Showing posts with label ಲೇಖನ. Show all posts
Showing posts with label ಲೇಖನ. Show all posts

Thursday, July 9, 2026

ಬಲ ಉಳ್ಳವರ ಅಹೋಬಿಲಂ!

 


ನಾವು ಮೂವರು ಅಹೋಬಿಲಂಗೆ ಬಂದು ತಲುಪಿದ್ದೆ ಒಂದು ಅಚ್ಚರಿ. ಚೌಕಟ್ಟೇ ಇಲ್ಲದ ಒಂದು ಯೋಜನೆಯೊಳಗೆ ಅದು ಹೇಗೋ ಈ ದೇವಾಲಯ ತೂರಿಕೊಂಡಿತು. ಎಲ್ಲೋ ಓದಿದ ಪೇಪರ್‌ ತುಣುಕೊಂದರ ಸಹಾಯದಿಂದ ಆಂಧ್ರದ ಮೂಲೆಯೂರಿಗೆ ಪ್ರಯಾಣ ಬೆಳೆಸಿದೆವು. 

ಭವನಾಶಿನಿ ನದಿ ತಟದ ಅಹೋಬಿಲಂ -

 ಭರತ ಖಂಡದ ಯಾವ ಮೂಲೆಗೆ ಹೋದರೂ ನಿಮಗೆ ಒಂದೇ ಊರಿನಲ್ಲಿ 9 ನರಸಿಂಹ ದೇವಾಲಯಗಳು ಸಿಗಲಾರವು. ಅಂತಹ ಮಹಾ ವಿಚಿತ್ರ ಅಹೋಬಿಲಂ! ತೆಲುಗಿನಲ್ಲಿ ಬಿಲಂ ಎಂದರೆ ಗುಹೆ. ನಮ್ಮ ನಿಯಾನ್ ಕಣ್ಣುಗಳಲ್ಲಿ ಮಿಂಚಿದ ಪ್ರಶ್ನೆಗಳು ಹಲವು. ಒಂಭತ್ತು ದೇವಾಲಯಗಳನ್ನು ಒಂದೇ ಊರಿನಲ್ಲಿ ನಿರ್ಮಿಸುವ ಔಚಿತ್ಯವಾದರೂ ಏನು? ಅಚ್ಚರಿಯ ಅಹೋಬಿಲಂನ್ನು ಒಂದೇ ಗುಟುಕಿನಲಿ ನೋಡಿದ ನಮ್ಮ ಪಯಣದ ಮೆಲುಕು ಹಾಕೋಣ ಬನ್ನಿ. 

ಪೊಂಗಲ್‌ ಮುನ್ನುಡಿ!


 ಹೈದ್ರಾಬಾದಿನಿಂದ ಕಾರು ಬಾಡಿಗೆಗೆ ಹಿಡಿದು. ಸಿಕ್ಕ ಒಂದು ರೈಲು ಹತ್ತಿ ಆಂಧ್ರದ ನಂದ್ಯಾಲ ಜಿಲ್ಲೆಯ ಅಹೋಬಿಲಂಗೆ ಬೆಳ್ಳಂ ಬೆಳಿಗ್ಗೆ ಹೆಜ್ಜೆ ಇಟ್ಟೆವು. ಮುಸುಕು ಎಳೆದು ಮಲಗಿದ್ದ ಊರನ್ನು ನಮ್ಮ ಬಸ್ಸು ಎಬ್ಬಿಸಿತು. ಜೊತೆಗೆ ಮಹಾ ಧೂಳಿನ ನೆಬ್ಯೂಲಾ ಊರನ್ನು ಮುಚ್ಚಿತು. ನಮ್ಮ ಮೂಗನ್ನೂ. 

 ಊರಿಗೆ ಕಾಲಿಡುತ್ತಲೆ ಸಣ್ಣ ಲಾಡ್ಜು ಹಿಡಿದು ಪ್ರಾತಃವಿಧಿಗಳನ್ನು ಪೂರೈಸಿ ಬಳ್ಳಾರಿ ಭಟ್ಟರ ಹೋಟೆಲಿಗೆ ಲಗ್ಗೆ ಇಟ್ಟೆವು. ಭಟ್ಟರಿನ್ನು ಬಾಗಿಲು ತೆರೆದಿರಲಿಲ್ಲ. ಹೋಟೆಲ್‌ ತೆರೆಯುತ್ತಲೇ ಪೊಂಗಲ್‌ ಬಾರಿಸಿ ಭಟ್ಟರ ಕುಶಲೋಪರಿ ವಿಚಾರಿಸಿ ನರಸಿಂಹ ದೇವಾಲಯ ಭೇಟಿಗೆ ಹೊರಟು ಬಿಟ್ಟೆವು. 

ಕನ್ನಡ ನಾಡಿನ ಬಳ್ಳಾರಿಯಿಂದ ಬಂದ ಭಟ್ಟರ ತಂದೆ ಇಲ್ಲೇ ನೆಲೆಯೂರಿದವರು. ಅಂದಿನ ಅವರ ದುರ್ದು ಏನಿತ್ತೋ. ಸಣ್ಣದೊಂದು ಕಿರಿಯ ಪ್ರಾಥಮಿಕ ಶಾಲೆ ಬಿಟ್ಟರೇ ಬೇರೆ ಸೌಲಭ್ಯಗಳಿಲ್ಲ. ವ್ಯಾಪಾರವಾಗುತ್ತದೆ ಎಂಬ ಭರವಸೆ ಏನಿಲ್ಲ. ಯಾರೂ ಇಲ್ಲಿ ಉಳಿಯಲು ಮನಸ್ಸು ಮಾಡುವುದಿಲ್ಲ! ಅತ್ತ ಮಲೆನಾಡು ಅಲ್ಲದ ಇತ್ತ ಬಯಲು ಸೀಮೆಯೂ ಅಲ್ಲದ ಕಾಡ ನಡುವಿನ ಊರು. ದೂರದ ಬಾಗಲ ಕೋಟೆಯ ಇಬ್ಬರು ಇಲ್ಲಿ ಸಿಕ್ಕರು.  

 ಬದುಕಿನ ನಾಗಾಲೋಟಕ್ಕೆ ಬ್ರೇಕ್‌ ಬೇಕೆನಿಸಿದರೆ ಇಲ್ಲಿಗೆ ಸುಮ್ಮನೆ ಬನ್ನಿ! ಯಾವುದೋ ನಾಟಕದ ಪಾತ್ರಧಾರಿಗಳಂತೆ ಇಲ್ಲಿನವರು ನಿಮಗೆ ಕಾಣುತ್ತಾರೆ. ತಮ್ಮ ಉಬ್ಬಿದ ಹೊಟ್ಟೆ ಹೊತ್ತು ಯಮ ಸದೃಶಃ ಪರ್ವತವನ್ನು ಏರಲಾಗದೇ ಬೆಟ್ಟವೇರುವವರು. 



ಜೀವನೋಪಾಯಕ್ಕೆ ಇಲ್ಲಿ ಹಲವು ವೇಷ ತೊಟ್ಟವರು ಇಲ್ಲಿ ಕಾಣಸಿಗುತ್ತಾರೆ. ದಾರಿಗುಂಟ ಚಾಟಿಯನು ಮೈಗೆ ನಗುತ ಬಾರಿಸಿಕೊಂಡು ಜೀವನ ನಿರ್ವಹಿಸುವ ನಿರ್ಮೋಹಿ ಅಮಾಯಕರು. ಕಿಲೋಮೀಟರ್‌ ಆಚೆಗೂ ಕೇಳಿಸುವ ಚಾಟಿ ಶಬ್ದ. ಇವರ ಕುರಿತೊಂದು ಮಹಾ ಮರುಕ ಹುಟ್ಟುವಂತೆ ಮಾಡುತ್ತದೆ. ಬಿಸಿಲ ಜಗುಲಿಗೆ ಕೂತು ಬೇಡುವವರು. ಭಕ್ತಾದಿಗಳಿಗೆ ಉಣ್ಣಲು ಬನ್ನಿ ಎನ್ನುವವರು. ಒಂದೇ ಎರಡೇ. ಎಷ್ಟೇ ಇದ್ದರೂ ಮತ್ತಷ್ಟು ಬೇಕೆನ್ನುವ ನಮ್ಮನ್ನು ಕಂಡರೆ ಅವರಿಗೂ ಹಾಗೇ ಅನಿಸಬಹುದೇ ಗೊತ್ತಿಲ್ಲ. ಅಹೋಬಿಲಂ ಎಂಬ ಮಾಯಾಲೋಕದಲ್ಲಿ ಕಳೆಯುವ ಇನ್ನೆಷ್ಟು ಜನರಿದ್ದಾರೋ ಗೊತ್ತಿಲ್ಲ.

ಅಚ್ಚರಿಯ ಅಹೋಬಿಲಂ.



ಈ ಒಂಭತ್ತು ದೇವಾಲಯಗಳು ನಲ್ಲಮಾಲಾ ಕಾಡೊಳಗೆ ಅವಿತಿದೆ ಎನ್ನುವುದೇ ಅಚ್ಚರಿ. ಕಾಡೊಳಗೆ ನಿರ್ಮಿಸುವ ದುರ್ದು ಏನಿತ್ತೊ. ಕಾಡ ಕಟ್ಟೆಯಲ್ಲಿ ಕಟ್ಟಿದ ಅಹೋಬಿಲಂನಲ್ಲಿ ಎರಡು ದೇವಾಲಯಗಳು ಕಾಡಿನಂಚಿನಲ್ಲಿವೆ. ಹೆಚ್ಚಿನ ಎಲ್ಲಾ ದೇವಾಲಯ 14 ಮತ್ತು 15 ನೆಯ ಶತಮಾನದ ಅಂಚಿನಲ್ಲಿ ವಿಜಯನಗರದ ಕಾಲದಲಿ ನಿರ್ಮಿಸಿದಂತವು. ನಾಲ್ಕು ದೇವಾಲಯ ಬೆಟ್ಟದ ಬುಡದಲ್ಲೂ ನಾಲ್ಕು ಬೆಟ್ಟದ ಮೇಲೆ ಹಾಗೂ ಒಂದು ಕಾಡೊಳಗೆ ಅವಿತಿದೆ. ಯೋಗಾನಂದ ಚತ್ರವಟ ನರಸಿಂಹ ಕಾಡಂಚಿನಲ್ಲಿದೆ.



ಯೋಗಾನಂದ ನರಸಿಂಹ ಶನಿಯನ್ನು ಆಳುತ್ತಾನೆಂದು ಪ್ರತೀತಿ ಇದೆ. ಇಲ್ಲಿನ ನರಸಿಂಹ ದೇವರನ್ನು ಅಹೋಬಾಲ ಎಂದೂ ಕರೆಯುತ್ತಾರೆ. ಅಂದರೆ ಮಹಾ ಶಕ್ತಿ ಶಾಲಿ ಎಂದು. ಯೋಗಾನಂದ ನರಸಿಂಹ ಯೋಗಾಸನದಲ್ಲಿದ್ದಾನೆ.


ಚತುರ್ವಾತ ನರಸಿಂಹ ಹಾಹಾ ಮತ್ತು ಹೋ ಹೋ ಎಂಬಿಬ್ಬರು ಗಂಧರ್ವರು ನರಸಿಂಹನಿಗೆ ಸಂಗೀತ ಸೇವೆ ಮಾಡಿ ಖುಷಿ ಪಡಿಸಿದರು. ಆ ಸಲುವಾಗಿಯೇ ಇಲ್ಲಿನ ನರಸಿಂಹನಲ್ಲಿ ಸಂಗೀತ ಮತ್ತು ಕಲೆಯ ಆರಾಧಕರು ಇಲ್ಲಿ ಬೇಡಿಕೊಂಡರೆ ಅವರಿಗೆ ಕಲೆ ಸಿದ್ಧಿಸುತ್ತದೆ ಎಂಬ ಪ್ರತೀತಿಯೂ ಇದೆ.

ಕೆಳಗಿನ ಎರಡು ದೇವಾಲಯ ದರ್ಶಿಸಿ ಮೇಲಿನ ದೇವಾಲಯ ದರ್ಶಿಸುವ ಹೊತ್ತು. ಇದೊಂದು ಅಚ್ಚರಿಯ ಪಯಣ! ಕಾಡು ತನ್ನ ಬಾಹು ಕವಚಿದ ಏಳು ದೇವಾಲಯಗಳ ತೋರಲೊಬ್ಬ ಕನ್ನಡ ಬಲ್ಲ ಗೈಡ್‌ಗಾಗಿ ತಡಕಾಡಿ ಗೆದ್ದೆವು. ಆತನೋ ನಮಗೆ ಮೂರು ಸಾವಿರಕ್ಕೆ ಬೇಡಿಕೆ ಇಟ್ಟ! ಆತನ ಬ್ರಹ್ಮಾಂಡ ಕನ್ನಡ ಪಾಂಡಿತ್ಯಕ್ಕೆ ಮೂರು ಸಾವಿರ ಬಹಳ ಕಡಿಮೆ!! ಹೊಕ್ಕ ದಾರಿ ಅಲ್ಲದೆ ಹೊರ ಬರುವ ಬೇರೊಂದು ದಾರಿ ಇರುವುದರಿಂದ ಈತನನ್ನೇ ಆಯ್ಕೆ ಮಾಡಿ ಕೊಂಡೆವು. ದಾರಿಯಾದರೂ ತೋರು ರಾಘವೇಂದ್ರನೇ ಎನ್ನುತ್ತ ಪುಟ್ಟ ಮಕ್ಕಳಂತೆ ಅವನ ಹಿಂದೆ ಹೆಜ್ಜೆ ಇಟ್ಟೆವು.

ಬೃಹತ್‌ ಮರಳು ಶಿಲೆಯೊಂದು ನಿಮ್ಮನ್ನು ಕೆಳಗಿನಿಂದಲೇ ಕರೆಯುತ್ತದೆ. ಬಹೃತ್‌ ಶಿಲೆಯ ಜಟೆಯಿಂದ ಧುಮುಕುವ ನೀರ ಹನಿಗಳ ಪ್ರೋಕ್ಷಣೆಗೈದು ದೇವಾಲಯ ಪ್ರವೇಶಿಸಬೇಕಾಗುವುದು ಇಲ್ಲಿನ ವಿಶೇಷ. ಮೂರು ಜಲಕನ್ನಿಕೆಯರು ನಿಮ್ಮ ಬರುವಿಕೆಗಾಗಿ ಕಾಯುವರು. ಬನ್ನಿ ಹಾಗೆ ಮುಂದೆ ಹೋಗೋಣ. 

ಯಗುವಾ ಅಹೋಬಿಲ ನರಸಿಂಹ-



ಭವನಾಶಿನಿ ನದಿ ದಡದ ನರಸಿಂಹ ಸ್ವಯಂ ಭೂ. ಅಂದರೆ ಉದ್ಭವ ನರಸಿಂಹ. ಇಲ್ಲಿ ಹತ್ತಾರು ಪೇರಳೆ ನಮ್ಮ ಚೀಲ ಸೇರಿದವು. ಭಕ್ತರು ಬೆಳಗಿದ ನೂರಾರು ಹಣತೆ ದೇವಾಲಯದೆದುರು ಪ್ರಜ್ವಲಿಸುತಲಿತ್ತು. ಯಾರೋ ಮಹಾಶಯನೊಬ್ಬ ನಮ್ಮ ಹಣೆಗೆ ನಾಮವೆಳೆದ ಸುಮ್ಮನಿದ್ದು ಎಳೆಸಿಕೊಂಡೆವು! ಬೆಟ್ಟವೇರಲು ಮೂರನೆ ಕಾಲಾಗಿ ಒಂದು ಕೋಲು ಕೊಟ್ಟರು ಬರೇ ಐದು ರೂಪಾಯಿಗೆ. ಇಸ್ಕೊಂಡೆವು. ಯಾರಿಗೆ ಹೊಡೆಯಲೋ ಗೊತ್ತಿಲ್ಲ. 

ಬೃಹತ್‌ ಪರ್ವತದ ಬುಡದಲ್ಲಿ ದೇವಾಲಯವಿದೆ. ಗಡಿಬಿಡಿಯಲ್ಲಿ ದೇವಾಲಯ ದರ್ಶನಕ್ಕೆ ಹೊರಟು ನಿಂತೆವು. ಸುಖಾಸೀನನಾದ ನರಸಿಂಹ ಹಿರಣ್ಯ ಕಶುಪುವಿನ ಎದೆ ಬಗೆಯುತ್ತಿದ್ದಾನೆ. ಇನ್ನೆರಡು ಕೈಗಳಿಂದ ಹಿರಣ್ಯಕಶುಪುವಿನ ಕಾಲು ತಲೆ ಹಿಡಿದು ಉಗ್ರರೂಪಿಯಾಗಿದ್ದಾನೆ. ಬಲ ತುದಿಯಲಿ ಅಬಲಾನಾದ ಪ್ರಹ್ಲಾದನು ಕೈ ಮುಗಿಯುವಂತೆ ಚಿತ್ರಿಸಿದ್ದಾನೆ ಶಿಲ್ಪಿ. ಯಗುವಾ ನರಸಿಂಹ ದರ್ಶನ ಮುಗಿಸಿ ಹಲಗೆಯ ಸೇತುವೆಯಲ್ಲಿ ಭವನಾಶಿನಿಯನ್ನು ದಾಟಿ ಹೊಸ ಲೋಕಕ್ಕೆ ಕಾಲಿಟ್ಟೆವು. 


ಕಾಡು ನಮ್ಮೊಳಗೋ ನಾವೇ ಕಾಡಿನೊಳಗೋ ಎಂಬಂತೆ ಕಾಡಿಗೆ ಕಾಲಿಟ್ಟೆವು. ಚಿತ್ರ ವಿಚಿತ್ರವಾಗಿ ಪ್ರಕೃತಿಯ ನಮ್ಮೆದುರು ತನ್ನ ಭವ್ಯತೆಯನ್ನು ತೋರುತಲಿತ್ತು. ಮಳೆಗಾಲದಲ್ಲಿ ಮೈದುಂಬಿ ಹರಿವ ಭವನಾಶಿನಿ ಹೊಳೆ ದಾಟಲು ಹಲವು ಕಡೆ ಹಗ್ಗ ಹಾಕಲಾಗಿತ್ತು. ಮಳೆಗಾಲದ ಮೂರು ತಿಂಗಳು ಅಸಾಧ್ಯ ವೇಗದಿಂದ ಹರಿವ ಇವಳನ್ನು ಹರಿಯುವುದು ಅಸಾಧ್ಯ. ಯಗುವಾ ನರಸಿಂಹ ದೇವಾಲಯದ ಸನಿಹವಂತು 6-7 ಅಡಿ ನೀರು ಧುಮ್ಮಿಕ್ಕುತ್ತದೆ. ಅಹೋಬಿಲಂ ಜಲಪಾತ ಮತ್ತು ಉಗ್ರ ಸ್ತಂಭ ಕಾಣಿಸುವ ಬ್ರಿಡ್ಜ್‌ ಮೇಲೆ ನಿಂತೆವು. ನಾವು ಗುರಿಯ ಸನಿಹವೆಂದು ಕೊಂಡೆವು. ನೀವಿನ್ನೂ 450 ಮೆಟ್ಟಿಲು ಏರುವುದಿದೆ ಎಂದು ಹೇಳಿ ಗೈಡ್‌ ನಮ್ಮನ್ನು ಗಾಬರಿ ಬೀಳಿಸಿದ. ಉಗ್ರ ಸ್ತಂಭದ ಸನಿಹದಲ್ಲೇ ಜ್ವಾಲಾ ನರಸಿಂಹ ದೇವಾಲಯವಿದೆ. ಇಲ್ಲಿಂದ ಮುಂದೆ ಏರುವುದೇ ಅತಿ ಕಠಿಣ ಹಾದಿ. ಉಗ್ರ ಸ್ತಂಭದ ಬಳಿಯ ಅಹೋ ಬಿಲಂ ಜಲಪಾತ ಅಂದು ತನ್ನ ಉಗ್ರ ರೂಪ ತೊರೆದು ಶಾಂತವಾಗಿತ್ತು.

ನರಸಿಂಹ ಜಯಂತಿ ಮತ್ತು ಸ್ವಾತಿ ನಕ್ಷತ್ರ!

ಸ್ವಾತಿ ನಕ್ಷತ್ರದಂದೇ ನರಸಿಂಹ ಸ್ವಾಮಿಯ ಜನ್ಮ ದಿನ. ಬೆಳಗಾವಿ ಬಾಗಲಕೋಟೆಯ ಹತ್ತಾರು ಭಕ್ತರು ಅಂದು ದರ್ಶನಕ್ಕೆ ಬಂದಿದ್ದರು. ನೀವು ಪುಣ್ಯವಂತರು, ಇಂದು ನವ ನರಸಿಂಹನ ದರ್ಶನ ಮಾಡಿದವರಿಗೆ ಮೋಕ್ಷ ಪ್ರಾಪ್ತಿ ಎಂದ ನಮ್ಮ ಗೈಡ್.‌ ನಿನ್ನೊಂದಿಗೆ ನಡೆಯುವ ಎಲ್ಲರಿಗೂ ಮೋಕ್ಷ ಖಾತರಿ ಮರಾಯ ಎಂದು ಅವನನ್ನು ಚೇಡಿಸುತ್ತ ಹೆಜ್ಜೆ ಹಾಕಿದೆವು. ಉಗ್ರ ಸ್ತಂಭದಿಂದ ಧುಮುಕುವ ನೀರಲ್ಲಿ ಅಭಿಶೇಕ ಮಾಡಿಸಿಕೊಂಡು ಬಲ ಭಾಗದ ಕೆಂಪು ಕೊಳವನ್ನು ನೋಡುತ್ತಾ ಜ್ವಾಲಾ ನರಸಿಂಹನ ಸೇರಿಕೊಂಡೆವು. 



ಕೆಂಪು ಆಲ್ಗೆ ತುಂಬಿದ ಈ ಕೊಳವನ್ನು ಹಿರಣ್ಯ ಕಶುಪುವಿನ ರಕ್ತ ತೊಳೆದ ಕೊಳವೆಂದು ಜನ ಈಗಲೂ ನಂಬುತ್ತಾರೆ. ಜ್ವಾಲಾ ನರಸಿಂಹ ದೇವಾಲಯದ ಹಿಂದೆ 80 ಡಿಗ್ರಿ ಕೋನದಲ್ಲಿದ್ದ ದಾರಿಯಲ್ಲಿ ಕೇವಲ ಹಗ್ಗದ ಸಹಾದಿಂದ ಏರಬೇಕು. ಕೈ ಕಾಲುಗಳಲ್ಲಿ ಕಸುವಿಲ್ಲದ ಕಾರಣ ಕೈ ಬಿಟ್ಟೆವು. 




ಮೈ ತೋಯಿಸಿಕೊಂಡ ನಿಮಗೆ ಇಲ್ಲಿ ಕತೆಗಳು ನಿಮ್ಮ ಮನಸ್ಸು ತೋಯಿಸುವವು. ಪ್ರಕೃತಿ ಮಡಿಲಲ್ಲಿ ಇಂತಹದೊಂದು ಅಚ್ಚರಿಯ ತಾಣವ ಹುಡುಕಿ ತೆಗೆದು ಅದಕೊಂದು ಕತೆಗಳನ್ನು ಜೋಡಿಸಿದ ಮಹಾ ಪುರುಷನಿಗೆ ಶರಣು. ದೇಶ ಕಾಲಾತೀತದಲ್ಲಿ ಹಬ್ಬಿ ಹರಡಿದ ನೂರಾರು ಕತೆಗಳು ನಿಜಕ್ಕೂ ನಿಮ್ಮನ್ನು ಕಾಡುವವು. 

ಕಾಡೊಳಗಿನ ಅಚ್ಚರಿ ಮೂಡಿಸುವ ಕಾಡುವ ಕತೆಗಳು 

ಚುಂಚೂ ಬುಡಕಟ್ಟು ಮತ್ತು ನರಸಿಂಹ-


ಇಲ್ಲಿನ ಚುಂಚೂ ಆದಿವಾಸಿಗಳು ನರಸಿಂಹನನ್ನು ತಮ್ಮ ಅಳಿಯನ್ನನ್ನಾಗಿಸಿದ ಪರಿಗೆ ಅಚ್ಚರಿಗೊಂಡೆ. ನರಸಿಂಹನಿಗೆ ಆದಿವಾಸಿ ಲಕ್ಷ್ಮೀಯನ್ನು ಮದುವೆ ಮಾಡಿಸಿ ಇವರು ತಮ್ಮವನನ್ನಾಗಿ ಮಾಡಿ ಕೊಂಡಿದ್ದಾರೆ! ಹಾಗಾಗಿ ಹೋಗಿ ಬರುವವರಿಗಾಗಿ ಇಲ್ಲಿನ ಬುಡಕಟ್ಟು ಜನರು ದಾರಿ ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಕಾದು ಕೂರುವುದು ನಮಗಂತೂ ಅಚ್ಚರಿ. ಸಾಕ್ಷಾತ್‌ ದೈವ ಸಂಭೂತರಾದ ಸರಳ ಜನ! ಇವರ ಚೇತನವೇ ಒಂದು ಒಗಟು. ನಮ್ಮ ದಾರಿಯಲ್ಲೊಬ್ಬಳೂ ನರಸಿಂಹ ಲಕ್ಷೀಗಾಗಿ ರಂಗೋಲಿ ಹಾಕಿ ಕುಳಿತಿದ್ದಳು. ಭಕ್ತರು ನೀಡಿದ ಅಷ್ಟೋ ಇಷ್ಟೋ ಇವರಿಗೆ ಆದಾಯ! ಅಬ್ಬಬ್ಬಾ ಎಂದರೂ ೨೦೦ ದಾಟದ ಸಂಪಾದನೆ. ಮತ್ತು ಮಗದೊಂದು ಯೋಚಿಸದ ಯೋಜಿಸದ ತೃಪ್ತ ಜನ.

ಮಾಲೋಲ ನರಸಿಂಹನೆಡೆಗೆ….

ಅಹೋಬಿಲಂನ ಜ್ವಾಲಾ ನರಸಿಂಹನಿಗೆ ಶರಣು ಬಂದು ನಿಧ ನಿಧಾನಕ್ಕೆ ಒಂದೊಂದು ಹೆಜ್ಜೆ ಇಟ್ಟು ನೀರ ಜೋಕಾಲಿಯಲಿ ಮಿಂದು ಕ್ಯಾಮರಕ್ಕೂ ಎರಡು ಹನಿ ಮೀಯಿಸಿ ನಮ್ಮ ಗೈಡ್‌ ಜೊತೆ ಹೊರಟು ನಿಂತೆವು.

ಕ್ಷೀಣ ಜಲಪಾತವೊಂದು ನನ್ನ ಕಣ್ಣವೆಯಲ್ಲಿ ತುಂಬಿ ಪೂರ್ಣ ಸೃಷ್ಟಿಯ ಸೊಬಗನ್ನು ಹೆಚ್ಚಿಸುವ, ಕತೆಗಳ ಸೃಷ್ಟಿಸುವ ಪರಿಗೆ ಚಕಿತಗೊಂಡಿರುವೆ.

ಇಲ್ಲಿಂದ ಹೊರಟು ಮಾಲೋಲ ನರಸಿಂಹನೆಡೆಗೆ ಹೆಜ್ಜೆ ಹಾಕಿದೆವು. ಹಿರಣ್ಯ ಕಶಪುವಿನ ಸಂಹರಿಸಿ ಕುಪಿತಗೊಂಡ ಆತನನ್ನು ಸಂತೈಸಲು ಆದಿವಾಸಿ ಲಕ್ಷ್ಮೀ ಎಂಬ ಮಹಿಳೆಯನ್ನು ಬ್ರಹ್ಮ ಕಳುಹುತ್ತಾನೆ. ಆಗಲೇ ಶಾಂತ ಸ್ವರೂಪಿಯಾಗಿ ಜ್ವಾಲಾ ನರಸಿಂಹ ಮಾಲೋಲ ಸ್ವರೂಪಿಯಾಗಿ ನೆಲೆ ನಿಲ್ಲುತ್ತಾನೆ. ದೇವರ ಸಿಟ್ಟಿಗೆ ಕತೆಯ ಒಗ್ಗರಣೆ ಅನಿಸಿತು. ಅದೇ ಹಾದಿಯಲಿ ಕೆಳಗಿಳಿಯುತ್ತಾ ಬಂದಾಗ ವರಾಹ ರೂಪಿಯಾಗಿ ನರಸಿಂಹ ನೆಲೆ ನಿಂತಿದ್ದಾನೆ. ಭೂ ಭಾರವನ್ನು ಎತ್ತಿದ್ದಾನೆ. ಕತೆಗಳ ಸಿಕ್ಕು ಬಿಡಿಸಲು ಹೋಗದೇ ಸುಮ್ಮನೆ ದರ್ಶನಗೈದು ಬಂದೆವು. 

ಮೇಲೇರುವ ಹಾದಿಯೊಂದು ವಾಪಾಸಾಗುವ ಹಾದಿ ಇನ್ನೊಂದು. ಪ್ರತಿ ಕಲ್ಲಿಗೂ ಇಲ್ಲೊಂದು ಸುಂದರ ಕತೆ ಹೆಣೆಯುವ ಚಾತುರ್ಯ ಇದೆ. ಕತೆಗಳನ್ನು ಕೇಳುತ್ತಾ ಕೇಳುತ್ತಾ ದಾರಿ ಸಾಗಿದ್ದೆ ತಿಳೀಲಿಲ್ಲ.

14 ಕಿಲೋ ಮೀಟರ್‌ ದೂರದ ಪವನ ನರಸಿಂಹ ದರುಶನಕ್ಕೆ ಅಹೋಬಿಲಂ ವೃತ್ತಕ್ಕೆ ಬಂದು ಜೀಪು ಹತ್ತಿ ಹೊರಟೆವು. ಕಾಡೊಳಗೆ ಜೀಪು ಸರ್ಕಸ್ ಮಾಡುತ್ತಾ ನರಸಿಂಹ ದೇವಾಲಯ ತಲುಪಿತು. ಮುಚ್ಚಿದ ಬಾಗಿಲ ನಡುವೆ ಹಣಕಿ ಹಾಕಿ ದರ್ಶನ ಮುಗಿಸಿ ಹಿಂದಿರುಗಿದೆವು. ಹೀಗೆ ಒಂಭತ್ತು ದೇವಾಲಯ ದರುಶನವಾದರೂ ನೋಡಿದ ಸಂಪೂರ್ಣತೆ ನನಗೆ ದಕ್ಕಲಿಲ್ಲ. ಇನ್ನೂ ನೋಡಬೇಕು ಅಲ್ಲೇ ಇನ್ನೆರಡು ದಿನವಿರಬೇಕೆಂಬ ಹಂಬಲ. ಆದರೆ ಕಾಲ ಪುರುಷನೆದುರು ನಾವು ಮಂಡಿ ಊರಲೇ ಬೇಕಲ್ಲ. ಹೊರಡಲೇ ಬೇಕಾಯಿತು.

ಮೇಲೇರಿದ ಜಾಗದ ಸನಿಹದಲ್ಲೇ ವಿಶಿಷ್ಟ ವನ ಭೋಜನವೊಂದು ನಮಗಾಗಿ ಕಾಯುತಲಿತ್ತು. ಅಣಬೆ ಗಸಿ ಮತ್ತು ಕಡಲೆ ಬೇಳೆ ಪಾಯಸವನ್ನು ಹಿತಮಿತವಾಗಿ ಸೇವಿಸಿ ಗಂಡೀಕೋಟದತ್ತ ಓಟ ಕಿತ್ತೆವು .


Saturday, January 20, 2024

ಕಲ್ಲು ಕರಗಿಸುವ ಕೊಟಚಾದ್ರಿಯ ಕರೆ….


ರೆ ಕೊಟಚಾದ್ರಿ ಎಂದರೆ ಅದೇಕೋ ರೋಮಾಂಚನ! ಧಮನಿಗಳಲ್ಲಿ ರುಧಿರ ನರ್ತನ. ಇಂತಹ ಕುಟಚಾದ್ರಿ, ಕೊಡಚಾದ್ರಿ ಎಂದು ಕರೆಸಿಕೊಳ್ಳುವ ಈ ಸ್ಥಳವೇ ಅಪೂರ್ವ. ಏಳು ಅಶ್ವಗಳ ಸೆಳೆತ. ಮುಗಿಲು ಚುಂಬಿಸಿ ಬಂದ ಅನುಭವವನ್ನು ಹೊಸ ರೀತಿಯಲ್ಲಿ ಹೇಳುವ ಸಣ್ಣ ಪ್ರಯತ್ನ.

 ಜೀಪಿನಲ್ಲೂ ಹೋಗಿ ಬರಬಹುದು. ಹೋಗಿಬರಲು 2 ಸಾವಿರ ತೆಗೆದುಕೊಳ್ಳುವರು. ಮಳೆಗಾಲ ವಿಡಿ ಬ್ಯುಸಿಯಾಗಿರುವ ಇಲ್ಲಿನ ಜೀಪಿನವರು ಬೇಸಿಗೆಯಲಿ ಇವರಿಗೆ ಸೂಟಿ. ವಾರಕ್ಕೆರಡು ಬಾಡಿಗೆಯಾದರೆ ಹೆಚ್ಚು. ಇದನ್ನೇ ಪ್ರಧಾನ ಉದ್ಯೋಗವಾಗಿ ನೆಚ್ಚುವಂತಿಲ್ಲ. ಬೇರೊಂದು ಉದ್ಯೋಗದ ಜೊತೆ ಜೀಪು ಸವಾರಿ ಎಂಬುದು ನಮ್ಮ ಜೊತೆ ಬಂದ ನಿತ್ಯಾನ ಉವಾಚ. ಜೀಪಿನ ಸವಾರಿಯೂ ಒಂದು ಆಧ್ಯಾತ್ಮಿಕ ಪಯಣ.



ಹೆಸರಿನ ನಂಟು….     

ಕುಟಜವೆಂದರೆ ಸಸ್ಯ. ಅದನ್ನ ಹೊದ್ದ ಅದ್ರಿ ಕುಟಚಾದ್ರಿ ಅಥವಾ ಕೊಡಚಾದ್ರಿ ಎಂಬ ಅರ್ಥವಿದೆ ಎಂದವರು ಗಣ್ಯರಾದ ವಸಂತ ಕುಮಾರ ಪೆರ್ಲಾ. ಇಂತಹ ಅದ್ರಿಯು ನೂರಾರು ಗಿಡ ಮೂಲಿಕೆಗಳ ಕಣಜ!. ಮೂಕಾಂಬಿಕಾ ವನದ ಸೆರಗಲ್ಲೆ ಮಲಗಿದ ಐದನೆಯ ದೊಡ್ಡ ಅದ್ರಿ. ಅಪ್ಪೆ, ಮತ್ತಿ ಮುಂತಾದ ವಿಶಿಷ್ಟ ಮರಗಳ ಗಮ್ಯ.  ಏನೇ ಇರಲಿ ತುದಿಯೇರುವ ತವಕದಲ್ಲಿರುವ ನಮಗೆ ಬಾಕಿ ಎಲ್ಲವೂ ಗೌಣ. ಮುಳ್ಳಯ್ಯನ ಗಿರಿಗೆ ಬಿಟ್ಟರೆ ಕೊಡಚಾದ್ರಿಗೆ ಮಾತ್ರ ರಸ್ತೆ ಮಾರ್ಗ. ಹಾಗಾಗಿ ಬೈಕನ್ನೇರಿಸುವ ಹುಚ್ಚು ಸಾಹಸ ಮೈ ಮೇಲೆಳೆದು ಕೊಂಡೆವು. ಅದೂ ಬುಲೆಟ್!‌


ಬೈಕಿನ ಬಂಟ ಹೆಂಗೆ ಹೊಂಟ..

ಗೌರಿ ಕೆರೆ ಎಂಬೂರಿನಲಿ ಬಲಕ್ಕೆ ತೇಲಿಕೊಂಡರೆ ಸಿಗುವ ಜಲಧಾರೆವರೆಗೆ ಒಮ್ಮೆ ಬಂದು ಹೋಗಿದ್ದೆ. ಅದೇ ಎಮ್ಮೆ ಹೊಂಡ ಜಲಪಾತ. ಅಂದೇ ಒಮ್ಮೆ ಈ ಅದ್ರಿಯ ಏರಬೇಕೆಂದು ಕನಸು ಕಂಡಿದ್ದೆ.

ಈ ಅದ್ರಿ ಏರಲು ಎರಡು ದಾರಿಗಳಿವೆ. ಮೊದಲನೆಯದು ಒಂಟಿ ಮರದ ಅತಿ ಭಯಂಕರ ಏರು ದಾರಿ. ದಾರಿ ತಪ್ಪಿದರೆ ಕಾಡೊಳಗೆ ಲೀನ. ಗೆಳೆಯನೊಬ್ಬರ ತಂಡ ಇಲ್ಲೇ ಕಳೆದು ಹೋಗಿ ಸಂಜೆ ಊರು ಸೇರಬೇಕಾದವರು ಮಧ್ಯ ರಾತ್ರಿ ಊರು ಸೇರಿದರು! ರಹಮತ್‌ ತರಿಕೇರಿ ಎಂಬ ಉಪನ್ಯಾಸಕರೂ ಇಲ್ಲಿ ದಾರಿ ತಪ್ಪಿ ಅಲೆದಿದ್ದರು. ಎರಡನೆಯದು ರಸ್ತೆ ಮಾರ್ಗ. ಕಾಲು ನೋವಿದ್ದ ಕಾರಣ ಅತಿ ದೂರದ ರಸ್ತೆ ಮಾರ್ಗವನ್ನೇ ಆಯ್ದುಕೊಂಡೆವು.

ಗೆಳೆಯ ನಾಗರಾಜನೇ ಮುಖ್ಯ ಸವಾರ. ಹೊರಟಿದ್ದು ನಡು ಮಧ್ಯಾಹ್ನಕ್ಕೆ. ಇಳಿ ಸಂಜೆಗೆ ಮೊದಲು ನಾಗೋಡಿ ದಾಟಿ ಕುಟಚಾದ್ರಿಯ ತಿರುವಿನಲ್ಲಿದ್ದೆವು. ಒಂದೆರಡು ಜೀಪುಗಳು ಕಾದು ನಿಂತಿದ್ದವು. ಸುಲಭಾಗೇ ಚೆಕ್‌ ಪೋಸ್ಟವರೆಗೆ ದಾಟಿಕೊಂಡೆವು. ಮುಂದಿನದು ಅತಿ ದುರ್ಗಮ ಪಯಣ. ಹೋರಿಯಂತಹ ರಾಯಲ್‌ ಎನಪೀಲ್ಡ್‌ನ್ನು ಜೋಲಿ ಹೊಡೆಯದಂತೆ ಕಾಪಾಡುವುದೇ ದೊಡ್ಡ ಸಾಹಸ. ರಸ್ತೆ ನಡುವಿನ ನೀರ ತೋಡುಗಳ ದಾಟುವುದೇ ಮಹಾ ಸಂಕಷ್ಟ. ಇಂತಹುದೇ ಒಂದು ಗಾಳಿ ಗುಡ್ಡ ವೆಂಬ ಪರ್ವತ ಹೊರನಾಡಿನ ಸಮೀಪವಿದೆ. ಅದರ ಚಾರಣವಂತೂ ಭಾರಿ ಭೀಕರ. 

ಬೈಕ್‌ ಎಲ್ಲೂ ನಮ್ಮ ಮಾತೇ ಕೇಳದೇ ಸ್ವಂತ ಬುದ್ದಿ ಇರುವಂತೆ ವರ್ತಿಸತೊಡಗಿತು. ಯಾವಾಗಲೂ ತೋಡುಗಳೆಡೆಗೆ ಅತೀವ ಆಕರ್ಷಣೆ. ಭರ್ಜರಿ ಹಾರ್ನ್‌ ಹಾಕುತ್ತಾ ಹಿಂದಿನಿಂದ ಜೀಪೊಂದು ಧೂಳ ಸಾಗರವನ್ನು ಕಟ್ಟಿಕೊಂಡೇ ತಿರುವಿನಲ್ಲಿ ಬುಸುಗುಡುತ್ತಾ ಬರುತಲಿತ್ತು. ಮ್ಯಾಂಗನೀಸ್ ಅದಿರಿನ ಮಹಾ ಧೂಳಿನ ಮೋಡವೊಂದು ಎದ್ದಿತು. ಆಗಲೇ ನಮ್ಮ ಬೈಕ್‌ ನೀರ ಓಣಿಯೊಳಗೆ ಸವಾರನ ಆಜ್ಞೆಯನ್ನು ದಿಕ್ಕರಿಸಿ ಮಲಗಿಬಿಟ್ಟಿತು. ಕೆಸರ ಹೊಂಡದಲ್ಲಿ ಮಲಗಿದ ಎಮ್ಮೆಯಂತೆ ಏಳಲು ಒಪ್ಪಲೇ ಇಲ್ಲ. ಅಂತೂ ಕಷ್ಟ ಪಟ್ಟು ಎತ್ತಿ ಹಿಡಿದಾಗ ಉಸ್ಸಪ್ಪವೆಂಬ ಉಸಿರು ಹೊರ ಚೆಲ್ಲಿತು. ಜೀಪಿನವನೂ ನಿಲ್ಲಿಸಿ ಸಹಾಯ ಬೇಕೇ? ಎಂದು ಕೇಳಿದ. ಜೀಪಿನ ಮಾಲಿಕನಿಗೆ ಧನ್ಯವಾದ ಹೇಳಿ ಏರು ದಾರಿಯ ಏರಲು ಅನುವಾದೆವು. ಕಾಲಿಗೆರಡು ಬರ್ಜರಿ ಬರೆ ಬಿದ್ದವು. ಕಾಲಿನ ಬರೆಯ ಬಿಸಿಯನು ಹೊತ್ತೇ ನೆತ್ತಿ ಹತ್ತಿತು ನಮ್ಮ ಬೈಕ್.‌ ಮೂಲ ಮೂಕಾಂಬಿಕೆ, ಹುಲಿ ದೇವರ ಗುಡಿಯ ಸನಿಹ ಬೈಕ್ ನಿಲ್ಲಿಸಿದೆವು. ನಾಗ ತೀರ್ಥದ ಪನ್ನೀರು ಚಿಮುಕಿಸಿಕೊಂಡು ಹೊರಟೆವು.


ಅದಿರಿನ ಖದರು ...

ಅಪಾರ ಅದಿರಿನ ಖನಿಯಾದ ಇಲ್ಲಿನ ಬೆಟ್ಟ ಬಗೆಯಲು ಖಾದಿಯವರು ಕಾದು ಕುಳಿತಿದ್ದಾರೆ. ಬೆಟ್ಟ ಬಯಲು ಮಾಡಲು! ಮುಕಾಂಬಿಕಾ ಅಭಯಾರಣ್ಯದ ವ್ಯಾಪ್ತಿಗೆ ಬರುವುದರಿಂದ ಕೊಂಚ ನಿರಾಳವಾಗಿದೆ. ಇಲ್ಲವಾದರೆ ಎಂದೋ ಇದನ್ನು ಬಗೆದು ಹಾಕುತ್ತಿದ್ದರು. ಮನುಷ್ಯನ ದುರಾಸೆಗೆ ಮಿತಿ ಎಲ್ಲಿ?

ಬೆಲೆ ಕಟ್ಟಲಾಗದ ಹಸಿರು ಮತ್ತು ಜೀವಜಗತ್ತಿನ ತಾಣ ಈ ಕೊಡಚಾದ್ರಿ . ಹಗಲು ಹೊತ್ತಿನಲಲ್ಲೇ ಕಾಡು ಕೋಣಗಳ ಹಿಂಡು ಕೆಲವೊಮ್ಮೆ ಕಾಣಸಿಗುತ್ತದೆ. ಹುಲಿ ಚಿರತೆಗಳ ಸಂಖ್ಯೆಯೂ ಕಮ್ಮಿ ಇಲ್ಲ. 

ಶಂಕರ ಪೀಠದ ಹಾದಿಯಲಿ…

ಬೈಕಿನಿಂದಿಳಿದು ಬೈಗಿಗೆ ಜಾರುವ ದಿನಕರನ ದರುಶನಕೆ ಸರ್ವಜ್ಞ ಪೀಠಕ್ಕೆ ಲಗ್ಗೆ ಇಟ್ಟೆವು. ನಭವನು ಕಡು ಕಿತ್ತಳೆಗೆ ತಿರುಗಿಸಿದ ದಿನಕರನು ಕಡಲಿಗಿಳಿದು ತನ್ನ ಉರಿಯನ್ನು ತಣ್ಣಗೆ ಮಾಡಿಕೊಳ್ಳುತ್ತಿದ್ದ. ನಾವಿಬ್ಬರು ಚಿಪ್ಪ್ಸು ಮತ್ತು ಹಣ್ಣಿನ ರಸವನು ಹೊಟ್ಟೆಗಿಳಿಸಿ ಹೊಟ್ಟೆಯುರಿಯನ್ನು ಸಾಕಷ್ಟು ತಣ್ಣಗೆ ಮಾಡಿಕೊಳ್ಳ ತೊಡಗಿದೆವು.  ಇಷ್ಟು ಎತ್ತರಕೆ ಕಲ್ಲು ಸಾಗಿಸಿ ಕಟ್ಟಿದ ಸರ್ವಜ್ಞ ಪೀಠ/ ಶಂಕರ ಪೀಠದ ಕೆತ್ತನೆಗೆ ಮನ ಕರಗಿತು. ಯಾರನ್ನು ಮೆಚ್ಚಿಸಲು ಈ ಪರಿ ಕಸರತ್ತು!? ಗೊತ್ತಿಲ್ಲ.

ಚಾರಣಿಗರ ಸಂತೆಯಲಿ ಕರಗದೇ ಮುಂದಿನ ಇಳಿ ಜಾರಿನ ತುದಿಗಿದ್ದ ಗುಡ್ಡವೇರಿದೆವು. ಈಗ ಇಲ್ಲೊಂದು ಬೇಲಿ ನಿರ್ಮಿಸಿದ್ದಾರೆ. ಚಾರಣಿಗರೆಸದ ಕಸವ ಕಂಡು ಕೆಂಪು ಮೂತಿ ಮಾಡಿಕೊಂಡು ಕಡಲಿಗಿಳಿದ ಸೂರ್ಯ ಮಾಮನಿಗೆ ಟಾಟಾ ಹೇಳಿದೆವು. ನಮ್ಮ ವರ್ತನೆಗೆ ಬೇಸರಿಸಿಕೊಂಡ. ತಾವು ತಂದ ಬಾಟಲಿ, ಜರಿಗಳನು ಅಲ್ಲೇ ಬಿಸುಟು ಹೋಗಿದ್ದರು. ಎಂದು ಬರುವುದೋ ಇವರಿಗೆ ಪರಿಸರ ಕಾಳಜಿ. 


 ಶಂಕರ ಪೀಠದ ಬಲ ಮಗ್ಗುಲಿನಲ್ಲೇ ಚಿತ್ರಾ ಮೂಲವಿದೆ. ಇದೇ ಸೌಪರ್ಣಿಕೆಯ ಉಗಮ ಎನ್ನುತ್ತಾರೆ. ಸಾಕಷ್ಟು ಸಂಜೆ ಆದುದರಿಂದ ಇಳಿಯುವ ಸಾಹಸ ಮಾಡಲಿಲ್ಲ.

 ಟೆಂಟಿಗೆ ಅಂಟಿ…

ನಮ್ಮ ಟೆಂಟುಗಳಿಗೆ ಹಿಂದಿರುಗುವಾಗ ಮೂಡಣದ ಬೆಳ್ಳಿ ಹಣಕಿ ಹಾಕಿತ್ತು. ಜೋಗಿಯವರ ಬಿಡಾರದಲ್ಲಿ ಉಳಿಯುವ/ಉಣ್ಣುವ ವ್ಯವಸ್ಥೆಯಾಯಿತು. ಅಂದು ಚಳಿ ಬಹಳವೇ ಇತ್ತು. 

ಮುಂದಿನ ದಿನಕೆ ಅಣಿಯಾಗಲು ನಮ್ಮ ನಮ್ಮ ನಿದ್ರಾ ಚೀಲದೊಳಗೆ ನುಸುಳಿಕೊಂಡಾಗ ನಕ್ಷತ್ರವೊಂದು ನನ್ನ ನೋಡಲ್ವೆ ಎಂದು ನಕ್ಕಿತು. ಕೆಲವರು ನಕ್ಷತ್ರ ವೀಕ್ಷಣೆಗೆ ಹೊರಟು ನಿಂತರು. ಶುಚಿಯಾಗಿ ಗುಡಿಸಿಟ್ಟಂತಹ ಆಕಾಶ ವೀಕ್ಷಣೆಗೆ ಇಂಬು ಕೊಟ್ಟಿತ್ತು. ಸುಸ್ತಾದ ನಾನು ನಿದ್ರಾ ಚೀಲದೊಳಗೆ ಹೊಕ್ಕು ಗೊರಕೆಗೆ ಬಿದ್ದೆ!


ಸೂರ್ಯನ ಎಬ್ಬಿಸಲು ಹೊರಟಾಗ…...




ಗಂಟೆ ೬ ಆದರೂ ಸೂರ್ಯ ಮಾಮ ಎದ್ದಿರಲೇ ಇಲ್ಲ! ನಾವೈವರು ಗಲಾಟಿ ಮಾಡಿ ಅವನ ಎಬ್ಬಿಸಲು ಹೊರಟು ನಿಂತೆವು. ಒಂದಿಷ್ಟು ಪ್ರಿ ಪೋಟೋ ಸೆಷನ್ ನಡೆಸಿದೆವು.  ಬಂಗಾರದ ಬೆಳಕು ಹುಲ್ಲ ಮೇಲೆಲ್ಲ ಹರಡಿ ಬಂಗಾರವಾಗಿಸಿತು. 

ಅಸ್ಸಾಂಗೆ ವಲಸೆ ಹೋಗುವ ಲೆಸ್ಸರ್‌ ಕೆಸ್ಟ್ರಲ್‌ ಹಕ್ಕಿಯೊಂದು ಖುಷಿಯಲ್ಲಿ ಹಾಡು ಹೇಳುತ್ತಲೇ ಇತ್ತು. ದೂರದಲ್ಲೆಲ್ಲೋ ಬ್ಲಾಕ್‌ ಈಗಲ್ ನ ಕೂಗಿಗೆ ಮೆಲ್ಲ ಮೆಲ್ಲನೆ ನೆತ್ತರು ಸುರಿದಂತೆ ಕಾಣುತ್ತಿದ್ದ ಸೂರ್ಯ ಮೆಲ್ಲಗೆ ಮೇಲೆ ಬರುತಲಿದ್ದ. ಸೂರ್ಯ ನೆದುರಿಗೆ ಒಂದಿಷ್ಟು ಪೋಟೋ ನೈವೇದ್ಯವಾಯಿತು. ನೆತ್ತಿಯಿಂದ ಕಾಣುವ ಸೊಬಗು ಅನ್ಯಾದರ್ಷ. ಪ್ರಕೃತಿಯ ರಮ್ಯತೆಯ ಅನುಭವಿಸಿಯೇ ತಿಳಿಯಬೇಕು. 

ಮಾನವನ ಹಸ್ತಕ್ಷೇಪ ಕಡಿಮೆಯಾದಂತೆ ಅದರ ಸೊಬಗು ಇಮ್ಮಡಿಸುವುದು. 




ಝರಿ ಕತೆ….

ಸೌಪರ್ಣಿಕೆಯ ಒಡುಲು ಸೇರುವ ಇಲ್ಲಿನ ಝರಿಗಳು ಒಂದಕ್ಕಿಂದ ಒಂದು ಚಂದ. ಚಿತ್ರಾ ಮೂಲವು ಅದರಲ್ಲಿ ಒಂದು. ಗುಡ್ಡ ವಿಳಿದು ಚಿತ್ರಾ ಮೂಲ ದರುಶನವೂ ಅದರಲ್ಲಿ ಒಂದು ವಿಶಿಷ್ಟ ಗುಹಾ ಝರಿ. ಬೆಟ್ಟವಿಳಿದು ಇದರ ಒಡಲು ಸೇರುವುದು ವಿಶಿಷ್ಟ ಅನುಭೂತಿ. ಇಲ್ಲೊಂದು ಲಿಂಗವೂ,  ಇದೆ. ಈ ಝರಿಗಳ ನೀರು ಅನೇಕ ಔಷಧೀಯ ಗುಣ ಹೊಂದಿದೆ ಎನ್ನುತ್ತಾರೆ ಇಲ್ಲಿನವರು. ಜನವರಿಯ ನಂತರ ತನ್ನ ಹರಿವನ್ನು ಈ ಝರಿ ಕಳೆದು ಕೊಳ್ಳುತ್ತದೆ ಎನ್ನುತ್ತಾರೆ ಇಲ್ಲಿನ ಪೂಜಾರಿಯವರು. ಇಲ್ಲಿ ತಪಸ್ವಿಗಳಿದ್ದರು ಎನ್ನುತ್ತದೆ ಇಲ್ಲಿನ ಜನಪದ.

ಚಿತ್ರಾ ಮೂಲಕ್ಕೆ ಹೋಗಿ ಹಣಕಿ ಹಾಕಿ ಬರುವ ಹುಮ್ಮಸ್ಸಿದ್ದರೂ ಹಿಂಡಲು ಮನೆಯ ಜಲಧಾರೆ ನನ್ನ ಕರೆಯುತ್ತಲೇ ಇತ್ತು. ಸಿಕ್ಕಾ ಪಟ್ಟೆ ಬೆಸ್ತು ಬೀಳಿಸಿದ ಬೈಕ್‌ನ್ನು ನಾಗರಾಜನ ತೆಕ್ಕೆಗೆ ಒಪ್ಪಿಸಿ ನಾನು ನಟರಾಜ ಸರ್ವಿಸ್‌ ಹತ್ತಿದೆ! ಅಂದರೆ ನಡಿಗೆ! ನಮ್ಮನ್ನು ಬೀಳಿಸಿದ ಅದೇ ಬೈಕು ಗೆಳೆಯ ರಾಘುವನ್ನು ಬೀಳಿಸಿ ಮೈ ಕೈ ತುಂಬಾ ತರಚು ಗಾಯವಾಗುವಂತೆ ಮಾಡಿತು!

ನನ್ನ ಜೊತೆ ಒಂದೈದು ಜನ ಗೆಳೆಯರು ಜೊತೆಯಾದರು. ಚಾರಣದ ಕತೆ ಹೇಳುತ್ತಾ ಸಮಯದ ಪರಿವೆಯೇ ಇಲ್ಲದೆ ಹಿಂಡ್ಲು ಮನೆಯ ಹಾದಿ ತುಳಿದೆವು. ಅದರ ರೋಚಕ ಕತೆಯನ್ನು ಮನಸ್ಸಾದರೆ ಮತ್ತೆ ಎಂದಾದರೂ ಹೇಳುವೆ. ಅಲ್ಲಿಯವರೆಗೆ…..






Sunday, August 20, 2023

ಕಾಯುವ ಸುಖ ಕಷ್ಟ....

                ಬೆಳಿಗ್ಗೆ ಬೆಂಗಳೂರಿನ ಗಾಂಧಿ ಬಜಾರಿನಲ್ಲಿ ಸಿಕ್ಕಿ ಎಂದಿದ್ದ ಗೆಳೆಯ. ಮಾಡಲೇನೂ ಕೆಲಸವು ಇರಲಿಲ್ಲ ಹಾಗಾಗಿ ಕಾಫೀ ಹೀರಿ ಅಂಕಿತದ ಜಗುಲಿಗೆ ಬಂದು ಪುಸ್ತಕ ತಿರುವುತ್ತಾ ಕೂತೆ. ಗಂಟೆ ಹತ್ತಾದರೂ ಆಸಾಮಿ ನಾಪತ್ತೆ. ಕಾಯುವಿಕೆ ಮುಂದುವರಿದಿತ್ತು.



ಪ್ರೇಯಸಿಗಾಗಿ ಅವಳ ಒಂದು ನೋಟಕ್ಕಾಗಿ, ಸ್ಪರ್ಶಕ್ಕಾಗಿ ಕಾದವನಂತೆ ಪುಸ್ತಕದಂಚು ಸವರುತಲಿದ್ದೆ. ಸಿ. ಇ. ಟಿ ಬರೆದು ರಿಸಲ್ಟ್‌ ಗೆ ಕಾದ ಇಂಜಿನಿಯರಿಂಗ್‌ ವಿದ್ಯಾರ್ಥಿಯಂತೆ. ಮಿಸ್‌ ಯು ಹೇಳುವ ಅವಳ ತುಟಿ ಅಂಚಿನ ಮೋಹಕತೆ.




            ಪಕ್ಕನೆ ಸಿಕ್ಕಿದ್ದೆ ಮಾರ್ಕ್ವೇಜ್ನ ʼನೋಬಡಿ ರೈಟ್ಸ್‌ ಟು ಕರ್ನಲ್ʼ. ಪುಟ ತಿರುತಿರುಗಿಸುತ್ತಾ ಕುಳಿತೆ. ಮಾರ್ಕ್ವೇಜ್‌ ಕಾಯುವಿಕೆಯೊಂದನ್ನು ರೂಪಕದಂತೆ ಇಲ್ಲಿ ಬಳಸಿದ್ದಾನೆ, ಕರ್ನಲ್‌ ಬದುಕಿನ ಸಂಧ್ಯಾ ಕಾಲವಿಡಿ ಬಾರದ ಒಂದು ಪತ್ರಕ್ಕಾಗಿ ಕಾಯುತ್ತಾನೆ. ಅರ್ಥ ನಿರರ್ಥಕಗಳ ಪರಿವೇ ಇಲ್ಲದ ಅಸಾಮಾನ್ಯ ಕಾಯುವಿಕೆ ಆತನದು. ಕಾಯುವಿಕೆಯೇ ಸುಂದರ  ಕಾದು ಕಾದು ಸುಣ್ಣವಾದರೂ ಕತೆಗಳಲ್ಲಿ ನಿಜ ಜೀವನದ ಸಿಕ್ಕುಗಳಲ್ಲಿ ಸಿಕ್ಕಿ ನಮಗೂ ಸಿಕ್ಕಿ ಅಸಾಮಾನ್ಯವಾದುದೇನೋ ಒಂದನ್ನು ಹೊಳೆಯಿಸುತ್ತಾನೆ.



                ಹೀಗೆ ತೇಜಸ್ವಿಯ ತಬರನೂ ಅಂಥವರಲ್ಲೊಬ್ಬ. ತಬರ ಬಾರದ ಪೆನ್ಶನ್ಗಾಗಿ, ತಬರನಿಗೆ ಸಾಲಕೊಟ್ಟ ಅಂಗಡಿಯಾತ ಆತನಿಗೆ ಬರಬೇಕಾದ ದುಡ್ಡಿಗೆ, ಹೆಂಡತಿ ಔಷಧಿಗಾಗಿ ಅನವರತ ಕಾಯುತ್ತಿರುತ್ತಾಳೆ. ನಾನು ಗೆಳೆಯನಿಗೆ, ಅಂಗಡಿಯಾತ ಈತ ಪುಸ್ತಕ ಕೊಳ್ಳಲಿ, ಬೋಣಿಯಾಗಲಿ ಎಂದು ಕಾಯುತ್ತಿರುತ್ತಾನೆ.

ಇನಿಯ ಅವಳ ಮೋಹಕ ನೋಟಕ್ಕೆ. ಜಗತ್ತೇ ಕಾಯುವವರ ಸಂತೆಯಂತೆ ಕಾಣಿಸುತ್ತದೆ. ಈ ಜಗದಲ್ಲಿ ಕಾಯದೇ ಇರುವವರು ಯಾರು? ಕಾಯುವಿಕೆ ಅನವರತ. 
ಹುಟ್ಟಿದವ ಸಾವಿಗೆ. ಸ್ಪರ್ಧಿ ರಿಸಲ್ಟ್‌ಗೆ ಮತದಾರ ಮತ ಎಣಿಕೆಯ ರೋಚಕತೆಗೆ. ಗುಮಾಸ್ತ ಪ್ರಮೋಷನ್‌ಗೆ.
ಕೋರ್ಟನ ವಿಚಾರಣೆಗೆ ಕಾಯುವ ಅನಸೂಯಳಂತೆ ನಾವೆಲ್ಲಾ ಯಾವುದೋ ಫಲಿತಕ್ಕಾಗಿ ಕಾಯುತ್ತಿರುತ್ತೇವೆ.
        ನೈದಿಲೆಯು ಸೂರ್ಯನಿಗೆ, ಚಕೋರಿಯು ಚಂದ್ರನಿಗೆ ಕಾದಂತೆ. ಇಲ್ಲಿ ಎಲ್ಲರೂ ಕಾಯುವವರೇ.       


 

ಕಾಯುವ ಸುಖಕಷ್ಟ ಕುರಿತು ಚಂದದ ಲೇಖನ ಈ ಕೃತಿಯಲ್ಲಿ ಉಂಟು. 

    ಕಾಯುವುದರಲ್ಲೂ ಕಾಯಕ್ಕೆ ಸುಖವುಂಟು. ಅದಮ್ಯವಾದ ಪ್ರೀತಿಯುಂಟು. ಕಾಯ ಕಾಯಬೇಕು. ಅಹಲ್ಯ ಮತ್ತು ಶಬರಿ ರಾಮನಿಗಾಗಿ ಕಾಯುವಿಕೆಗೆ ಕೊನೆಯುಂಟೆ? ಅಂದ ಹಾಗೆ ನೀವು ಯಾವುದಕ್ಕೆ ಕಾಯುತ್ತಿರುವಿರಿ.


ಶ್ರೀಧರ್‌ ಎಸ್. ಸಿದ್ದಾಪುರ.

Saturday, June 5, 2021

ಇತಿಹಾಸ ಹೊಸೆದ ಹೂ ಬಳ್ಳಿ ಹೊಸಗುಂದ...






ಹೂ ಅರಳುವ ಹೊತ್ತು. ಮಲಗಲು ಹೋದ ರವಿ ಇನ್ನೂ ಎದ್ದಿರಲಿಲ್ಲ. ಒಮ್ನಿಯ ಲಾಟಾನು ಬೆಳಕನು ಮುಂದ್ಹಾಯಿಸಿ ಮಂಜಿನ ಪರದೆ ಸೀಳಿ ನಮ್ಮ ವಾಹನ ಸಾಗರ ತಾಲೂಕಿನ ಆನಂದಪುರದ ಸನಿಹದ ಹೊಸಗುಂದದತ್ತ ಧಾವಿಸುತಲಿತ್ತು. ಗೂಗಲ್ ಗುರುವಿಗೆ ಸಹಾಯಕ್ಕಾಗಿ ಪದೇ ಪದೇ ಯಾಚಿಸಿದರೂ ನಿಮ್ಮ ಮೊಬೈಲ್ ನೆಟ್ವಕರ್್ ಕ್ಷೇತ್ರದಲ್ಲಿಲ್ಲವೆಂದು ಸಂದೇಶ ತೋರಿಸುತ್ತಾ ಮುಷ್ಕರ ಹೂಡಿತ್ತು. ಆನಂದಪುರದಲಿ ಎಡಕ್ಕೆ ಹಾಯ್ದು, ಆಕಾಶಕ್ಕೆ ಚಪ್ಪರ ಹಾಸಿದ ಮರಗಳ ನಡುವೆ ಹುದುಗಿದ ಹೊಸಗುಂದವೆಂಬ ಹೊಸಲೋಕವನ್ನು ಹಳೇ ಒಮ್ನಿ ಕಾರಿನಲ್ಲೇ ತಲುಪಿಕೊಂಡೆವು.


ಹೊಸನಗರದಿಂದ ಉತ್ತರಾಭಿಮುಖವಾಗಿ ಹೊರಟು ಆನಂದಪುರದಲ್ಲಿ ಎಡಕ್ಕೆ ಹೊರಳಿದರೆ ಹೊಸಗುಂದದ ದೇವಾಲಯಗಳ ಹೆಬ್ಬಾಗಿಲಿಗೆ ಬಂದು ಬೀಳುತ್ತೀರಿ. ಇಲ್ಲಿಂದ ಕೇವಲ 12 ಕಿಲೋ ಮೀಟರ್. ಸುತ್ತಲೂ ಆವರಿಸಿದ ಭತ್ತದ ಬಯಲು. ಊರಿಗೆ ಹೊಸಗುಂದ ಹೆಸರು ಹೇಗೆ ಬಂತೆದು ಇಲ್ಲಿನವರಿಗಿನ್ನೂ ಗೊತ್ತಿಲ್ಲ. ಮನ ಸೆಳೆವ ಆಕರ್ಷಕ ಶೈಲಿಯ 12ನೆಯ ಶತಮಾನದ ದೇಗುಲ.

ಸುತ್ತೋಣ ಬನ್ನಿ...

ಪನ್ನೀರ ಪುಷ್ಕರಣಿಯಲಿ ಕಾಲು ತೋಯಿಸಿ ಮೆಟ್ಟಿಲೇರಿದಾಗ ಕಾಣಿಸಿದ್ದು ರಾಶಿ ರಾಶಿ ವೀರಗಲ್ಲು. ಕಾಲನ ಹೊಡೆತಕ್ಕೆ ಕೆಲವು ಕಂಗಾಲಾಗಿ ಮಲಗಿದ್ದರೆ ಕೆಲವೇ ಕೆಲವು ನಿಂತಿದ್ದವು. ತಮ್ಮ ಮೇಲಿನ ಅಕ್ಷರಗಳನ್ನೆಲ್ಲಾ ನುಂಗಿಕೊಂಡಿದ್ದವು ಕೆಲವು! ವೀರಗಲ್ಲಿನ ಮೇಲೂ ಕಲಾ ನೈಪುಣ್ಯ. ಚಿತ್ರ ವಿಚಿತ್ರ ಚಿತ್ರಗಳ ವಿಶಿಷ್ಟ್ಯ ವೀರಗಲ್ಲುಗಳ ಸಮೂಹವೇ ಇಲ್ಲಿದೆ. ಇಲ್ಲಿ ನಡೆದಿರಬಹುದಾದ ಯುದ್ಧಗಳ ಸಣ್ಣ ಚಳಕನ್ನು ಈ ವೀರಗಲ್ಲುಗಳು ನಮಗೆ ತೋರಿಸುತ್ತವೆ. ನಮ್ಮವರ ಇತಿಹಾಸದ ದರ್ಪಣಗಳಿವು ಎಂಬುದನ್ನೂ ಅರಿಯದೇ ಸಾಯಲು ಬಿಟ್ಟಂತಿದೆ. ಕಲ್ಲಿಗೆ ಭಾಷೆ ಬಂದಿದ್ದರೆ ಹರಟ ಬಹುದಿತ್ತು, ಇತಿಹಾಸ ಕೆದಕಬಹುದಿತ್ತು!




ಮುಂದೆ ಸಿಗುವುದೇ ದೇವಾಲಯ ಸಮುಚ್ಚಯ. ಹಾಸುಗಲ್ಲಿನ 18 ಕಂಬಗಳ ಮೇಲೆ ಅರಳಿ ನಿಂತ ನವರಂಗದ ಶೋಭೆ. ಕಲಾತ್ಮಕತೆಯಂತೂ ಅತ್ಯದ್ಭುತ. ಸ್ಫಟಿಕರೂಪಿ ಶಿವಲಿಂಗ ಲಿಪ್ಸ್ಟಿಕ್ ಹಾಕಿದಂತೆ ಕೆಂಪು. ಉಳಿದರ್ಧ ಕಂದು! ವರ್ನಾನಾತೀತ. ನೇಪಾಳದಿಂದ ತರಿಸಲಾದ ಶಿವಲಿಂಗ ಎಂಬುದು ಅರ್ಚಕರ ಅಂಬೋಣ. ದಕ್ಷಿಣ ಭಾರತದಲ್ಲೆಲ್ಲೂ ಇಂತಹ ಅಪೂರ್ವ ಲಿಂಗವಿಲ್ಲವೆನ್ನುತ್ತಾರೆ! ಮತ್ತೆ ಮತ್ತೆ ನೋಡುವಷ್ಟು ಚೆಲವು. ಶಿವಲಿಂಗ ಜೊತೆಗಿರುವ ಪ್ರಸನ್ನ ನಾರಾಯಣ ದೇವಾಲಯವೋ ಮಹದ್ಭುತಗಳಲ್ಲೊಂದು. ನಾರಾಯಣನ ಮೂರುತಿ ಪೀಠ ಸೇರಿದಂತೆ ಸುಮಾರು 7 ಅಡಿ. ಶಿವಲಿಂಗದೊಂದಿಗೆ ಪೈಪೋಟಿಗಿಳಿದಂತಿರುವ ಪ್ರಸನ್ನ ನಾರಾಯಣನ ಮೂರುತಿ. ನವರಂಗದ ಹೊರ ಭಿತ್ತಿಯಲ್ಲಿ ಅನೇಕ ಕತೆಗಳನ್ನು, ಮಿಥುನ ಶಿಲ್ಪಗಳನ್ನು ಕೆತ್ತಲಾಗಿದೆ! ಕೆತ್ತನೆಯ ನಾಜೂಕು ನಿಮ್ಮನ್ನು ಸೂರೆಗೊಳಿಸುತ್ತದೆ.





ಕೋಟೆ ಇದ್ದಿರಬಹುದೇ?

ದೇವಾಲಯದ ಸನಿಹದಲ್ಲೇ 12 ಅಡಿಗಳೆಷ್ಟು ಎತ್ತರದ ಮಣ್ಣಿನ ಗೋಡೆಗಳಿವೆ. ಯಾವುದೋ ಸಾಮಂತ ರಾಜ ಆಳ್ವಿಕೆ ಮಾಡಿರುವ ಸಾಧ್ಯತೆಗಳಿವೆ. ಕೆದಕಿದರೆ ಇತಿಹಾಸದ ಕುರುಹುಗಳು ಕಾಣ ಸಿಕ್ಕಾವು. ದೇವಾಲಯದ ಸನಿಹದ ಕಾಡು ಅಮೂಲ್ಯ ವನ ಸಂಪತ್ತಿನ ಆಗರ. 600 ವರುಷ ಹಳೆಯ ಮಾವಿನ ಮರವೊಂದು ನಾವು ಆರು ಜನ ಮುತ್ತಿಗೆ ಹಾಕಿದರೂ ಕೈ ಸಾಲದಾಯಿತು!! 500 ವರುಷ ಹಳೆಯ ಬಳ್ಳಿಗಳು, ವಿಶಿಷ್ಟ್ಯ ಪೊದೆಗಳು ಅನೇಕ ದಿನಗಳ ವರೆಗೆ ನಿಮ್ಮ ಮನಸ್ಸನ್ನು ಆವರಿಸದೇ ಬಿಡದು. 600 ಎಕೆರೆಯಲಿ ಹರಡಿದ ಹೊಸಗುಂದದ ದೇವಾಲಯ ನಿಶ್ಚಯವಾಗಿ ನಿಮಗೆ ಹೊಸ ಸ್ಟೋರಿ ನೀಡುವಲ್ಲಿ ಖಂಡಿತ ಸೋಲದು. ಇಲ್ಲಿನ ವನ ಸಂಪತ್ತನ್ನು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಸರ್ವೆ ನಡೆಸಿ 540ಕ್ಕೂ ಹೆಚ್ಚು ಅಳಿವಿನಂಚಿನ ಗಿಡಗಳಿವೆಯೆಂದು ಗುರುತಿಸಿದ್ದಾರೆ! ಅಬ್ಬಾ ಎಂದಿತು ಮನ.

ವಿಶಿಷ್ಟ್ಯ ವಿನ್ಯಾಸದ ಕಾಳಿ ದೇವಾಲಯವನ್ನು ನೋಡದೆ ಬಂದರೆ ಖಂಡಿತ ಏನೋ ಒಂದು ಕಳೆದುಕೊಂಡಂತೆ. ಕೇರಳೀಯ ಶೈಲಿಯಲ್ಲಿ ಕೆಂಪು ಕಲ್ಲಿನಲ್ಲಿ ಕಡೆದು ಕೆತ್ತಿದ್ದಾರೆ. ಅಂದವಾಗಿ ಅದಕ್ಕೆ ಮಂಗಳೂರು ಹೆಂಚು ಹೊದಿಸಲಾಗಿದೆ. ಸುತ್ತಲೂ ಸುಂದರ ಪೌಳಿಯನ್ನು ನಿರ್ಮಿಸಿದ್ದಾರೆ.

ಇತಿಹಾಸ

ಇತಿಹಾಸವನು ಕೆದಕಿದರೆ ಕ್ರಿ ಶ 9 ನೆಯ ಶತಮಾನಕ್ಕೆ ನಮ್ಮನ್ನು ಒಯ್ಯುತ್ತದೆ. ಕೆಲವೇ ವರ್ಷಗಳ ಕೆಳಗೆ ಮಣ್ಣಿನಡಿಯಲ್ಲಿ ಮಲಗಿದ್ದ ದೇವಾಲಯವು ಊರಿನವರ (ನಾರಾಯಣ ಶಾಸ್ತ್ರಿ ದಂಪತಿಗಳು) ಮತ್ತು ಉಮಾ ಮಹೇಶ್ವರ ಸೇವಾ ಟ್ರಸ್ಟ್ನ ಕಾಳಜಿಯಿಂದ ಜೀರ್ಣೋದ್ದಾರಗೊಂಡಿದೆ. ಎಲ್ಲಾ ದೇವಾಲಯಗಳನ್ನು ಮೊದಲಿದಂತೆ ನಿರ್ಮಿಸಲಾಗಿದೆ.

ಎ. ಸುಂದರಂ, ಜಿ.ವಿ ಕಲ್ಲಾಪುರ, ಸಾಮಕ್ ಅವರ ಸಂಶೋಧನೆಯ ಪರಿಶ್ರಮ ಎದ್ದು ಕಾಣುತ್ತದೆ. ಇಲ್ಲಿನ ಶಾಸನಗಳನ್ನು ಓದಿ ಇದರ ಐತಿಹ್ಯದ ಗಂಟನ್ನು ಬಿಡಿಸಿದ್ದಾರೆ. ಉತ್ಖನನ ಗೊಂಡಾಗ ಶಿಲಾಯುಗದ ಆಯುಧಗಳೂ, ಗಂಗರ ಕಾಲದ ನಾಣ್ಯಗಳೂ ಸಿಕ್ಕಿವೆ ಎಂದು ಹೇಳಲಾಗುತ್ತದೆ. 

ನಿರ್ಮಾಣ:-

ಪ್ರಸನ್ನ ನಾರಾಯಣಿ ದೇವಾಲಯವನ್ನು ಬಲದೇವನೆಂಬುವವನು 1242ರಲ್ಲಿ ನಿರ್ಮಿಸಿದನೆಂದು ಐತಿಹ್ಯ ಹೇಳುತ್ತದೆ. ಕ್ರಿ. ಶ 1320ರಲ್ಲಿ ಹೊಯ್ಸಳರ ವೀರ ಬಲ್ಲಾಳ ದೇವರಸನು ಕಂಚಿ ಕಾಳಮ್ಮದೇವಾಲಯಕ್ಕೆ ಭೂ ದಾನ ನೀಡಿದ ಶಾಸನ ಪತ್ತೆಯಾಗಿದೆ. ಗಣಪತಿ, ವೀರ ಭದ್ರ, ಮಹಿಷ ಮರ್ಧಿನಿ, ಸುಬ್ರಹ್ಮಣ್ಯ ದೇವಾಲಯ ನಿರ್ಮಿಸಿದನೆಂದು ಅಳಿಯದೇ ಉಳಿದ ಶಾಸನಗಳು ಸಾರುತ್ತವೆ. 

ಇಲ್ಲಿನ ದೇವಾಲಯಗಳು ದ್ರಾವಿಡ, ಹೊಯ್ಸಳ, ಪಲ್ಲವ , ಕೇರಳೀಯ ಶೈಲಿಗಳಲ್ಲಿ ನಿರ್ಮಿಸಲಾಗಿದೆ. ಅತ್ಯದ್ಬುತವಾದ ದೇವಾಲಯ ಸಮುಚ್ಚಯದ ಜೊತೆಗೆ 600 ಎಕರೆ ದೇವರ ಕಾಡು ಪರಿಸರಾಸಕ್ತರಿಗೆ, ಇತಿಹಾಸ ಪ್ರಿಯರಿಗೆ ಸುಗ್ರಾಸ ಭೋಜನವನುಣ ಬಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ. 

ಶ್ರೀಧರ್. ಎಸ್. ಸಿದ್ದಾಪುರ


 

Sunday, December 6, 2020

ಮಜೋಲಿ ಎಂಬ ಮಾಯಾನಗರಿ..



ಪಿಸುಗುಡುವ ಆಕಾಶ. ನಿರಭ್ರ ನೀರ ಚಿಲುಮೆಯಲಿ ಬಿದ್ದ ಹೂ ಮಳೆಯ ನೀಲಾಕಾಶ. ಎಳೆದಿಟ್ಟ ಮೀನು ಹಿಡಿವ ಛತ್ರಿಗಳು. ಇಬ್ಬನಿಯಲಿ ಮಿಂದ ರಸ್ತೆ. ಸೂರ್ಯಪ್ಪಂಗೆ ಮೋಡದ ಮರೆ. ರೇಡಿಯೋದಲಿ ಬರುತಿರೊ ಯಾವುದೋ ಅಸ್ಸಾಮಿ ಹಾಡು. ಗೋಪಾಲಕರ ಮೆರವಣಿಗೆ. ದನಕರುಗಳ ಗಂಟೆಯ ನಾದ. "ಹೇಗಿದೆ ನಮ್ಮ ಮಜೋಲಿ" ಎಂಬ ಸೈಕಲ್ ಸವಾರರ ಮುಗ್ಧ ಪ್ರಶ್ನೆ. ಬ್ರಹ್ಮಪುತ್ರ, ಲೂಯಿಟ್ (ಕಿರ್ಕಿಟಿಯಾ) ನದಿಗಳ ಬಳಸು ಹಾರದಂತಿರುವ ದ್ವೀಪ ಅಸ್ಸಾಂನ ಮನೋಹರ ಮಜೋಲಿ.
ಸೋಮಾರಿ ಸೂರ್ಯಣ್ಣ ಕಣ್ಣು ಬಿಟ್ಟಿರಲಿಲ್ಲ. ನಾವು ತಿಂಡಿ ಮುಗಿಸಿ ಮಿಶಿಂಗ್ ಸಮುದಾಯದವರ ವಿಶಿಷ್ಟ ಬಿಡಾರಗಳಿಗೆ ಲಗ್ಗೆ ಇಟ್ಟಿದ್ದೆವು. ಅಸ್ಸಾಂನಲ್ಲಿ ಬ್ರಹ್ಮಪುತ್ರ ಸೃಜಿಸಿರುವ ಸುಂದರ ದ್ವೀಪವೇ ಮಾಜೋಲಿ. ಇಲ್ಲಿನ ಆಚರಣೆಗಳು ಜೀವನ, ಬಟ್ಟೆ ಎಲ್ಲವೂ ಭಿನ್ನ.

ಮಿಸ್ಟೀರಿಯಸ್ ಮಜೋಲಿ...


ಜೋಹರ್ಾಟ್ನಿಂದ ನಿಮತಿ ಘಾಟ್ನಿಂದ ಲಾಂಚ್ನಲಿ ಇಪ್ಪತ್ತು 

ನಿಮಿಷ ದಾಟ ಬೇಕಾದಷ್ಟು ಹರವಿಕೊಂಡ ನದಿ ಪಾತ್ರ. ನದಿಯೋ 

ಸಮುದ್ರವೋ ಎಂದು ತಿಳಿಯದಷ್ಟು ವಿಸ್ತಾರ. ಫೆರಿಯಲ್ಲಿ ಕುಳಿತರೆ ವಿಚಿತ್ರ 

ವಾಸನೆ! ಹೊಟ್ಟೆ ತುಂಬಿದರೆ ಮುಗಿದೇ ಹೋಯಿತು. ವಿಚಿತ್ರ ದೋಣೆಯಲಿ 

ಮೀನುಗಾರರ ಮೀನ ಭೇಟೆ. ಪೆಟ್ರೋಲ್ ಬ್ಯಾರಕ್ ತುಂಬಿಸಿಕೊಂಡು ಹೊರಟ 

ಐ. ಓ. ಸಿ. ಯವರ ಫೆರಿಗಳು. ನೂರಾರು ವರುಷಗಳಿಂದ ಈ ಪುಣ್ಯ 

ಭೂಮಿಯಲ್ಲಿ ಆಚರಿಸುವ ವಿಶಿಷ್ಟ ಹಬ್ಬ ರಾಮ್ ಲೀಲಾಗೆ ಹೋದಾಗ ಕಂಡ 

ಅಸ್ಸಾಂನ ಮಜೋಲಿಯ ಅಪೂರ್ವ ನೋಟ. ಇಲ್ಲಿ ವಾಸಿಸುವ ಭಿನ್ನ 

ಸಮುದಾಯವೇ ಮಿಶಿಂಗ್. ಮೂಲತಃ ಮೀನುಗಾರರು. ಅವರ ಹಾಡು 

ಪಾಡುಗಳ ಸುಂದರ ಕಥಾನಕ. ಹರಿ ಕತೆ ಶುರು ಮಾಡೋಣವೇ?



ಮಾಜೋಲಿಯ ಮಿಶಿಂಗ್ ಸಮುದಾಯ:-

ಶತಮಾನಗಳಿಂದ ಇಲ್ಲೇ ವಾಸವಾಗಿರುವ ಇವರು ರೂಪಿಸಿಕೊಂಡ ತಮ್ಮ ವಿಚಿತ್ರ ಆಚರಣೆಗಳು, ಜೀವನ ವಿಧಾನಗಳು ನೋಡಲು ಸಿಕ್ಕಿದ್ದು ನಮ್ಮ ಗೆಳೆಯ ಸುಭಾಸ್ ಬಿಸ್ವಾಸ್ ಮತ್ತು ನಾಗರಾಜ್ರ ಸಹಕಾರದಿಂದ.
ಅನೇಕ ಬುಡಕಟ್ಟುಗಳು 1,150 ಚದರ ಕಿಲೋ ಮಿಟರ್ ವಿಸ್ತೀರ್ಣದಲಿ ಹರಡಿಕೊಂಡಿದ್ದಾರೆ. ಸೂರ್ಯ ಚಂದ್ರನನ್ನು ದೇವರಂತೆ ಆಧರಿಸುತ್ತಾರೆ. ಬಿದಿರು ಇವರ ಪ್ರಧಾನ ಜೀವನ ಆಧಾರ ಸರಕು. ಬಿದಿರಿನಿಂದ ಮಾಡಿದ ಅತಿ ಸರಳ ಅಟ್ಟಣಿಗೆಯ ಮನೆ. ಬಿದಿರ ಗೋಡೆಗೆ ಮಣ್ಣಿನ ಮುಚ್ಚಿಗೆ. ಹುಲ್ಲಿನ ಮಾಡು.  ಬಿದಿರಿನಿಂದ ಮಾಡಿದ ವಿಶಿಷ್ಟ ಬುಟ್ಟಿಗಳು. ಏರಿಸಿ ಇಳಿಸಬಹುದಾದ ವಿಶಿಷ್ಟ ಮನೆ! ಬ್ರಹ್ಮಪುತ್ರ ನದಿಯ ನೀರಿಳಿದಾಗ ಮನೆಯನ್ನು ಕೆಳಗಿಳಿಸುವರು! ಮನೆಯೊಳಗೆ ಹೋಗಬೇಕಾದರೆ ಏಣಿಯೊಂದು ಬೇಕೇ ಬೇಕು.












ಇಲ್ಲಿ ಮೀನು ಹಿಡಿಯುವ ಕ್ರಮವೂ ವಿಶಿಷ್ಟ. ಎರಡು ಬಿದಿರ ಕಂಬಗಳಿಗೆ ಅಡ್ಡಲಾಗಿ ಬಿದಿರ ಕೋಲುಗಳು ಅವಕ್ಕೆ ದೊಡ್ಡದಾದ ಬಲೆಯೊಂದನ್ನು ಕಟ್ಟಿ ಬ್ರಹ್ಮಪುತ್ರ ನದಿಯಲಿ ಇಳಿ ಬಿಡುವರು. ಬಲೆ ತುದಿಗೊಂದು ಹಗ್ಗ ಸಿಕ್ಕಿಸುವರು. ಗಂಟೆಗಳ ಕಾಲ ಕಾದು ಮೀನುಗಳು ಬಲೆಯ ಮೇಲೆ ಓಡಾಡುತ್ತಲೇ ಹಗ್ಗ ನಿಧಾನಕ್ಕೆ ಮೇಲೆತ್ತುವರು. ಕೆಲವೊಮ್ಮೆ ಹೊಟ್ಟೆ ತುಂಬುವಷ್ಟು ಮೀನು ಕೆಲವೊಮ್ಮೆ ಖಾಲಿ ಕೈ.
ಇವರ ದೋಣಿಗಳಂತೂ ಕರೀನಾ ಕಪೂರನ ಸೊಂಟಕ್ಕಿಂತಲೂ ಸಪೂರ. ಕುಳಿತರೆ ಅಲುಗುವ ಪುಟಾಣಿ ದೋಣಿಯಲಿ ಜೀವ ಕಿಸೆಯೊಳಗಿಟ್ಟು ಒಂದೆರಡು ಪರ್ಲಾಂಗ್ ಪ್ರಯಾಣಿಸಿದ ಅನುಭವಂತೂ ಅನನ್ಯ. ಯಾವಾಗ ಇಳಿದೆನೋ ಎಂಬ ಆತಂಕ.  ದೊಡ್ಡ ದೊಡ್ಡ ಲಾಂಚ್ಗಳಂತೂ ಬ್ರಹ್ಮಪುತ್ರದಲ್ಲಿ ಕಿಲೋಮೀಟರ್ಗಟ್ಟಲೆ ಪ್ರಯಾಣಿಸುತ್ತವೆ. ಅಂತಹ ದೋಣಿಗಳಲ್ಲೂ ನಾವೊಂದು ಸುತ್ತು ಹೊಡೆದು ಬಂದೆವು. 



ಯಾರಲ್ಲೂ ಕಲಿಯದೆ ಕೊಳಲು ನುಡಿಸುವುದರಲ್ಲಿ ಇವರದು ಎತ್ತಿದ ಕೈ. ಮನೆಯ ಹೆಣ್ಣು ಮಕ್ಕಳೆಲ್ಲಾ ಸೇರಿ ಶಾಲುಗಳನ್ನು, ದಂತ, ಅರಶಿನ ಬಣ್ಣದ ಅಸ್ಸಾಂ ಸೀರೆ ನೇಯುವುದು ಇವರ ಉಪ ಕಸುಬುಗಳು. ಇವರು ನೇಯುವ ಶಾಲುಗಳು, ಸೀರೆಗಳು ಇವರಂತೆ ಬಹಳ ನಾಜೂಕು. ಇಲ್ಲಿನ ಸೀರೆಗಳು ವಿದೇಶದಲ್ಲೂ ತಮ್ಮ ತನ ಕಾಯ್ದುಕೊಂಡಿವೆ. ತಮ್ಮದೇ ಆದ ನೇಕಾರರ ಸೊಸೈಟಿ ನಿಮರ್ಿಸಿಕೊಂಡಿದ್ದಾರೆ. ಮನೆಗೆ ಅಗತ್ಯವಾದ ಮಡಿಕೆಗಳನ್ನು ಇವರೇ ತಯಾರಿಸುವರು. ಚಕ್ರ ಬಳಸದೆಯೇ ಮಡಿಕೆ ತಯಾರಿಸುವ ವಿಧಾನ ಅಚ್ಚರಿ ಹುಟ್ಟಿಸುತ್ತದೆ. ಇದು ಹರಪ್ಪ ಮಹಿಂಜೋದಾರೋನಲ್ಲಿನ ವಿಧಾನಕ್ಕೆ ಅತಿ ಸಮೀಪವಿದೆ ಎನ್ನುತಾರೆ ಸಂಶೋಧಕರು! 



ದೇವಾಲಯಗಳು:-  





ಇವರು ಆಚರಿಸುವ ರಾಸ್ ಲೀಲಾ ಹಬ್ಬವು ಇವರ ವಿಶಿಷ್ಟ ದೇವಾಲಯಗಳಲ್ಲಿ ಆಚರಿಸಲ್ಪಡುತ್ತದೆ. ಇವರ ದೇವಾಲಯಗಳನ್ನು ಸತ್ರಾ ಎಂದು ಕರೆಯುತ್ತಾರೆ. ಕಮಲಾ ಬರಿ ಸತ್ರ ಒಂದು ವಿಶಿಷ್ಟ ದೇವಾಲಯವಾಗಿದ್ದು ಇಲ್ಲಿ ಕಲೆ ಮತ್ತು ಕುಸುರಿಗೆ ಪ್ರಖ್ಯಾತಿಯನ್ನು ಹೊಂದಿದೆ. ಗುರು ಶ್ರೀ ಶಂಕರ್ ದೇವ್ ಅವರು 1500 ನೆಯ ಇಸವಿಯ ಸುಮಾರಿಗೆ ಇದನ್ನು ಸ್ಥಾಪಿಸಲಾಗಿದೆ ಎಂದು ಹೇಳಲಾಗುತ್ತದೆ. ಇಲ್ಲಿ ಗರುಡನ ದೊಡ್ಡ ಮುಖವಾಡವೊಂದನ್ನು ಮಾಡಿಡಲಾಗಿದೆ. ರಾಸ್ ಲೀಲಾದ ಸಮಯದಲ್ಲಿ ಇಲ್ಲಿ ವಿಶೇಷವಾದ ದೋಣಿಯೊಂದನ್ನು ನಿಮರ್ಿಸಲಾಗುತ್ತದೆ. ಅಂತಹ ದೋಣಿ ನಿಮರ್ಾಣಕ್ಕೆ ಸಾಕ್ಷಿಯಾದುದು ನಮ್ಮ ಸುದೈವ. ಇದರಲ್ಲಿ ಕೃಷ್ಣ ತನ್ನ ಪ್ರೇಯಸಿ ರಾಧಳೊಂದಿಗೆ ನೃತ್ಯ ಮಾಡುತ್ತಾ ಬರುವಂತೆ ಚಿತ್ರಿಸುತ್ತಾರೆ. ಇಲ್ಲಿನ ಎಲ್ಲಾ ಸತ್ರಗಳಿಗೂ ಒಂದಕ್ಕೊಂದು ಹೋಲಿಕೆಗಳಿವೆ. ಇವರ ಪೂಜಾ ವಿಧಾನಗಳೂ ವಿಭಿನ್ನ. ನಿಯೋ ವೈಷ್ಣವ ಪಂಗಡಕ್ಕೆ ಇಲ್ಲಿನ ಅರ್ಚಕರು ಸೇರಿದವರಾಗಿದ್ದಾರೆ. ಹೆಚ್ಚಿನವರು ಬ್ರಹ್ಮಚಾರಿಗಳು. ಗಾರಮುರ್ಹ ಸತ್ರದಲಿ ಅರ್ಚಕರು ಸೇರಿ ಯಾವುದೋ ಮಂತ್ರ ಪಠಣದಲಿ ತೊಡಗಿದ್ದರು. ಡೋಲಕ್ ಬಳಸಿ ಇವರು ಮಾಡುವ ಅತ್ಯಾಕರ್ಷಕ ನೃತ್ಯ ನಮ್ಮ ಕ್ಯಾಮರವನ್ನು ತಣಿಸಿತು. ತೋಪು ತುಪಾಕಿಗಳನ್ನು ಸಂಗ್ರಹಿಸಿಟ್ಟ 'ಗಾರಮುರ್ಹ' ಸತ್ರ (ವಿಶಿಷ್ಟ ದೇವಾಲಯ) ಬಹಳ ವಿಶಿಷ್ಟವಾಗಿದೆ. ಇಲ್ಲಿ  ವಿದೇಶಿ ಹಕ್ಕಿಗಳೂ ಸಾವಿರ ಸಾವಿರ ಸಂಖ್ಯೆಯಲ್ಲಿ ನವೆಂಬರ್ ಮಾಸದಲ್ಲಿ ಇಲ್ಲಿಗೆ ಆಗಮಿಸುತ್ತವೆ.



ರಾಸ್ ಲೀಲಾ:- 

ಕೃಷ್ಣನ ಲೀಲೆಗಳನ್ನು ತೋರಿಸುವ ಒಂದು ವಿಶಿಷ್ಟ ಹಬ್ಬ. ನವೆಂಬರ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಎಲ್ಲಾ ಸತ್ರಗಳಲ್ಲಿ ಈ ಹಬ್ಬವನ್ನು ವಿಶಿಷ್ಟವಾಗಿ ಆಚರಿಸುತ್ತಾರೆ. ಊರಿನ ತುಂಬಾ ಹಬ್ಬದಿನ ಹಚ್ಚುವ ಹಣತೆ ಬಹಳ ವಿಭಿನ್ನ. ಕಮಲಾ ಬರಿ ಸತ್ರದಲ್ಲಿ ದೋಣಿಗಳನ್ನು ನಿಮರ್ಿಸಿ ಅದರಲ್ಲಿ ಕೃಷ್ಣ ವೇದಿಕೆಗೆ ಬರುವಂತೆ ಮಾಡುವ ಕ್ರಮ ಅನನ್ಯವಾದುದು. ಭಿನ್ನವಾದ ಬೆಳಕಿನ ವ್ಯವಸ್ಥೆ ಹಬ್ಬದ ದಿನ ಊರಿನವರಿಗೆ ಹಾಗೂ ಅತಿಥಿಗಳಿಗೆ ಪುಷ್ಕಳವಾದ ಭೋಜನದ ವ್ಯವಸ್ಥೆ ಇರುತ್ತದೆ. ಪ್ರತಿ ಸಂಜೆ ನಾಟಕಗಳು, ಸತ್ರದ ಬ್ರಹ್ಮಚಾರಿಗಳಿಂದ ವಿಶಿಷ್ಟ ನೃತ್ಯ ಹಾಗೂ ಕೃಷ್ಣನ ರಾಸ ಲೀಲೆಗಳನ್ನು ಪದ್ಯಗಳೊಂದಿಗೆ ಆಡಿ ತೋರಿಸುವರು. ಹಬ್ಬದ ಹಿಂದಿನ ದಿನದಿಂದಲೇ ಪ್ರದರ್ಶನಕ್ಕಾಗಿ ಅಭ್ಯಾಸ ನೋಡಬಹುದು ಜೊತೆಗೆ 




ಭತ್ತದ ಬಯಲಾಗಿರುವ ಮಜೋಲಿಯಲಿ ಊಟವಂತು ಬಲು ಕಡಿಮೆ ದರದಲ್ಲಿ ಲಭ್ಯ ಮತ್ತು ಬಲು ರುಚಿಕರ. ಕೇವಲ ಹತ್ತು ರೂಪಾಯಿಗೆ ರೊಟ್ಟಿ ಮತ್ತು ಚಹಾ ಲಭ್ಯ. ಇಂತಹ ವಿಭಿನ್ನ ಸಮುದಾಯವಿರುವ ಮಜೋಲಿ ಬಲು ವಿಶಿಷ್ಟವಾಗಿ ನಿಲ್ಲುತ್ತದೆ. 
                              
                                                                                                      ಶ್ರೀಧರ್. ಎಸ್. ಸಿದ್ದಾಪುರ.
 

Wednesday, April 1, 2020

ಕರೋನಾ ಕೆರೆತ!


ಕರೋನದಿಂದ ಅತ್ಯಂತ ಅನ್ಯಾಯಕ್ಕೊಳಗಾದ, ನಿರ್ಲಕ್ಷಕೊಳಗಾದ ನಮ್ಮ ದೇಹದ ಭಾಗವೆಂದರೆ ಅದು ಮೂಗು! ಅಯ್ಯೋ ಶಿವನೆ, ಏನು ಹೇಳುತ್ತಾನೆಂದು ಆಶ್ಚರ್ಯವಾಯಿತೇ? ಸ್ವಲ್ಪ ತಾಳ್ಮೆ ಇರಲಿ. ತಲೆ ಬುಡವಿಲ್ಲದ ಸಂಗತಿಗಳನ್ನು ಹೇಳುತ್ತಾನೆಂದು ಅನ್ಕೊಬೇಡಿ.
 ಹೌದು. ಕೋವಿಡ್-19 ಬಂದಾಗಲೇ ವ್ಯಾಟ್ಸಪ್ ಮತ್ತು ಎಫ್ ಬಿ  ಗಳಲ್ಲಿ ಅನುಸರಿಸಬೇಕಾದ ಆವಶ್ಯಕ ಕ್ರಮಗಳ ಕುರಿತು ಟನ್ ಗಟ್ಟಲೆ ಮಾಹಿತಿ ಹರಿದು ಬಂದಿತು. ಅದರ ಮೊದಲ ಅಂಶವೆಂದರೆ ನಮ್ಮ ದೇಹದ ಒಂದು ಭಾಗವಾದ ಮುಖವನ್ನು ಮುಟ್ಟುವಂತಿಲ್ಲ. ಜೊತೆಗೆ ಮೂಗು ಕಣ್ಣು, ಬಾಯಿ ಮುಟ್ಟುವಂತಿಲ್ಲ. ಯಾರೋ ನಮ್ಮ ದೇಹದ ಭಾಗವನ್ನು ಮುಟ್ಟಬೇಡಿ ಎಂಬ ವಿಚಿತ್ರ ನಿಬಂಧನೆ ಬೇರೆ. 
 ಈ ಸುದ್ದಿ ತಿಳಿಯುತ್ತಲೆ ರಚ್ಚೆ ಬಿದ್ದ ಮಗುವಿನಂತಾಗಿದೆ ಮೂಗು! ನಾ ಹೇಳುವುದನ್ನು ಕೇಳದೆ ಪ್ರತಿಭಟನೆಗೆ ಬಿದ್ದಿದೆ. ಮುದ್ದಿಸು ಮುದ್ದಿಸು ಎನುತಿದೆ! ಪ್ರತೀ ಕ್ಷಣವೂ ಮುಟ್ಟು ಮುಟ್ಟು ಎಂದು ತೋರಿಕೆ ತುರಿಕೆ ಉಂಟು ಮಾಡಿ ಯಾವುದೋ ಪ್ರಲೋಭನೆ ಒಡ್ಡುತಿದೆ. ಹೇಗಾದರೂ ಮುಟ್ಟು ಮರಾಯ ಎನ್ನುತಿದೆ. ಏನು ಮಾಡುವುದೆಂದು ತೋಚಲೇ ಇಲ್ಲ. ಮೊದಲ ದಿನವಂತೂ ತಡೆದುಕೊಂಡೆ. ಆದರೆ ಮುಟ್ಟ ಬೇಕೆನ್ನುವ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಯಿತು. 

ಎರಡನೇ ದಿನಕ್ಕೆ ಹೊಸ ಐಡಿಯಾದೊಂದಿಗೆ ಬಂದೆ ತಲೆ ಬಾಚುವ ಹಣಿಗೆಯೊಂದನ್ನು ಸಾನಿಟೈಸ್ ಮಾಡಿ ಇಟ್ಟುಕೊಂಡೆ. ಅದಕ್ಕೂ ದಿನಕ್ಕೆರಡು ಬಾರಿ ಸ್ನಾನ. ತುರಿಸು ತುರಿಸು ಎಂದೊಡನೆ ಅದನ್ನೇ ಹಾಕಿ ತಿಕ್ಕಲು ಸುರುಮಾಡಿದೆ. ಕೋವಿಡ್ ಹರಡುತ್ತಲೆ ನನ್ನ ಪರಿಸ್ಥಿತಿ ಈಗ ವಿಕೋಪಕ್ಕೆ ಹೋಗಿದೆ.  ನನ್ನ ಮುಖವನ್ನೇ ನಾನು ನೋಡಲು ಅಸಹ್ಯ ಪಡುವಂತಾಗಿದೆ. ಅಡ್ಡ ಗೀರು ಉದ್ದಗೀರುಗಳು ಮುಖದ ತುಂಬಾ ಮೂಡಿವೆ. ಬಾಚಣಿಗೆಯಲ್ಲಿ ಕೆರೆದು ಕೆರೆದು ಮೂಗು ಗಡ್ಡಗಳೆಲ್ಲಾ ಕೆಂಪು ಕೆಂಪಾಗಿ ವಿಚಿತ್ರ ಕೆಂಪು ಮೂತಿಯ ಮಂಗನಂತಾಗಿರುವೆ. ಆದರೆ ಕೆರೆತ ಕಡಿಮೆಯಾಗಿಲ್ಲ.

  ಜೊತೆಗೆ ಅಮ್ಮ ಹೇಳಿದ ಎಲ್ಲಾ ಆಯರ್ುವೇದದ ಗಿಡ ಮೂಲಿಕೆಯನ್ನೆಲ್ಲಾ ಅರೆದು ಹಚ್ಚಿದೆ. ಹೆಚ್ಚಿತೆ ಹೊರತು ಕಡಿಮೆಯಾಗಿಲ್ಲ. ಪಾಪದ ಯಾವುದ್ಯಾವುದೋ ಜೇಡಗಳ ಮೇಲೆ ಆಪಾದನೆ ಮಾಡಿದ್ದಾಳೆ ಹೆಂಡತಿ .  ಕೇಳಿಸಿ ಕೊಂಡರೆ ಕಷ್ಟ , ಅವು ಮಾನ ನಷ್ಟ ಮೊಕದ್ದಮೆ ಹೂಡಿಯಾವು ಎಂಬ ಭಯ! 


ಯಾವುದನ್ನು ಮಾಡಬೇಡ ಎನ್ನುವರೊ ಅದನ್ನೇ ಮಾಡಬೇಕು ಎಂಬ ವಿಚಿತ್ರ ಬಯಕೆ ನಮ್ಮ ಮನಸ್ಸಿಗುಂಟಾಗುವುವದೆಂದು ಹೆಂಡತಿ ಹೊಸ ಥಿಯರಿಯೊಂದನ್ನು ಘೋಷಿಸಿ ನನ್ನನ್ನು ಮತ್ತಷ್ಟು ಗೊಂದಲಕ್ಕೀಡು ಮಾಡಿದ್ದಾಳೆ. ಜೊತೆ ಹೊಸದೊಂದು ಮಾನಸಿಕ ಖಾಯಿಲೆಯನ್ನು ಅಂಟಿಸಲು ಹೊರಟಿದ್ದಾಳೆ!  ಏನು ಮಾಡಲಿ. ಕೈ ತೊಳೆದು ತೊಳೆದು ಚರ್ಮ ಸವೆಯುತ್ತಾ ಬಂದಿದೆ. ಉಳಿದ 14 ದಿನ ಉಳಿವುದು ಕಷ್ಟ. ಹಾಗಾಗಿ ಹೊಸ ಉಪಾಯ ಹೂಡಬೇಕು. ನಿಮಗೆ ಹೊಳೆದರೆ ನನಗೂ ಸ್ವಲ್ಪ ಹೇಳಿ. ಇಲ್ಲದಿದ್ದರೆ ನಷ್ಟ ಪರಿಹಾರ ಕೋರಿ ನಾನೆ ಒಂದು ಮೊಕದ್ದಮೆ ಹೂಡಬೇಕೆಂದಿರುವೆ. ಯಾರ ಮೇಲೆ ಎಂದು ಇನ್ನೂ ಯೋಚಿಸಿಲ್ಲ. ಇನ್ನೂ 14 ದಿನವಿದೆಯೆಲ್ಲಾ ಯೋಚಿಸಿದರಾಯ್ತು!
 ಯಾರು ನನ್ನ ಸ್ವಯಂ ಅಧಿಕಾರ ಕಿತ್ತುಕೊಂಡರೋ ಅವರೇ ನನ್ನ ಮೂಗು ಮುಟ್ಟಿಕೊಳ್ಳುವ ಅಧಿಕಾರ ನೀಡಬೇಕು ತನ್ಮೂಲಕ ನನ್ನ ಮೂಗಿನ ಕೆರೆತ ನಿಲ್ಲಿಸ ಬೇಕಾಗಿ ಕಳಕಳಿಯ ವಿನಂತಿ.
#_ಮನೆಯಲ್ಲೇ_ಇರೋಣ_ಮತ್ತಷ್ಟು_ಕೆರೆಯೋಣ!
#_lockdown .
�

Monday, March 30, 2020

ಜಾತ್ರೆ ಎಂಬ ನವಿರಾದ ನವಿಲುಗರಿ.



ಜಾತ್ರೆ ಎಂದರೆ ಬಿಡುವು. ಜಾತ್ರೆ ಎಂದರೆ ಸೇರುವಿಕೆ. ಜಾತ್ರೆ ಎಂದರೆ ಜಂಗುಳಿ. ಮಕ್ಕಳಿಗೆ ಜಾತ್ರೆ ಎಂದರೆ ಉತ್ಸಾಹ, ಆಟಿಕೆ ಅಂಗಡಿಗಳು. ಜಾತ್ರೆ ಎಂದರೆ ಏಕತಾನತೆ ಮುರಿವ ಸಂಸ್ಕ್ರತಿಯ ಬಿಂದುಗಳಾಗಿ ನನಗೆ ಕಾಣುತ್ತೆ.
ಈ ಜಾತ್ರೆ ಅಜ್ಜಿಯೂರಾದ ಬೈಂದೂರ ನೆನಪು ಹೊತ್ತು ತರುವುದು. ಜೊತೆ ಜೊತೆಗೆ ಮಾವು ಕದ್ದ, ಚಿಕ್ಕವಯಸ್ಸಿನಲ್ಲೇ ಎಷ್ಟೋ ಕಿಲೋ ಮೀಟರ್ ನಡೆದ, ನವಿರಾದ ಹೆಸರ ಪಾಯಸ ಹೊಡೆದ, ತಮ್ಮನನ್ನು ಗೋಳು ಹೊಯ್ದು ಕೊಂಡ ನೆನಪುಗಳ ತಕದಿಮಿತ.




ಆಗೆಲ್ಲಾ ನಮಗೆ ಜಾತ್ರೆಗಾಗಿ ನೀಡುವ ಹಣ ಅಷ್ಟಕ್ಕಷ್ಟೆ. ಸ್ವಾಭಿಮಾನದಿಂದಾಗಿ ಯಾರಲ್ಲೂ ಬೇಡುವಂತಿರಲಿಲ್ಲ.  ಜಾತ್ರೆಗಾಗಿ ಕಾಸು ಕೂಡಿಸುವ ಕನಸು. ತರೆವಾರಿ ಅಂಗಡಿಗಳ, ಒಂದು ಆಟಿಕೆ ಕೊಳ್ಳುವ ತವಕ. ಹೇಗೆಂಬ ಚಿಂತೆ? ಶಾಲೆಗೆ ಹೋಗಲು ನೀಡುವ ಹಣವನ್ನು ನೆಡದೇ ಹೋಗಿ ಉಳಿಸುವುದು. ಅಡುಗೆಗೆ ಸಹಾಯಕರಾಗಿ ಹೋಗುವುದು. ಬಡಿಸಲು ಹೋಗುವುದು, ನಮ್ಮ ಕೆಲಸವಾಗಿತ್ತು.

ನಾವು ಚಿಕ್ಕವರಿದ್ದಾಗ ನಮ್ಮಜ್ಜಿ ಮನೆಯ ಹತ್ತಿರದಲ್ಲೇ ಅಜ್ಜಿಯ ಅತ್ತೆಯೊಬ್ಬರಿದ್ದರು. ಶಿಕ್ಷಕಿಯಾಗಿ ನಿವೃತ್ತರಾದವರು. ಅವರಿಗೆ ನಡೆಯಲಾಗುತ್ತಿರಲಿಲ್ಲ. ದೊಡ್ಡ ಮನೆ, ದೊಡ್ಡ ಜಾಗ, ನಿವೃತ್ತಿ ವೇತನ ಎಲ್ಲವೂ ಇತ್ತು. ನೋಡಿಕೊಳ್ಳಲು ಮಾತ್ರ ಯಾರಿರಲಿಲ್ಲ. ಗಂಡ ಯಾವಾಗಲೋ ತೀರಿ ಹೋಗಿದ್ದರು. ಮಕ್ಕಳಿರಲಿಲ್ಲ. ನಮ್ಮಜ್ಜಿಯನ್ನು ಗೋಳು ಹೊಯ್ದುಕೊಂಡ ಅವರು ಆಗ ಅಜ್ಜಿಯನ್ನೇ ಅವಲಂಬಿಸಿದ್ದರು. ರಜೆ ಬಂದಿತೆಂದರೆ ಅಜ್ಜಿಗೆ ಅವರ ಸೇವೆಯಿಂದ ಮುಕ್ತಿ. ನಮ್ಮ ಸೇವೆ ಶುರು. ದಿನಾಲೂ ಬೆಳಗ್ಗೆ ಚಹ, ಮಧ್ಯಾಹ್ನ ಊಟ, ಸಂಜೆಗೆ ಚಹ ಇಷ್ಟನ್ನು ಹೋಟೆಲ್ಗೆ ಹೋಗಿ ತಂದು ಕೊಡಬೇಕಿತ್ತು. ಒಂದಿನಕ್ಕೆ ನಮಗೆ, ಅಂದರೆ ನನ್ನಿಬ್ಬರು ತಮ್ಮಂದಿರು ಶ್ರೀಕಾಂತ, ಶ್ರೀಪತಿಗೆ ಸೇರಿ ತಲಾ ನಾಲ್ಕಾಣೆ ಕೊಡುತ್ತಿದ್ದರು. ಆಟದ ನಡುವೆಯೂ ಆಟಿಕೆ ಆಸೆಗೆ ದಿನಾಲೂ ಚಹ ಸೇವೆಗೆ ಹೋಗುತ್ತಿದ್ದೆವು. ಸೇವೆ ಜೊತೆಗೊದಿಷ್ಟು ಹಣ ಸಂಪಾದನೆಯೂ ಆಗುತ್ತಿತ್ತು. ಆಟಿಕೆ ಕೊಂಡು ವಿಶಾಲ ಹರವಿನ ಅಜ್ಜಿ ಮನೆಯಲ್ಲಿ ಆಡುವ ಸಂತೋಷವೇ ಬೇರೆ. ಎಷ್ಟೋ ವರ್ಷ ಅವರಿಗೆ ಚಹ ಸೇವೆ ಮಾಡಿದೆವು. ಜಾತ್ರೆ ಮುಗಿದ ಮೇಲೆ ನಾವು ಮೂವರೂ ಹೊರಡುತ್ತಿದ್ದೆವು. ಕಣ್ಣೀರಾಗಿ ಅಮ್ಮಮ್ಮ ನಮ್ಮನ್ನು ಬೀಳ್ಕೊಡುತ್ತಿದ್ದರು. ಒಲ್ಲದ ಮನಸಿನಿಂದ ನಮಗೆ ಮಾವ, ಅತ್ತೆಯೂ ಪ್ರೀತಿಯ ವಿದಾಯ ಕೋರುತ್ತಿದ್ದರು. ಜಾತ್ರೆ ನೋಡಿ ಆಟಿಕೆಯೊಂದಿಗೆ ಮರಳುತ್ತಿದ್ದೆವು. ಜಾತ್ರೆ ಎಂದರೆ ಆಟಿಕೆ, ಅಮ್ಮಮ್ಮ ಹಾಗೂ ಅವರ ಅತ್ತಿಗೆ ನೆನಪಾಗುತ್ತಾರೆ.

ಜಾತ್ರೆ ಎಂದರೆ ಈಗ ಆಗಿನಷ್ಟು ಕುತೂಹಲ ಉಳಿದಿಲ್ಲ. ಬಹುಶಃ ನಾವು ದೊಡ್ಡವರಾದೆವೆಂದು ಕಾಣುತ್ತೆ. ದ ಲಾ ಆಪ್ ಮಾಜರ್ಿನಲ್ ಯುಟಿಲಿಟಿ ಜಾತ್ರೆಗೂ ಅನ್ವಯಿಸುತ್ತೆ ಅನಿಸಲಿಕ್ಕೆ ಶುರುವಾಗಿದೆ. ಕಳೆ ಕಳೆದುಕೊಂಡ ಬೈಂದೂರು ಸಪ್ಪಗೆ ಕುಳಿತಿದೆ. ನನ್ನ ಬಾಲ್ಯದ ಗೆಳೆಯರಿಬ್ಬರೂ ಈಗ ಬದುಕಿನ ಸಂತೆಯಲ್ಲಿ ಕಳೆದುಹೋಗಿದ್ದಾರೆ!
ಶ್ರೀಧರ್. ಎಸ್. ಸಿದ್ದಾಪುರ.
ರಥಬೀದಿ, ಸಿದ್ದಾಪುರ ಅಂಚೆ,
ಕುಂದಾಪುರ ತಾಲೂಕು.
ಉಡುಪಿ ಜಿಲ್ಲೆ-576229.

Tuesday, March 24, 2020

'ಅಂತರಂಗ'ದಲ್ಲಿ ಅನಂತ ಪಯಣ...



ನಾವು ಯಾವಾಗ ನಮಗೋಸ್ಕರ ಜೀವಿಸುತ್ತೇವೆ? ನಮ್ಮ ಜೀವಿತದಲ್ಲಿ ನಡೆಯುವ ಘಟನೆಗಳಿಗೆ ಏನಾದರೂ ಕಾರ್ಯಕಾರಣ ಸಂಬಂಧವಿದೆಯೇ? ಎಲ್ಲರೂ ಮತ್ತೊಬ್ಬರ ಖುಷಿಗಾಗಿ ಹಗಲುವೇಷ ತೊಟ್ಟವರಂತೆ ಬದುಕುತ್ತೇವೆ. ಕೆಲವೊಮ್ಮೆ ನಮ್ಮ ಬದುಕಿನ ಮೇಲೆ ನಮಗೇ ಹಿಡಿತವಿಲ್ಲದೇ ಪರಿತಪಿಸುವಂತೆ ಮಾಡಿಬಿಡುವುದು. ರಾಮಾಯಾಣ ಮತ್ತು ಮಹಾಭಾರತದ ಅನೇಕ ಪಾತ್ರಗಳ ಒಳ ಹೊಕ್ಕು ಬರೆದ ಅಂತರಂಗ ವೆಂಬ ವಿಶಿಷ್ಟ ಕೃತಿಯೊಂದನ್ನು ಓದಿ ಮುಗಿಸಿದಾಗ ನನಗಾದ ಅನುಭವಗಳು. ಅಕ್ಕನಂತಹ ಗೆಳತಿ ಸುರೇಖಾ ಭೀಮಗುಳಿ ಮನಮುಟ್ಟುವಂತೆ ಬರೆದಿದ್ದಾರೆ.
ಶ್ರುತಕೀತರ್ಿ, ಮಾಂಡವಿಯ ಸ್ವಗತಗಳು ನಮಗೆ ಹಾಗನ್ನಿಸದೇ ಇರಲು ಬಿಡಲಾರವು. ಯಾರ್ಯಾರಿಗಾಗಿಯೋ ನಾವು ತೊಟ್ಟ ವೇಷವೇ ನಮಗೇ ಒತ್ತಡವನ್ನುಂಟು ಮಾಡುತ್ತವೆ. ಪ್ರತಿ ಪಾತ್ರವು ಕನ್ನಡಿಯಲ್ಲಿ ತಮ್ಮನ್ನು ತಾವೇ ನೋಡಿಕೊಂಡಂತೆ ಭಾಸವಾಗುವುದು. ಮತ್ತೊಬ್ಬರ ದೃಷ್ಟಿಕೋನದಲ್ಲಿ ಎಲ್ಲವನ್ನು ನೋಡುವುದು ಬಲು ಕಷ್ಟದ ಕೆಲಸವೇ. ಈ ಎಲ್ಲಾ ಕಷ್ಟಗಳನ್ನು ಬಹಳ ಸರಳವಾಗಿ ನಿರೂಪಿಸುತ್ತಾ ಪ್ರತಿ ಪಾತ್ರದ ತುಮುಲಗಳನ್ನು, ಕಷ್ಟಗಳನ್ನು ಅತ್ಯಂತ ಸಶಕ್ತವಾಗಿ ನಮ್ಮ ಮುಂದಿಡುವ ಕ್ರಮ ಬಹಳ ಇಷ್ಟವಾಯಿತು.
ಕೈಕೆಯಿ ತನ್ನ ನಿಲುವಿಗೆ ದುಃಖಿಸುತ್ತಾ ರಾಮನಿಂದ ಸಂತೈಸಲ್ಪಟ್ಟಾಗ ನಾನು ಮತ್ತೊಮ್ಮೆ ತಾಯಿಯಾದೆ ಎಂದು ಉಸುರುವ ಆ ಕ್ಷಣ ಅದೇಕೊ ನನ್ನನ್ನು ಅನೇಕ ದಿನಗಳವರೆಗೆ ಕಾಡುತ್ತಲೇ ಇತ್ತು. ರಾಮನ ನಡೆಯಂತೂ ಅಚ್ಚರಿಯ ಕಡಲಿನಲಿ ತೇಲಿಸಿತು. ಎಷ್ಟು ಉದಾತ್ತವಾಗಿ ರಾಮನನ್ನು ಚಿತ್ರಿಸಿದ್ದಾರೆ. ಬೈರಪ್ಪ ಬರೆದ ಉತ್ತರಕಾಂಡವನ್ನು ಮತ್ತೊಮ್ಮೆ ಓದುವಂತೆ ಮಾಡಿತು. ಅತಿ ಚಿಕ್ಕ ಚಿಕ್ಕ ಪಾತ್ರಗಳನ್ನು ಕಟ್ಟಿಕೊಟ್ಟ ಕ್ರಮ ಅನನ್ಯ. ಅವರೇ ಅಂದಂತೆ ಯಕ್ಷಗಾನದಲಿ ಮಿಂಚಲು ಅವಕಾಶವೇ ಇಲ್ಲದ ಅನೇಕ ಪಾತ್ರಗಳಾದ ರುಮೆ, ಅಂಬಾಲಿಕೆ, ಅಂಬಿಕೆ ಮುಂತಾದವರ ಹಾಜರಿ ಹಾಕಿಸಿದ್ದಾರೆ.
ಕೊನೆಗೂ ಕಾಡುವ ಜಿಜ್ಞಾಸೆ:-
ರಾಮಾಯಾಣದ ಅನೇಕ ಪಾತ್ರಗಳು ಎಲ್ಲವೂ ವಿಧಿ ನಿಯಮಾನುಸಾರ ನಡೆಯುವುದು. ಅಥವಾ ತನ್ನ ಮನೋಬಲಕ್ಕನುಗುಣವಾಗಿ ನಡೆಯುವುದೋ ಎಂಬ ತಾತ್ವಿಕ ಪ್ರಶ್ನೆ ನಮಗೆ ಎದುರಾಗುವಂತೆ ಮಾಡುತ್ತಾರೆ ಸುರೇಖಾ. ಎಲ್ಲಕ್ಕೂ ಕಾರ್ಯ ಕಾರಣ ಸಂಬಂಧವನ್ನು ಕಲ್ಪಿಸುತ್ತಾ ನೀನು ಬರಿ ಪಾತ್ರದಾರಿ ಅಷ್ಟೇ ಎಂದು ನಿರೂಪಿಸುತ್ತಾ, ಮಾನವ ಪ್ರಯತ್ನಗಳಿಗೆ ಬೆಲೆ ಇಲ್ಲವೇ ಎಂಬ ಜಿಜ್ಞಾಸೆಯನ್ನೂ ಹುಟ್ಟು ಹಾಕುತ್ತಾರೆ.
ವಿಭಿನ್ನ ಹೊತ್ತಗೆಯೊಂದನ್ನು ಓದಿದ ಅನುಭವ ನಿಮಗಾಗುವುದರಲ್ಲಿ ಅನುಮಾನವಿಲ್ಲ. ತಡವಾಗಿ ಪ್ರತಿಕ್ರಿಯಿಸುವ ಈ ಲೇಟ್ ಲತೀಪನ ಬಗ್ಗೆ ಕ್ಷಮೆ ಇರಲಿ. ನಮಸ್ಕಾರ.

ಶ್ರೀಧರ. ಎಸ್. ಸಿದ್ದಾಪುರ

ವಾರೆ ನೋಟ

ಬೆಣ್ಣಿಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ

ನಮ್ಮ ತಿರುಗಾಲು ತಿಪ್ಪಲುತನಕ್ಕೆ ಕಿಚ್ಚುಹಚ್ಚಿಸಿದ್ದು ಹೊಸ ಕರ್ಮವೀರ! ಕರ್ಮವೀರದ ಜೋಳಿಗೆಯ ತುಂಬಾ ಅರವತ್ತು ಜಲಪಾತಗಳನ್ನು ಕಟ್ಟಿಕೊಟ್ಟಿದ್ದ ಸಂಪಾದಕ ಮಹಾಶಯ. ಗುಣಿಸಿ ಭ...