Tuesday, July 21, 2026

ಅಲೆಮಾರಿಯ ಆಗುಂಬೆ ಹಾಗೂ ಟ್ರೋಗನ್

 

‌ಆಗುಂಬೆ ಎಂಬ ಲಾಂಚ್‌ ಪ್ಯಾಡ್‌

 ನಾನಿದನ್ನು ಮಲೆನಾಡಿನ ಹೆಬ್ಬಾಗಿಲೆಂದೇ ಕರೆಯುವೆ. ಯಾವುದೇ ಊರಿಗೆ ಹೋಗಬೇಕಾದರೂ ಉಡುಪಿಯ ನೀವು ಆಗುಂಬೆಯ ದಾಟಿಯೇ ಹೋಗಬೇಕು. ಮೂಡಿಗೆರೆ, ಶೃಂಗೇರಿ ಹೀಗೆ ಹತ್ತು ಹಲವು ಸ್ಥಳಗಳಿಗೆ ಹೋಗಲು ನಮಗೆ ಆಗುಂಬೆಯೇ ಲಾಂಚ್‌ ಪ್ಯಾಡ್. ಹಾಗಾಗಿ ಆಗುಂಬೆಯೊಂದಿಗೆ ಬಂಧ ಬೆಸೆದುಕೊಂಡು ಬಂದಿದೆ. ಹಾಗಾಗಿ ಆಗುಂಬೆಗೆ ಎಷ್ಟು ಸಲ ಹೋಗಿದ್ದೇವೆಂದು ಕೇಳಿದರೆ ಲೆಕ್ಕ ತಪ್ಪುತ್ತದೆ. 

ಆಗುಂಬೆ ಎಂಬ ಆತ್ಮ ಸಖಿ

ಆಗುಂಬೆ ಎಂದರೆ ಆತ್ಮ ಸಖಿ. ಇವಳ ಪದತಲದಲ್ಲಿ ಪವಡಿಸುವ ಸುಖವೇ ಬೇರೆ. ಸದಾ ಗಿಜಿ ಗುಡುವ ಊರುಗಳಿಗಿಂತಲೂ ಶಾಂತವಾದ ಇಂತಹ ಊರುಗಳು ನಮ್ಮ ಎದೆಯ ತಣಿಸುತ್ತವೆ. ಸದಾ ಮಂಜು ಬಿಕ್ಕುವ ಇಲ್ಲಿನ ದಾರಿಗಳು ನಮ್ಮನ್ನು ವಿಸ್ಮಿತರನ್ನಾಗಿಸುತ್ತದೆ. 

  ಸೂರ್ಯನಿಗಿಲ್ಲಿ ಯಾವತ್ತೂ ರಜೆ. ಹತ್ತಿ ಮರದ ಅಜ್ಜನ ಗಡ್ಡ ಹಾರಿದಂತೆ ಮುಖಕ್ಕೆ ಮಂಜಿನ ಮಜ್ಜನ. ಮೌನ ಹೊದ್ದ ರಸ್ತೆಗಳು. ಕರ್ನಾಟಕದ ಚಿರಾಪುಂಜಿ. ಸದಾ ಸೂಜಿ ಮಳೆಯ ಸಂಜೆಯಂತಹ ವಾತಾವರಣ. ಅರಬ್ಬಿ ಕಡಲಿಗೋಡುವ ಸೀತೆ ಹುಟ್ಟುವುದು ಇಲ್ಲಿನ ಗಿರಿ ಶೃಂಗಗಳಲ್ಲೇ. 

ಆಗುಂಬೆ ಎಂಬುದೊಂದು ಭಾವ. ಸದಾ ನಮ್ಮನ್ನು ಆವರಿಸಿದ ಚರ್ಮದಂತೆ. ನಮ್ಮೊಳಗೇ ಹುಟ್ಟಿ ಬೆಳೆವ ಪುಟಾಣಿ ಹಳ್ಳಿ. ಸದಾ ಮಂಜಿನಿಂದ ತುಂಬಿ ಆತ್ಮಕ್ಕೊಂದು ಶಾಂತಿ ನೀಡುವ ನಿಲ್ದಾಣ. ನಾ ಯಾವತ್ತೂ ಆಗುಂಬೆಯಲ್ಲಿ ಅನುಭವಿಸುವ ಶಾಂತಿ ಮತ್ತೆಲ್ಲೂ ಸಿಕ್ಕಿಲ್ಲ. ಮನಸ್ಸು ಸದಾ ಆಗುಂಬೆಯತ್ತ ತುಡಿಯುತ್ತಾ ಇರುತ್ತೆ. ಇಲ್ಲಿರುವ ಪರಿಸರದಲ್ಲಿರುವ ಪಾಸಿಟಿವ್‌ ಶಕ್ತಿಯೇ ಅಂತಹುದು. ಇಲ್ಲಿಗೆ ಹೋಗಿ ಬಂದರೆ ಮುಂದಿನ ಆರೇಳು ತಿಂಗಳು ನಿಮ್ಮ ಎನರ್ಜಿ ಅಧ್ಬುತವಾಗಿರುತ್ತದೆ. ನಮ್ಮೂರಿನ ಕೆಮಿಸ್ಟ್‌ ಒಬ್ಬರು ಪ್ರತೀ ವಾರ ಆಗುಂಬೆಗೆ ಹೋಗಿ ಬರುತ್ತಾರೆ. ನನಗೆ ಕೇಳಿಯೇ ಅಚ್ಚರಿಯಾಯಿತು. ನಿಮಗೂ ಇಂತಹ ಅನುಭೂತಿ ಪಡೆವ ಆಸೆಯೇ? ಇನ್ನೇಕೆ ತಡ ಸದಾ ಕಾಡುವ ಆಗುಂಬೆಗೊಮ್ಮೆ ಈ ಮಳೆಗಾಲದಲ್ಲಾದರೂ ಹೋಗಿ ಬನ್ನಿ.

ಟ್ರೋಗನ್‌ನ ಬೆನ್ನು ಬಿದ್ದು

ಗಂಡು ಹಕ್ಕಿ - (ಚಿತ್ರ ಅಂತರ ಜಾಲ)


LTM ಅಳಿವಿನ ಅಂಚಿನಲ್ಲಿ ಕೊನೆಯ ಪ್ರಯತ್ನ...

ಜಗತ್ತಿನ 38 ಜೀವವೈವಿದ್ಯತಾ ತಾಣಗಳಲ್ಲಿ ಆಗುಂಬೆಯೂ ಒಂದು. world heritage ಮಾನ್ಯತೆಯೂ ಇದಕ್ಕಿದೆ. ಇಲ್ಲಿನ ಹಕ್ಕಿಗಳಿಗಾಗಿ ವಿದೇಶಿಯರೂ ಇಲ್ಲಿಗೆ ಭೇಟಿ ಕೊಡುತ್ತಾರೆ. ಟ್ರೋಗನ್ ಇಲ್ಲಿನ ಒಂದು ವಿಶೇಷ ಹಕ್ಕಿ. ಕೆಂಬಣ್ಣ ತುಂಬಿದ ಡಬ್ಬಿಗೆ ಬಿದ್ದು ಬಂದಂತಹ ಬಣ್ಣ. ಗಂಡು ಹಕ್ಕಿಯಂತೂ ಗಾಡ ಕೆಂಪು. ಈ ಹಕ್ಕಿಯ ಸಂಗಕ್ಕೆ ಬಿದ್ದು ಊರೂ ಅಲೆದಿದ್ದೆ. ಹಗಲೂ ರಾತ್ರಿ ಸತಾಯಿಸಿದ್ದಿದೆ. ಕೈಯಲ್ಲಿ ಕ್ಯಾಮಾರವಿಲ್ಲದೇ ಇದ್ದಾಗಲ್ಲೊಮ್ಮೆ ೧೦ ಅಡಿ ಅಂತರದಲ್ಲಿ ದರ್ಶನಕೊಟ್ಟು ನನ್ನ ಹೊಟ್ಟೆ ಉರಿಸಿದ್ದಿದೆ. ಹಲವಾರು ಬಾರಿ ಕಾರ್ಯಸಿದ್ದಿಯಾಗದೇ ವಾಪಸಾದೆ. ಹೀಗೆ ಟ್ರೋಜನ್‌ ಸಂಗಕ್ಕೆ ಬಿದ್ದವರೆಲ್ಲಾ ಅದರ ಅಪರಿಮಿತ ಅಂದಕ್ಕೆ ಮಾರು ಹೋಗದೇ ಇರರು. ಇವುಗಳ ಜೊತೆಗೆ ಲಂಗೂರಗಳು ಅಲ್ಲಲ್ಲಿ ಕಾಣಸಿಗುತ್ತವೆ. ಮೊದಲೆಲ್ಲಾ ರಸ್ತೆ ಬದಿ ಬರದೇ ನಾಚಿಕೆ ಸ್ವಭಾವದ LTM (Lion tailed Macaque) ಗಳು ಈಗ ಪ್ರವಾಸಿಗರ ತಿಂಡಿಗಳಿಗೆ ಕೈಚಾಚುತ್ತಿರುವುದು ಇವುಗಳ ಸಹಜ ಪರಿಸರದಲ್ಲಿ ಆಹಾರ ಲಭ್ಯತೆಯು ಕಡಿಮೆಯಾಗಿರುವುದರ ದ್ಯೋತಕವಾಗಿದೆ. ನಾನು ಹೋದಾಗ ಇವುಗಳು ಪ್ರವಾಸಿಗರಲ್ಲಿ ಭಿಕ್ಷೆ ಬೇಡುತಲಿತ್ತು. ಮಹೋರಗದಲ್ಲೊಂದಾದ ಕಾಳಿಂಗ ಸರ್ಪ ಸರ್ವೆ ಸಾಮಾನ್ಯ.



  ಕುಮಾರ ವ್ಯಾಸನ ರೂಪಕ ಅಲಂಕಾರದಂತೆ ಆಗುಂಬೆ ಸುಂದರ, ಮನೋಹರ. ಅಂತಹ ಒಂದು ಅನನ್ಯ ಅನುಭವ ಪಡೆದುದು ನಾವು ಅಲ್ಲಿನ ಜಲಪಾತಗಳ ದರ್ಶನ ಪಡೆಯಲು ಹೊರಟಾಗ. ಹೆಬ್ರಿಯಿಂದ ಕೆಲವೇ ಕಿಲೋ ಮೀಟರ್ ದೂರವಿದೆ. ಇಲ್ಲಿನ ಜಲಪಾತಗಳನ್ನು ವೀಕ್ಷಿಸಲು ಪೋಲಿಸ್ ಠಾಣೆಯ ಅನುಮತಿ ಪಡೆಯುವುದು ಕಡ್ಡಾಯ! ಇವೆಲ್ಲವೂ ಕಾಡಿನೊಳಗಿನವು. ಕೆಲವು ರಕ್ಷಿತಾರಣ್ಯದಲ್ಲಿವೆ. ಚುಮು ಚುಮು ಮುಂಜಾವಲಿ ಇಲ್ಲಿಗೆ ಬಂದಿಳಿದೆ. ಆಗುಂಬೆಯನ್ನೊಮ್ಮೆ ಒಬ್ಬನೇ ಅಡ್ಡಾಡುವುದು ನನ್ನ ಉದ್ದೇಶ.

ಬೆಳಗಿನ ಚಹ ಮುಗಿಸಿ ಜೋಗಿ ಗುಂಡಿ ನೋಡಲು ತಯಾರಾದೆ. ಸ್ವಲ್ಪ ದೂರವನ್ನು ರಿಕ್ಷಾದಲ್ಲಿ ಪಯಣಿಸಿದೆ. ನಂತರದು ಕಾಲ್ನಡಿಗೆ ಹಾದಿ. ಕ್ಯಾಮರವೊಂದೇ ನನ್ನ ಸಂಗಾತಿ. ಹಾದಿ ಉದ್ದಕ್ಕೂ ಹತ್ತಿಯಂತೆ ಹಾಸಿತ್ತು ಮಂಜು! ಆಕಾಶಕೆಟುಕಿದ ಮರಗಳು. ಎರಡಡಿ ದೂರವೂ ತೋರದು! ಜೀರುಂಡೆಯ ಜೇಂಕಾರ ಆಸ್ವಾದಿಸುತ್ತಾ ಸಾಗಿತ್ತು ಪಯಣ. ಕೀಟ ಹಕ್ಕಿಗಳಿಗಾಗಿ ಹುಡುಕಾಟ ನಡೆಸಿತ್ತು ಕ್ಯಾಮರ. ಸಿಕ್ಕ ಸಿಕ್ಕಿದ ಹುಳ ಹುಪ್ಪಟೆಗಳೆಲ್ಲಾ ಕ್ಯಾಮರದಲ್ಲಿ ಬಂಧಿ. ಮಂಜಿನ ಪರದೆ ಸರಿಸಿದಾಗ ಕಂಡದ್ದು ಅಮೋಘ, ನಯನಾಸ್ವಾದಕ ದೃಶ್ಯ. ಅಪ್ಸರೆಯರ ಬಚ್ಚಲು ಮನೆಯಂತಿತ್ತು. ಸುತ್ತ ವನಸಿರಿ. ನಡುವೆ 20 ಅಡಿಯಿಂದ ಧುಮುಕುವ ಜಲಧಾರೆ. ಜಲಪಾತ ಕೊರೆದಾದ ಗುಂಡಿ. ಗುಂಡಿ ಸುತ್ತಿ ನೊರೆ ನೊರೆಯಾಗಿ ಹರಿವ ಪನ್ನೀರು. ಆಗಾಗ ಕೇಳಿ ಬರುವ ಮಲಬಾರ ವಿಸ್ಲಿಂಗ್ ಥ್ರಷ್‌ ಹಕ್ಕಿಯ ಸುಮಧುರ ನಾದ. ಒಟ್ಟಾರೆ ಸ್ವರ್ಗವೇ ಧರೆಗಿಳಿದ ಅನುಭವ. ಅಪರೂಪದ ಕೆಲವು ಸೋಣೆ ಮತ್ತಿತರ ಕಾಡು ಹೂಗಳು. ಕೊನೆಗೂ ಮಲಬಾರ ವಿಸ್ಲಿಂಗ್‌ ಥ್ರಷ್‌ವೊಂದು ದರುಶನವಿತ್ತು ಕಣ್ಮರೆಯಾಯಿತು. ಕಲ್ಲು ಸಂದಿಯಲ್ಲಿ ಗೂಡು ಕಟ್ಟುತ್ತಿರಬೇಕು. ನೀರಾಟ ಆಡಿ ಹಿಂತಿರುಗುವ ಮನಸ್ಸಿಲ್ಲದ ಮನಸ್ಸಿನಿಂದ ಹೊರಟೆ. ಆಗುಂಬೆ ಎಂದರೆ ಜ್ಞಾಪಕ ಚಿತ್ರ ಶಾಲೆಯ ನೂರಾರು ಹೆಸರುಗಳು.

ದೊಡ್ಡ ಮನೆಯ ದೊಡ್ಡಕ್ಕ

ಆಗುಂಬೆಯ ಅಸ್ಮಿತೆಗಳಲ್ಲಿ ದೊಡ್ಡಮನೆಯ ಕಸ್ತೂರಕ್ಕ ಸಹ ಒಬ್ಬರು. ಆಗುಂಬೆಯ ಆ ದೊಡ್ಡ ಮನೆಗೆ ಬಂದರೆ ಅವರೆಲ್ಲರನ್ನೂ ಚೆನ್ನಾಗಿ ಉಪಚರಿಸಿ ಕಳುಹಿಸುತ್ತಿದ್ದುದು ಅವರೇ. ಅವರನ್ನು ನಾವೆಲ್ಲಾ ದೊಡ್ಡ ಮನೆ ದೊಡ್ಡಕ್ಕ ಎನ್ನುತ್ತಿದ್ದೆವು. ಅದೆಷ್ಟೇ ಜನ ಬಂದರೂ ಅಡುಗೆ ಮಾಡಿ ಬಡಿಸುತ್ತಿದ್ದರು. ಮಾಲ್ಗುಡಿ ಡೇಸ್‌ನ ಚಿತ್ರೀಕರಣ ನಡೆದಿದ್ದು ಇಲ್ಲೇ. ತಿಂಗಳುಗಳ ಕಾಲ ಅವರಿಗೆಲ್ಲಾ ಊಟ ತಿಂಡಿ ಮಾಡಿ ಹಾಕಿ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟು ತಮ್ಮ ಮನೆಯನ್ನೇ ಬಿಟ್ಟು ಕೊಟ್ಟರು. ʼಮಾಲ್ಗುಡಿʼ ಪ್ರಖ್ಯಾತವಾಯಿತು ಜೊತೆಗೆ ಇವರ ಮನೆಯೂ. ಕೆಲವರು ಈಗಲೂ ಇದಕ್ಕೆ ಮಾಲ್ಗುಡಿ ಮನೆ ಎಂದೂ ಕರೆಯುತ್ತಾರೆ ಎಂದು ದೊಡ್ಡಕ್ಕ ನೆನಪಿಸಿಕೊಳ್ಳುತ್ತಾರೆ.


ಆಗುಂಬೆಗೊಂದು ಅಡಿ ಬರೆಹ



ಆಗುಂಬೆ ಎಂದರೆ ನೂರಾರು ಹೆಸರುಗಳ ನೆನಪಿನ ಚಿತ್ರ ಶಾಲೆ. ಕೆಲವು ಸ್ಮೃತಿಯಲ್ಲಿ ಉಳಿಯುತ್ತದೆ. ಹೈರ್‌ ಪಿನ್‌ ತಿರುವು ದಾಟಿ ಗಡಿಗೆ ಅಡಿ ಇಡುತ್ತಿದ್ದಂತೆ ಬಲ ಗಡೆಗೆ ಸದಾ ನಗು ಮುಖ ಹೊತ್ತು ತನ್ನದೇ ಗೂಡಂಗಡಿಯಲಿ ಚಟ್ಟಂಬಡೆ ಕಾಯಿಸುವ ಪ್ರೇಮಾನಂದ ಪಡಿಯಾರ್‌ ಸಹ ಒಬ್ಬರು! ನಮ್ಮ ನಡುವೆ ಪಡಿಯಾರ್‌ ಮಾಮ್‌ ಎಂದೇ ಪ್ರಸಿದ್ದಿ. 

ಮಸಲಧಾರೆಗೆ ಬಿಸಿಬಿಸಿ ಅಂಬೊಡೆ ಮಾರಿ ಬದುಕಿದವರು. ಮಳೆ ಮಂಜಿನ ಧ್ಯಾನ ಮಾಡಿದವರು. ಮಳೆ, ಬಿಸಿಲು ಎಂದು ಬೆಚ್ಚದೆ ಬೆದರದೆ ಸದಾ ನಗುಮುಖದ ಸೇವೆಯನ್ನು ಮಾಡಿದ ಇವರೊಬ್ಬ ಅಪ್ಪಟ ಕಾಯಕ ಜೀವಿ. ಆಗುಂಬೆಯ ಗಡಿದಾಟಿದರೆ ಮೊದಲು ನೆನಪಾಗುವುದೇ ಪ್ರೇಮಾನಂದ ಪಡಿಯಾರ್  ಯಾನೆ ಪಡಿಯಾರ್ ಮಾಮ ಮತ್ತು ಅವರು ಮಾಡುತ್ತಿದ್ದ ರುಚಿ ರುಚಿ ಅಂಬೋಡೆ.

ಸದಾ ನಗುತ್ತಾ ನಗಿಸುತ್ತಾ, ಕಡಿಮೆ ದರದಲ್ಲಿ ಚಹ, ಚಟ್ಟಂಬಡೆ, ಇಡ್ಲಿಯನ್ನು ತನ್ನ ಸಣ್ಣ ಕ್ಯಾಂಟಿನ್‌ನಲ್ಲಿ ಮಾರುತಲಿದ್ದರು! ಇವರ ಚಟ್ಟಂಬಡೆಯ ರುಚಿ ಬಲ್ಲವರು ಚಟ್ಟಂಬಡೆಯ ಲಕ್ಷ್ಮಣ ರೇಖೆಯನ್ನು ದಾಟುತ್ತಿರಲಿಲ್ಲ. ಜೊತೆಗೊಂದು ಬಿಸಿ ಬಿಸಿ ಮಂಜಿನ ಚಹಾ. ಆಗುಂಬೆ ಎಂದರೆ ಪಡಿಯಾರ್‌ ಮಾಮ್‌ನ ಚಟ್ಟಂಬಡೆ ಎನ್ನುವಷ್ಟು. ಆಗುಂಬೆಯ ಜಿಯೋ ಟ್ಯಾಗ್! 

 ಸನಿಹದ ಕಾರ್ಕಳದವರಾದರೂ ೯೦ರ ದಶಕದಲ್ಲಿಯೇ ಇಲ್ಲಿಗೆ ಬಂದವರು. ಸೇವೆ ಎಂಬ ಹೆಸರಿನಲ್ಲಿಯೇ ಚಟ್ಟಂಬಡೆ ಮಾರುತ್ತ ತನ್ನ ಜೀವಮಾನವನ್ನು ಸವೆಸಿದವರು. ಇವರ ಮಕ್ಕಳೆಲ್ಲಾ ಈಗ ಇಂಜಿನಿಯರುಗಳಾಗಿದ್ದರೂ ಸದಾ ಜನರ ನಡುವೆಯೇ ಬದುಕಬೇಕೆಂಬ ಇವರ ಅದಮ್ಯ ಉತ್ಸಾಹವೇ ನನಗೆ ಸ್ಪೂರ್ತಿ. ಆಧ್ಯಾತ್ಮ, ದೇಶಭಕ್ತಿಯ ಅನೇಕ ಪುಸ್ತಕಗಳನ್ನು ಸಹ ತನ್ನ ಪುಟಾಣಿ ಕ್ಯಾಂಟಿನ್ ಒಳಗೆ ಇಟ್ಟುಕೊಂಡು ಸ್ಪೂರ್ತಿ ಪಡೆಯುತ್ತಾ ಬದುಕುತ್ತಿದ್ದರು. ನೂರಾರು ಓಡಾಟದ ನಂತರ ಇವರೊಂದಿಗಾದ ನನ್ನ ಅವಿನಾಭಾವ ಸಂಬಂಧ ಆಗುಂಬೆ ಹಾಗೂ ಇವರನ್ನು ಬೇರ್ಪಡಿಸಲಾಗದಷ್ಟು! ತಾನೂ ನಗುತ್ತಾ ತನ್ನೊಂದಿಗೆ ಇತರರನ್ನೂ ನಗಿಸುತ್ತಾ ಬದುಕುವ ಇತಂಹ ಒಬ್ಬ ಅಧ್ಯಾತ್ಮ ಜೀವಿ ಇಹದ ಬದುಕಲ್ಲಿ ನಾ ಕಂಡಿಲ್ಲ. ಇವರ ಆಶಯ ಮತ್ತು ಜೀವನ ನಮಗೆಲ್ಲಾ ಸ್ಪೂರ್ತಿ. ಕೊನೆಗಾಲದಲ್ಲಿ ಇವರ ಜೊತೆಗೆ ಮಾತನಾಡಲು ಸಾಧ್ಯವಾಗಿಲ್ಲ ಎಂಬುದೊಂದು ಸಣ್ಣ ಕೊರಗು ಸದಾ ನನ್ನ ಕಾಡುತ್ತಲೇ ಇದೆ. ಸೆಲ್ಪಿ ಇಲ್ಲದ ಕಾಲದಲ್ಲಿ ಇವರ ಜೊತೆಗೊಂದು ಫೋಟೊ ಸಾಧ್ಯವಾಗಿಲ್ಲವೆಂಬ ಬೇಸರ ಸದಾ ಕಾಡುತ್ತಿರುತ್ತದೆ. 

ಮತ್ತೆಂದೂ ಸಿಗದ ಮಸಾಲೆ ಅಂಬೊಡೆ 

  ಇಂದು ಬರುವೆನೆಂದು ಅಂದು ಹೊರಟ ಪ್ರೇಮಾನಂದ ಮತ್ತೆ ಆಗುಂಬೆಗೆ ಬರಲೇ ಇಲ್ಲ. ೨೦೧೫ರ ಜುಲೈ ತಿಂಗಳಿನಲ್ಲಿ ಡೆಂಗ್ಯೂವಿನಿಂದ ಮೃತರಾದರು. ಈಗೀಗ ಜಾಗತೀಕರಣ, ವ್ಯಾಪಾರೀಕರಣದ ಭರಾಟೆಯಲ್ಲಿ ಭಾವನೆಗಳು ಬೆಲೆಯೇ ಇಲ್ಲದ ಹಳೆಯ ಚಟ್ಟಂಬಡೆಯಂತಾಗಿದೆ. ನೀವೇನಂತೀರಿ?

  ನನ್ನಂತಹವರಿಗೆ ಸದಾ ಕಾಡುವ ಊರು. ಇಲ್ಲಿನ ಟ್ರೋಜನ್‌ ಹಕ್ಕಿ, ವಿಷಲಿಂಗ್‌ ಥ್ರಶ್‌ ನನ್ನನ್ನು ಇಲ್ಲಿಗೆಳೆಯುತ್ತವೆ. ಇಲ್ಲಿ ಸರಳವಾಗಿ ಬದುಕುವ ನೂರಾರು ಮಹನೀಯರು ಹೆಜ್ಜೆ ಮೂಡದಂತೆ ಅನಂತದಲಿ ಲೀನವಾಗುವ ಪರಿಗೆ ಬೆರಗಾಗಿದ್ದೇನೆ. ಎಂದು ಬರುವಿರೆಂದು ಮತ್ತೆ ಮತ್ತೆ ಕರೆಯುತ್ತಲೇ ಇದೆ ಅಲೆಮಾರಿಯ ಆಗುಂಬೆ.

          ಬರಹ-೨೦೧೫.



Thursday, July 9, 2026

ಬಲ ಉಳ್ಳವರ ಅಹೋಬಿಲಂ!

 


ನಾವು ಮೂವರು ಅಹೋಬಿಲಂಗೆ ಬಂದು ತಲುಪಿದ್ದೆ ಒಂದು ಅಚ್ಚರಿ. ಚೌಕಟ್ಟೇ ಇಲ್ಲದ ಒಂದು ಯೋಜನೆಯೊಳಗೆ ಅದು ಹೇಗೋ ಈ ದೇವಾಲಯ ತೂರಿಕೊಂಡಿತು. ಎಲ್ಲೋ ಓದಿದ ಪೇಪರ್‌ ತುಣುಕೊಂದರ ಸಹಾಯದಿಂದ ಆಂಧ್ರದ ಮೂಲೆಯೂರಿಗೆ ಪ್ರಯಾಣ ಬೆಳೆಸಿದೆವು. 

ಭವನಾಶಿನಿ ನದಿ ತಟದ ಅಹೋಬಿಲಂ -

 ಭರತ ಖಂಡದ ಯಾವ ಮೂಲೆಗೆ ಹೋದರೂ ನಿಮಗೆ ಒಂದೇ ಊರಿನಲ್ಲಿ 9 ನರಸಿಂಹ ದೇವಾಲಯಗಳು ಸಿಗಲಾರವು. ಅಂತಹ ಮಹಾ ವಿಚಿತ್ರ ಅಹೋಬಿಲಂ! ತೆಲುಗಿನಲ್ಲಿ ಬಿಲಂ ಎಂದರೆ ಗುಹೆ. ನಮ್ಮ ನಿಯಾನ್ ಕಣ್ಣುಗಳಲ್ಲಿ ಮಿಂಚಿದ ಪ್ರಶ್ನೆಗಳು ಹಲವು. ಒಂಭತ್ತು ದೇವಾಲಯಗಳನ್ನು ಒಂದೇ ಊರಿನಲ್ಲಿ ನಿರ್ಮಿಸುವ ಔಚಿತ್ಯವಾದರೂ ಏನು? ಅಚ್ಚರಿಯ ಅಹೋಬಿಲಂನ್ನು ಒಂದೇ ಗುಟುಕಿನಲಿ ನೋಡಿದ ನಮ್ಮ ಪಯಣದ ಮೆಲುಕು ಹಾಕೋಣ ಬನ್ನಿ. 

ಪೊಂಗಲ್‌ ಮುನ್ನುಡಿ!


 ಹೈದ್ರಾಬಾದಿನಿಂದ ಕಾರು ಬಾಡಿಗೆಗೆ ಹಿಡಿದು. ಸಿಕ್ಕ ಒಂದು ರೈಲು ಹತ್ತಿ ಆಂಧ್ರದ ನಂದ್ಯಾಲ ಜಿಲ್ಲೆಯ ಅಹೋಬಿಲಂಗೆ ಬೆಳ್ಳಂ ಬೆಳಿಗ್ಗೆ ಹೆಜ್ಜೆ ಇಟ್ಟೆವು. ಮುಸುಕು ಎಳೆದು ಮಲಗಿದ್ದ ಊರನ್ನು ನಮ್ಮ ಬಸ್ಸು ಎಬ್ಬಿಸಿತು. ಜೊತೆಗೆ ಮಹಾ ಧೂಳಿನ ನೆಬ್ಯೂಲಾ ಊರನ್ನು ಮುಚ್ಚಿತು. ನಮ್ಮ ಮೂಗನ್ನೂ. 

 ಊರಿಗೆ ಕಾಲಿಡುತ್ತಲೆ ಸಣ್ಣ ಲಾಡ್ಜು ಹಿಡಿದು ಪ್ರಾತಃವಿಧಿಗಳನ್ನು ಪೂರೈಸಿ ಬಳ್ಳಾರಿ ಭಟ್ಟರ ಹೋಟೆಲಿಗೆ ಲಗ್ಗೆ ಇಟ್ಟೆವು. ಭಟ್ಟರಿನ್ನು ಬಾಗಿಲು ತೆರೆದಿರಲಿಲ್ಲ. ಹೋಟೆಲ್‌ ತೆರೆಯುತ್ತಲೇ ಪೊಂಗಲ್‌ ಬಾರಿಸಿ ಭಟ್ಟರ ಕುಶಲೋಪರಿ ವಿಚಾರಿಸಿ ನರಸಿಂಹ ದೇವಾಲಯ ಭೇಟಿಗೆ ಹೊರಟು ಬಿಟ್ಟೆವು. 

ಕನ್ನಡ ನಾಡಿನ ಬಳ್ಳಾರಿಯಿಂದ ಬಂದ ಭಟ್ಟರ ತಂದೆ ಇಲ್ಲೇ ನೆಲೆಯೂರಿದವರು. ಅಂದಿನ ಅವರ ದುರ್ದು ಏನಿತ್ತೋ. ಸಣ್ಣದೊಂದು ಕಿರಿಯ ಪ್ರಾಥಮಿಕ ಶಾಲೆ ಬಿಟ್ಟರೇ ಬೇರೆ ಸೌಲಭ್ಯಗಳಿಲ್ಲ. ವ್ಯಾಪಾರವಾಗುತ್ತದೆ ಎಂಬ ಭರವಸೆ ಏನಿಲ್ಲ. ಯಾರೂ ಇಲ್ಲಿ ಉಳಿಯಲು ಮನಸ್ಸು ಮಾಡುವುದಿಲ್ಲ! ಅತ್ತ ಮಲೆನಾಡು ಅಲ್ಲದ ಇತ್ತ ಬಯಲು ಸೀಮೆಯೂ ಅಲ್ಲದ ಕಾಡ ನಡುವಿನ ಊರು. ದೂರದ ಬಾಗಲ ಕೋಟೆಯ ಇಬ್ಬರು ಇಲ್ಲಿ ಸಿಕ್ಕರು.  

 ಬದುಕಿನ ನಾಗಾಲೋಟಕ್ಕೆ ಬ್ರೇಕ್‌ ಬೇಕೆನಿಸಿದರೆ ಇಲ್ಲಿಗೆ ಸುಮ್ಮನೆ ಬನ್ನಿ! ಯಾವುದೋ ನಾಟಕದ ಪಾತ್ರಧಾರಿಗಳಂತೆ ಇಲ್ಲಿನವರು ನಿಮಗೆ ಕಾಣುತ್ತಾರೆ. ತಮ್ಮ ಉಬ್ಬಿದ ಹೊಟ್ಟೆ ಹೊತ್ತು ಯಮ ಸದೃಶಃ ಪರ್ವತವನ್ನು ಏರಲಾಗದೇ ಬೆಟ್ಟವೇರುವವರು. 



ಜೀವನೋಪಾಯಕ್ಕೆ ಇಲ್ಲಿ ಹಲವು ವೇಷ ತೊಟ್ಟವರು ಇಲ್ಲಿ ಕಾಣಸಿಗುತ್ತಾರೆ. ದಾರಿಗುಂಟ ಚಾಟಿಯನು ಮೈಗೆ ನಗುತ ಬಾರಿಸಿಕೊಂಡು ಜೀವನ ನಿರ್ವಹಿಸುವ ನಿರ್ಮೋಹಿ ಅಮಾಯಕರು. ಕಿಲೋಮೀಟರ್‌ ಆಚೆಗೂ ಕೇಳಿಸುವ ಚಾಟಿ ಶಬ್ದ. ಇವರ ಕುರಿತೊಂದು ಮಹಾ ಮರುಕ ಹುಟ್ಟುವಂತೆ ಮಾಡುತ್ತದೆ. ಬಿಸಿಲ ಜಗುಲಿಗೆ ಕೂತು ಬೇಡುವವರು. ಭಕ್ತಾದಿಗಳಿಗೆ ಉಣ್ಣಲು ಬನ್ನಿ ಎನ್ನುವವರು. ಒಂದೇ ಎರಡೇ. ಎಷ್ಟೇ ಇದ್ದರೂ ಮತ್ತಷ್ಟು ಬೇಕೆನ್ನುವ ನಮ್ಮನ್ನು ಕಂಡರೆ ಅವರಿಗೂ ಹಾಗೇ ಅನಿಸಬಹುದೇ ಗೊತ್ತಿಲ್ಲ. ಅಹೋಬಿಲಂ ಎಂಬ ಮಾಯಾಲೋಕದಲ್ಲಿ ಕಳೆಯುವ ಇನ್ನೆಷ್ಟು ಜನರಿದ್ದಾರೋ ಗೊತ್ತಿಲ್ಲ.

ಅಚ್ಚರಿಯ ಅಹೋಬಿಲಂ.



ಈ ಒಂಭತ್ತು ದೇವಾಲಯಗಳು ನಲ್ಲಮಾಲಾ ಕಾಡೊಳಗೆ ಅವಿತಿದೆ ಎನ್ನುವುದೇ ಅಚ್ಚರಿ. ಕಾಡೊಳಗೆ ನಿರ್ಮಿಸುವ ದುರ್ದು ಏನಿತ್ತೊ. ಕಾಡ ಕಟ್ಟೆಯಲ್ಲಿ ಕಟ್ಟಿದ ಅಹೋಬಿಲಂನಲ್ಲಿ ಎರಡು ದೇವಾಲಯಗಳು ಕಾಡಿನಂಚಿನಲ್ಲಿವೆ. ಹೆಚ್ಚಿನ ಎಲ್ಲಾ ದೇವಾಲಯ 14 ಮತ್ತು 15 ನೆಯ ಶತಮಾನದ ಅಂಚಿನಲ್ಲಿ ವಿಜಯನಗರದ ಕಾಲದಲಿ ನಿರ್ಮಿಸಿದಂತವು. ನಾಲ್ಕು ದೇವಾಲಯ ಬೆಟ್ಟದ ಬುಡದಲ್ಲೂ ನಾಲ್ಕು ಬೆಟ್ಟದ ಮೇಲೆ ಹಾಗೂ ಒಂದು ಕಾಡೊಳಗೆ ಅವಿತಿದೆ. ಯೋಗಾನಂದ ಚತ್ರವಟ ನರಸಿಂಹ ಕಾಡಂಚಿನಲ್ಲಿದೆ.



ಯೋಗಾನಂದ ನರಸಿಂಹ ಶನಿಯನ್ನು ಆಳುತ್ತಾನೆಂದು ಪ್ರತೀತಿ ಇದೆ. ಇಲ್ಲಿನ ನರಸಿಂಹ ದೇವರನ್ನು ಅಹೋಬಾಲ ಎಂದೂ ಕರೆಯುತ್ತಾರೆ. ಅಂದರೆ ಮಹಾ ಶಕ್ತಿ ಶಾಲಿ ಎಂದು. ಯೋಗಾನಂದ ನರಸಿಂಹ ಯೋಗಾಸನದಲ್ಲಿದ್ದಾನೆ.


ಚತುರ್ವಾತ ನರಸಿಂಹ ಹಾಹಾ ಮತ್ತು ಹೋ ಹೋ ಎಂಬಿಬ್ಬರು ಗಂಧರ್ವರು ನರಸಿಂಹನಿಗೆ ಸಂಗೀತ ಸೇವೆ ಮಾಡಿ ಖುಷಿ ಪಡಿಸಿದರು. ಆ ಸಲುವಾಗಿಯೇ ಇಲ್ಲಿನ ನರಸಿಂಹನಲ್ಲಿ ಸಂಗೀತ ಮತ್ತು ಕಲೆಯ ಆರಾಧಕರು ಇಲ್ಲಿ ಬೇಡಿಕೊಂಡರೆ ಅವರಿಗೆ ಕಲೆ ಸಿದ್ಧಿಸುತ್ತದೆ ಎಂಬ ಪ್ರತೀತಿಯೂ ಇದೆ.

ಕೆಳಗಿನ ಎರಡು ದೇವಾಲಯ ದರ್ಶಿಸಿ ಮೇಲಿನ ದೇವಾಲಯ ದರ್ಶಿಸುವ ಹೊತ್ತು. ಇದೊಂದು ಅಚ್ಚರಿಯ ಪಯಣ! ಕಾಡು ತನ್ನ ಬಾಹು ಕವಚಿದ ಏಳು ದೇವಾಲಯಗಳ ತೋರಲೊಬ್ಬ ಕನ್ನಡ ಬಲ್ಲ ಗೈಡ್‌ಗಾಗಿ ತಡಕಾಡಿ ಗೆದ್ದೆವು. ಆತನೋ ನಮಗೆ ಮೂರು ಸಾವಿರಕ್ಕೆ ಬೇಡಿಕೆ ಇಟ್ಟ! ಆತನ ಬ್ರಹ್ಮಾಂಡ ಕನ್ನಡ ಪಾಂಡಿತ್ಯಕ್ಕೆ ಮೂರು ಸಾವಿರ ಬಹಳ ಕಡಿಮೆ!! ಹೊಕ್ಕ ದಾರಿ ಅಲ್ಲದೆ ಹೊರ ಬರುವ ಬೇರೊಂದು ದಾರಿ ಇರುವುದರಿಂದ ಈತನನ್ನೇ ಆಯ್ಕೆ ಮಾಡಿ ಕೊಂಡೆವು. ದಾರಿಯಾದರೂ ತೋರು ರಾಘವೇಂದ್ರನೇ ಎನ್ನುತ್ತ ಪುಟ್ಟ ಮಕ್ಕಳಂತೆ ಅವನ ಹಿಂದೆ ಹೆಜ್ಜೆ ಇಟ್ಟೆವು.

ಬೃಹತ್‌ ಮರಳು ಶಿಲೆಯೊಂದು ನಿಮ್ಮನ್ನು ಕೆಳಗಿನಿಂದಲೇ ಕರೆಯುತ್ತದೆ. ಬಹೃತ್‌ ಶಿಲೆಯ ಜಟೆಯಿಂದ ಧುಮುಕುವ ನೀರ ಹನಿಗಳ ಪ್ರೋಕ್ಷಣೆಗೈದು ದೇವಾಲಯ ಪ್ರವೇಶಿಸಬೇಕಾಗುವುದು ಇಲ್ಲಿನ ವಿಶೇಷ. ಮೂರು ಜಲಕನ್ನಿಕೆಯರು ನಿಮ್ಮ ಬರುವಿಕೆಗಾಗಿ ಕಾಯುವರು. ಬನ್ನಿ ಹಾಗೆ ಮುಂದೆ ಹೋಗೋಣ. 

ಯಗುವಾ ಅಹೋಬಿಲ ನರಸಿಂಹ-



ಭವನಾಶಿನಿ ನದಿ ದಡದ ನರಸಿಂಹ ಸ್ವಯಂ ಭೂ. ಅಂದರೆ ಉದ್ಭವ ನರಸಿಂಹ. ಇಲ್ಲಿ ಹತ್ತಾರು ಪೇರಳೆ ನಮ್ಮ ಚೀಲ ಸೇರಿದವು. ಭಕ್ತರು ಬೆಳಗಿದ ನೂರಾರು ಹಣತೆ ದೇವಾಲಯದೆದುರು ಪ್ರಜ್ವಲಿಸುತಲಿತ್ತು. ಯಾರೋ ಮಹಾಶಯನೊಬ್ಬ ನಮ್ಮ ಹಣೆಗೆ ನಾಮವೆಳೆದ ಸುಮ್ಮನಿದ್ದು ಎಳೆಸಿಕೊಂಡೆವು! ಬೆಟ್ಟವೇರಲು ಮೂರನೆ ಕಾಲಾಗಿ ಒಂದು ಕೋಲು ಕೊಟ್ಟರು ಬರೇ ಐದು ರೂಪಾಯಿಗೆ. ಇಸ್ಕೊಂಡೆವು. ಯಾರಿಗೆ ಹೊಡೆಯಲೋ ಗೊತ್ತಿಲ್ಲ. 

ಬೃಹತ್‌ ಪರ್ವತದ ಬುಡದಲ್ಲಿ ದೇವಾಲಯವಿದೆ. ಗಡಿಬಿಡಿಯಲ್ಲಿ ದೇವಾಲಯ ದರ್ಶನಕ್ಕೆ ಹೊರಟು ನಿಂತೆವು. ಸುಖಾಸೀನನಾದ ನರಸಿಂಹ ಹಿರಣ್ಯ ಕಶುಪುವಿನ ಎದೆ ಬಗೆಯುತ್ತಿದ್ದಾನೆ. ಇನ್ನೆರಡು ಕೈಗಳಿಂದ ಹಿರಣ್ಯಕಶುಪುವಿನ ಕಾಲು ತಲೆ ಹಿಡಿದು ಉಗ್ರರೂಪಿಯಾಗಿದ್ದಾನೆ. ಬಲ ತುದಿಯಲಿ ಅಬಲಾನಾದ ಪ್ರಹ್ಲಾದನು ಕೈ ಮುಗಿಯುವಂತೆ ಚಿತ್ರಿಸಿದ್ದಾನೆ ಶಿಲ್ಪಿ. ಯಗುವಾ ನರಸಿಂಹ ದರ್ಶನ ಮುಗಿಸಿ ಹಲಗೆಯ ಸೇತುವೆಯಲ್ಲಿ ಭವನಾಶಿನಿಯನ್ನು ದಾಟಿ ಹೊಸ ಲೋಕಕ್ಕೆ ಕಾಲಿಟ್ಟೆವು. 


ಕಾಡು ನಮ್ಮೊಳಗೋ ನಾವೇ ಕಾಡಿನೊಳಗೋ ಎಂಬಂತೆ ಕಾಡಿಗೆ ಕಾಲಿಟ್ಟೆವು. ಚಿತ್ರ ವಿಚಿತ್ರವಾಗಿ ಪ್ರಕೃತಿಯ ನಮ್ಮೆದುರು ತನ್ನ ಭವ್ಯತೆಯನ್ನು ತೋರುತಲಿತ್ತು. ಮಳೆಗಾಲದಲ್ಲಿ ಮೈದುಂಬಿ ಹರಿವ ಭವನಾಶಿನಿ ಹೊಳೆ ದಾಟಲು ಹಲವು ಕಡೆ ಹಗ್ಗ ಹಾಕಲಾಗಿತ್ತು. ಮಳೆಗಾಲದ ಮೂರು ತಿಂಗಳು ಅಸಾಧ್ಯ ವೇಗದಿಂದ ಹರಿವ ಇವಳನ್ನು ಹರಿಯುವುದು ಅಸಾಧ್ಯ. ಯಗುವಾ ನರಸಿಂಹ ದೇವಾಲಯದ ಸನಿಹವಂತು 6-7 ಅಡಿ ನೀರು ಧುಮ್ಮಿಕ್ಕುತ್ತದೆ. ಅಹೋಬಿಲಂ ಜಲಪಾತ ಮತ್ತು ಉಗ್ರ ಸ್ತಂಭ ಕಾಣಿಸುವ ಬ್ರಿಡ್ಜ್‌ ಮೇಲೆ ನಿಂತೆವು. ನಾವು ಗುರಿಯ ಸನಿಹವೆಂದು ಕೊಂಡೆವು. ನೀವಿನ್ನೂ 450 ಮೆಟ್ಟಿಲು ಏರುವುದಿದೆ ಎಂದು ಹೇಳಿ ಗೈಡ್‌ ನಮ್ಮನ್ನು ಗಾಬರಿ ಬೀಳಿಸಿದ. ಉಗ್ರ ಸ್ತಂಭದ ಸನಿಹದಲ್ಲೇ ಜ್ವಾಲಾ ನರಸಿಂಹ ದೇವಾಲಯವಿದೆ. ಇಲ್ಲಿಂದ ಮುಂದೆ ಏರುವುದೇ ಅತಿ ಕಠಿಣ ಹಾದಿ. ಉಗ್ರ ಸ್ತಂಭದ ಬಳಿಯ ಅಹೋ ಬಿಲಂ ಜಲಪಾತ ಅಂದು ತನ್ನ ಉಗ್ರ ರೂಪ ತೊರೆದು ಶಾಂತವಾಗಿತ್ತು.

ನರಸಿಂಹ ಜಯಂತಿ ಮತ್ತು ಸ್ವಾತಿ ನಕ್ಷತ್ರ!

ಸ್ವಾತಿ ನಕ್ಷತ್ರದಂದೇ ನರಸಿಂಹ ಸ್ವಾಮಿಯ ಜನ್ಮ ದಿನ. ಬೆಳಗಾವಿ ಬಾಗಲಕೋಟೆಯ ಹತ್ತಾರು ಭಕ್ತರು ಅಂದು ದರ್ಶನಕ್ಕೆ ಬಂದಿದ್ದರು. ನೀವು ಪುಣ್ಯವಂತರು, ಇಂದು ನವ ನರಸಿಂಹನ ದರ್ಶನ ಮಾಡಿದವರಿಗೆ ಮೋಕ್ಷ ಪ್ರಾಪ್ತಿ ಎಂದ ನಮ್ಮ ಗೈಡ್.‌ ನಿನ್ನೊಂದಿಗೆ ನಡೆಯುವ ಎಲ್ಲರಿಗೂ ಮೋಕ್ಷ ಖಾತರಿ ಮರಾಯ ಎಂದು ಅವನನ್ನು ಚೇಡಿಸುತ್ತ ಹೆಜ್ಜೆ ಹಾಕಿದೆವು. ಉಗ್ರ ಸ್ತಂಭದಿಂದ ಧುಮುಕುವ ನೀರಲ್ಲಿ ಅಭಿಶೇಕ ಮಾಡಿಸಿಕೊಂಡು ಬಲ ಭಾಗದ ಕೆಂಪು ಕೊಳವನ್ನು ನೋಡುತ್ತಾ ಜ್ವಾಲಾ ನರಸಿಂಹನ ಸೇರಿಕೊಂಡೆವು. 



ಕೆಂಪು ಆಲ್ಗೆ ತುಂಬಿದ ಈ ಕೊಳವನ್ನು ಹಿರಣ್ಯ ಕಶುಪುವಿನ ರಕ್ತ ತೊಳೆದ ಕೊಳವೆಂದು ಜನ ಈಗಲೂ ನಂಬುತ್ತಾರೆ. ಜ್ವಾಲಾ ನರಸಿಂಹ ದೇವಾಲಯದ ಹಿಂದೆ 80 ಡಿಗ್ರಿ ಕೋನದಲ್ಲಿದ್ದ ದಾರಿಯಲ್ಲಿ ಕೇವಲ ಹಗ್ಗದ ಸಹಾದಿಂದ ಏರಬೇಕು. ಕೈ ಕಾಲುಗಳಲ್ಲಿ ಕಸುವಿಲ್ಲದ ಕಾರಣ ಕೈ ಬಿಟ್ಟೆವು. 




ಮೈ ತೋಯಿಸಿಕೊಂಡ ನಿಮಗೆ ಇಲ್ಲಿ ಕತೆಗಳು ನಿಮ್ಮ ಮನಸ್ಸು ತೋಯಿಸುವವು. ಪ್ರಕೃತಿ ಮಡಿಲಲ್ಲಿ ಇಂತಹದೊಂದು ಅಚ್ಚರಿಯ ತಾಣವ ಹುಡುಕಿ ತೆಗೆದು ಅದಕೊಂದು ಕತೆಗಳನ್ನು ಜೋಡಿಸಿದ ಮಹಾ ಪುರುಷನಿಗೆ ಶರಣು. ದೇಶ ಕಾಲಾತೀತದಲ್ಲಿ ಹಬ್ಬಿ ಹರಡಿದ ನೂರಾರು ಕತೆಗಳು ನಿಜಕ್ಕೂ ನಿಮ್ಮನ್ನು ಕಾಡುವವು. 

ಕಾಡೊಳಗಿನ ಅಚ್ಚರಿ ಮೂಡಿಸುವ ಕಾಡುವ ಕತೆಗಳು 

ಚುಂಚೂ ಬುಡಕಟ್ಟು ಮತ್ತು ನರಸಿಂಹ-


ಇಲ್ಲಿನ ಚುಂಚೂ ಆದಿವಾಸಿಗಳು ನರಸಿಂಹನನ್ನು ತಮ್ಮ ಅಳಿಯನ್ನನ್ನಾಗಿಸಿದ ಪರಿಗೆ ಅಚ್ಚರಿಗೊಂಡೆ. ನರಸಿಂಹನಿಗೆ ಆದಿವಾಸಿ ಲಕ್ಷ್ಮೀಯನ್ನು ಮದುವೆ ಮಾಡಿಸಿ ಇವರು ತಮ್ಮವನನ್ನಾಗಿ ಮಾಡಿ ಕೊಂಡಿದ್ದಾರೆ! ಹಾಗಾಗಿ ಹೋಗಿ ಬರುವವರಿಗಾಗಿ ಇಲ್ಲಿನ ಬುಡಕಟ್ಟು ಜನರು ದಾರಿ ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಕಾದು ಕೂರುವುದು ನಮಗಂತೂ ಅಚ್ಚರಿ. ಸಾಕ್ಷಾತ್‌ ದೈವ ಸಂಭೂತರಾದ ಸರಳ ಜನ! ಇವರ ಚೇತನವೇ ಒಂದು ಒಗಟು. ನಮ್ಮ ದಾರಿಯಲ್ಲೊಬ್ಬಳೂ ನರಸಿಂಹ ಲಕ್ಷೀಗಾಗಿ ರಂಗೋಲಿ ಹಾಕಿ ಕುಳಿತಿದ್ದಳು. ಭಕ್ತರು ನೀಡಿದ ಅಷ್ಟೋ ಇಷ್ಟೋ ಇವರಿಗೆ ಆದಾಯ! ಅಬ್ಬಬ್ಬಾ ಎಂದರೂ ೨೦೦ ದಾಟದ ಸಂಪಾದನೆ. ಮತ್ತು ಮಗದೊಂದು ಯೋಚಿಸದ ಯೋಜಿಸದ ತೃಪ್ತ ಜನ.

ಮಾಲೋಲ ನರಸಿಂಹನೆಡೆಗೆ….

ಅಹೋಬಿಲಂನ ಜ್ವಾಲಾ ನರಸಿಂಹನಿಗೆ ಶರಣು ಬಂದು ನಿಧ ನಿಧಾನಕ್ಕೆ ಒಂದೊಂದು ಹೆಜ್ಜೆ ಇಟ್ಟು ನೀರ ಜೋಕಾಲಿಯಲಿ ಮಿಂದು ಕ್ಯಾಮರಕ್ಕೂ ಎರಡು ಹನಿ ಮೀಯಿಸಿ ನಮ್ಮ ಗೈಡ್‌ ಜೊತೆ ಹೊರಟು ನಿಂತೆವು.

ಕ್ಷೀಣ ಜಲಪಾತವೊಂದು ನನ್ನ ಕಣ್ಣವೆಯಲ್ಲಿ ತುಂಬಿ ಪೂರ್ಣ ಸೃಷ್ಟಿಯ ಸೊಬಗನ್ನು ಹೆಚ್ಚಿಸುವ, ಕತೆಗಳ ಸೃಷ್ಟಿಸುವ ಪರಿಗೆ ಚಕಿತಗೊಂಡಿರುವೆ.

ಇಲ್ಲಿಂದ ಹೊರಟು ಮಾಲೋಲ ನರಸಿಂಹನೆಡೆಗೆ ಹೆಜ್ಜೆ ಹಾಕಿದೆವು. ಹಿರಣ್ಯ ಕಶಪುವಿನ ಸಂಹರಿಸಿ ಕುಪಿತಗೊಂಡ ಆತನನ್ನು ಸಂತೈಸಲು ಆದಿವಾಸಿ ಲಕ್ಷ್ಮೀ ಎಂಬ ಮಹಿಳೆಯನ್ನು ಬ್ರಹ್ಮ ಕಳುಹುತ್ತಾನೆ. ಆಗಲೇ ಶಾಂತ ಸ್ವರೂಪಿಯಾಗಿ ಜ್ವಾಲಾ ನರಸಿಂಹ ಮಾಲೋಲ ಸ್ವರೂಪಿಯಾಗಿ ನೆಲೆ ನಿಲ್ಲುತ್ತಾನೆ. ದೇವರ ಸಿಟ್ಟಿಗೆ ಕತೆಯ ಒಗ್ಗರಣೆ ಅನಿಸಿತು. ಅದೇ ಹಾದಿಯಲಿ ಕೆಳಗಿಳಿಯುತ್ತಾ ಬಂದಾಗ ವರಾಹ ರೂಪಿಯಾಗಿ ನರಸಿಂಹ ನೆಲೆ ನಿಂತಿದ್ದಾನೆ. ಭೂ ಭಾರವನ್ನು ಎತ್ತಿದ್ದಾನೆ. ಕತೆಗಳ ಸಿಕ್ಕು ಬಿಡಿಸಲು ಹೋಗದೇ ಸುಮ್ಮನೆ ದರ್ಶನಗೈದು ಬಂದೆವು. 

ಮೇಲೇರುವ ಹಾದಿಯೊಂದು ವಾಪಾಸಾಗುವ ಹಾದಿ ಇನ್ನೊಂದು. ಪ್ರತಿ ಕಲ್ಲಿಗೂ ಇಲ್ಲೊಂದು ಸುಂದರ ಕತೆ ಹೆಣೆಯುವ ಚಾತುರ್ಯ ಇದೆ. ಕತೆಗಳನ್ನು ಕೇಳುತ್ತಾ ಕೇಳುತ್ತಾ ದಾರಿ ಸಾಗಿದ್ದೆ ತಿಳೀಲಿಲ್ಲ.

14 ಕಿಲೋ ಮೀಟರ್‌ ದೂರದ ಪವನ ನರಸಿಂಹ ದರುಶನಕ್ಕೆ ಅಹೋಬಿಲಂ ವೃತ್ತಕ್ಕೆ ಬಂದು ಜೀಪು ಹತ್ತಿ ಹೊರಟೆವು. ಕಾಡೊಳಗೆ ಜೀಪು ಸರ್ಕಸ್ ಮಾಡುತ್ತಾ ನರಸಿಂಹ ದೇವಾಲಯ ತಲುಪಿತು. ಮುಚ್ಚಿದ ಬಾಗಿಲ ನಡುವೆ ಹಣಕಿ ಹಾಕಿ ದರ್ಶನ ಮುಗಿಸಿ ಹಿಂದಿರುಗಿದೆವು. ಹೀಗೆ ಒಂಭತ್ತು ದೇವಾಲಯ ದರುಶನವಾದರೂ ನೋಡಿದ ಸಂಪೂರ್ಣತೆ ನನಗೆ ದಕ್ಕಲಿಲ್ಲ. ಇನ್ನೂ ನೋಡಬೇಕು ಅಲ್ಲೇ ಇನ್ನೆರಡು ದಿನವಿರಬೇಕೆಂಬ ಹಂಬಲ. ಆದರೆ ಕಾಲ ಪುರುಷನೆದುರು ನಾವು ಮಂಡಿ ಊರಲೇ ಬೇಕಲ್ಲ. ಹೊರಡಲೇ ಬೇಕಾಯಿತು.

ಮೇಲೇರಿದ ಜಾಗದ ಸನಿಹದಲ್ಲೇ ವಿಶಿಷ್ಟ ವನ ಭೋಜನವೊಂದು ನಮಗಾಗಿ ಕಾಯುತಲಿತ್ತು. ಅಣಬೆ ಗಸಿ ಮತ್ತು ಕಡಲೆ ಬೇಳೆ ಪಾಯಸವನ್ನು ಹಿತಮಿತವಾಗಿ ಸೇವಿಸಿ ಗಂಡೀಕೋಟದತ್ತ ಓಟ ಕಿತ್ತೆವು .


ವಾರೆ ನೋಟ

ಅಲೆಮಾರಿಯ ಆಗುಂಬೆ ಹಾಗೂ ಟ್ರೋಗನ್

  ‌ಆಗುಂಬೆ ಎಂಬ ಲಾಂಚ್‌ ಪ್ಯಾಡ್‌  ನಾನಿದನ್ನು ಮಲೆನಾಡಿನ ಹೆಬ್ಬಾಗಿಲೆಂದೇ ಕರೆಯುವೆ. ಯಾವುದೇ ಊರಿಗೆ ಹೋಗಬೇಕಾದರೂ ಉಡುಪಿಯ ನೀವು ಆಗುಂಬೆಯ ದಾಟಿಯೇ ಹೋಗಬೇಕು. ಮೂಡಿಗೆರೆ...