ಇಲ್ಲ. ಬೆಟ್ಟ ಸಾಲಿಗೆ ಮುಖಮಾಡಿ ಡಿಪಾರ್ಟುಮೆಂಟು ಹಾಕಿಸಿದ ಬೆಂಚೊಂದಿದೆ. ಎಷ್ಟು ಹೊತ್ತು ಕುಳಿತರೂ ಕೇಳುವವರಿಲ್ಲ. ಇಲಾಖೆ ನಿರ್ಮಿಸಿದ ಒಂದೆರಡು ಸಣ್ಣ ಮನೆಗಳು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ!


    ನಿಲ್ದಾಣವಲ್ಲದ ನಿಲ್ದಾಣ! ಇಲ್ಲಿ ಇಳಿಯುವವರೇ ಇಲ್ಲ! ಹತ್ತುವವರೂ ಇಲ್ಲ.  ಆದರೂ ಒಂದು ನಿಲ್ದಾಣ!! ಇಲ್ಲಿ ಸ್ವಲ್ಪ ಹೊತ್ತು ರೈಲು ನಿಂತು ನೀರು ಕುಡಿದು ಏರಿ ಬಂದ ಕಷ್ಟಗಳ ನೆನೆದು ದಣಿವಾರಿದಿಕೊಂಡು ಮತ್ತೆ ಹೊರಡುತ್ತೆ. ನೀವಿಲ್ಲಿ ಇಳಿಯುವಂತಿಲ್ಲ. ಇಳಿದರೆ ಇಲ್ಲಿನ ಏಕಾಂತದಲ್ಲಿ ಬಂಧಿ. ಹಲವು ವರ್ಷಗಳ ಕಾಲ ಈ ಸ್ಥಳಕ್ಕೆ ದೋಣಿಗಲ್ಲಿನಿಂದ ಸಾಹಸಿಗರು ನಡೆದುಕೊಂಡು ಬರುತ್ತಿದ್ದರು! ಈಗ ಈ ಚಾರಣ ಸಂಪೂರ್ಣ ನಿಶೇಧಿಸಲಾಗಿದೆ. ಈಗಿಲ್ಲಿ  ಚಾರಣಕ್ಕೆ ಹೋದವರ ಮೇಲೆ ಟ್ರೆಸ್ಪಾಸ್‌ ಕೇಸ್‌ ಜಡಿದು ಹೊರಬರಲಾರದಂತೆ ಮಾಡಲಾಗುತ್ತದೆ. ಸಕಲೇಶಪುರದ ಸನಿಹದಲ್ಲಿರುವ ಮೌನವೇ ಹೊದ್ದು ಮಲಗಿದ ಇಲ್ಲಿಗೆ ಒಮ್ಮೆಯಾದರೂ ಹೋಗಿ ನೀರವ ಏಕಾಂತವನ್ನು ತಬ್ಬಿ ಮಲಗಬೇಕು. ನೀವು ಬರುವಿರಾ?



No comments:

Post a Comment

ವಾರೆ ನೋಟ

ಲೋಚನ ದ ತುಂಬಾ ಚಂದ್ರ ತಾಲದ ಬಿಂಬ

( Chandra tal lake .... Himachal pradesh) ನೀಲಾಕಾಶದ ಭಿತ್ತಿಯಲಿ ಹೂ ಚೆಲ್ಲಿದಂತೆ ಹರಡಿದ ಮೋಡ. ರಸ್ತೆಯಲಿ ಅಜ್ಜನೊಬ್ಬ ಮಾತಿಗೆ ಅಂಟಿದ ಧೂಳನ್ನು ಉಜ್ಜುತ್ತಾ ಕುಳಿ...