Showing posts with label ವಿಸ್ಮಯ ಜಗತ್ತು. Show all posts
Showing posts with label ವಿಸ್ಮಯ ಜಗತ್ತು. Show all posts

Thursday, July 9, 2026

ಬಲ ಉಳ್ಳವರ ಅಹೋಬಿಲಂ!

 


ನಾವು ಮೂವರು ಅಹೋಬಿಲಂಗೆ ಬಂದು ತಲುಪಿದ್ದೆ ಒಂದು ಅಚ್ಚರಿ. ಚೌಕಟ್ಟೇ ಇಲ್ಲದ ಒಂದು ಯೋಜನೆಯೊಳಗೆ ಅದು ಹೇಗೋ ಈ ದೇವಾಲಯ ತೂರಿಕೊಂಡಿತು. ಎಲ್ಲೋ ಓದಿದ ಪೇಪರ್‌ ತುಣುಕೊಂದರ ಸಹಾಯದಿಂದ ಆಂಧ್ರದ ಮೂಲೆಯೂರಿಗೆ ಪ್ರಯಾಣ ಬೆಳೆಸಿದೆವು. 

ಭವನಾಶಿನಿ ನದಿ ತಟದ ಅಹೋಬಿಲಂ -

 ಭರತ ಖಂಡದ ಯಾವ ಮೂಲೆಗೆ ಹೋದರೂ ನಿಮಗೆ ಒಂದೇ ಊರಿನಲ್ಲಿ 9 ನರಸಿಂಹ ದೇವಾಲಯಗಳು ಸಿಗಲಾರವು. ಅಂತಹ ಮಹಾ ವಿಚಿತ್ರ ಅಹೋಬಿಲಂ! ತೆಲುಗಿನಲ್ಲಿ ಬಿಲಂ ಎಂದರೆ ಗುಹೆ. ನಮ್ಮ ನಿಯಾನ್ ಕಣ್ಣುಗಳಲ್ಲಿ ಮಿಂಚಿದ ಪ್ರಶ್ನೆಗಳು ಹಲವು. ಒಂಭತ್ತು ದೇವಾಲಯಗಳನ್ನು ಒಂದೇ ಊರಿನಲ್ಲಿ ನಿರ್ಮಿಸುವ ಔಚಿತ್ಯವಾದರೂ ಏನು? ಅಚ್ಚರಿಯ ಅಹೋಬಿಲಂನ್ನು ಒಂದೇ ಗುಟುಕಿನಲಿ ನೋಡಿದ ನಮ್ಮ ಪಯಣದ ಮೆಲುಕು ಹಾಕೋಣ ಬನ್ನಿ. 

ಪೊಂಗಲ್‌ ಮುನ್ನುಡಿ!


 ಹೈದ್ರಾಬಾದಿನಿಂದ ಕಾರು ಬಾಡಿಗೆಗೆ ಹಿಡಿದು. ಸಿಕ್ಕ ಒಂದು ರೈಲು ಹತ್ತಿ ಆಂಧ್ರದ ನಂದ್ಯಾಲ ಜಿಲ್ಲೆಯ ಅಹೋಬಿಲಂಗೆ ಬೆಳ್ಳಂ ಬೆಳಿಗ್ಗೆ ಹೆಜ್ಜೆ ಇಟ್ಟೆವು. ಮುಸುಕು ಎಳೆದು ಮಲಗಿದ್ದ ಊರನ್ನು ನಮ್ಮ ಬಸ್ಸು ಎಬ್ಬಿಸಿತು. ಜೊತೆಗೆ ಮಹಾ ಧೂಳಿನ ನೆಬ್ಯೂಲಾ ಊರನ್ನು ಮುಚ್ಚಿತು. ನಮ್ಮ ಮೂಗನ್ನೂ. 

 ಊರಿಗೆ ಕಾಲಿಡುತ್ತಲೆ ಸಣ್ಣ ಲಾಡ್ಜು ಹಿಡಿದು ಪ್ರಾತಃವಿಧಿಗಳನ್ನು ಪೂರೈಸಿ ಬಳ್ಳಾರಿ ಭಟ್ಟರ ಹೋಟೆಲಿಗೆ ಲಗ್ಗೆ ಇಟ್ಟೆವು. ಭಟ್ಟರಿನ್ನು ಬಾಗಿಲು ತೆರೆದಿರಲಿಲ್ಲ. ಹೋಟೆಲ್‌ ತೆರೆಯುತ್ತಲೇ ಪೊಂಗಲ್‌ ಬಾರಿಸಿ ಭಟ್ಟರ ಕುಶಲೋಪರಿ ವಿಚಾರಿಸಿ ನರಸಿಂಹ ದೇವಾಲಯ ಭೇಟಿಗೆ ಹೊರಟು ಬಿಟ್ಟೆವು. 

ಕನ್ನಡ ನಾಡಿನ ಬಳ್ಳಾರಿಯಿಂದ ಬಂದ ಭಟ್ಟರ ತಂದೆ ಇಲ್ಲೇ ನೆಲೆಯೂರಿದವರು. ಅಂದಿನ ಅವರ ದುರ್ದು ಏನಿತ್ತೋ. ಸಣ್ಣದೊಂದು ಕಿರಿಯ ಪ್ರಾಥಮಿಕ ಶಾಲೆ ಬಿಟ್ಟರೇ ಬೇರೆ ಸೌಲಭ್ಯಗಳಿಲ್ಲ. ವ್ಯಾಪಾರವಾಗುತ್ತದೆ ಎಂಬ ಭರವಸೆ ಏನಿಲ್ಲ. ಯಾರೂ ಇಲ್ಲಿ ಉಳಿಯಲು ಮನಸ್ಸು ಮಾಡುವುದಿಲ್ಲ! ಅತ್ತ ಮಲೆನಾಡು ಅಲ್ಲದ ಇತ್ತ ಬಯಲು ಸೀಮೆಯೂ ಅಲ್ಲದ ಕಾಡ ನಡುವಿನ ಊರು. ದೂರದ ಬಾಗಲ ಕೋಟೆಯ ಇಬ್ಬರು ಇಲ್ಲಿ ಸಿಕ್ಕರು.  

 ಬದುಕಿನ ನಾಗಾಲೋಟಕ್ಕೆ ಬ್ರೇಕ್‌ ಬೇಕೆನಿಸಿದರೆ ಇಲ್ಲಿಗೆ ಸುಮ್ಮನೆ ಬನ್ನಿ! ಯಾವುದೋ ನಾಟಕದ ಪಾತ್ರಧಾರಿಗಳಂತೆ ಇಲ್ಲಿನವರು ನಿಮಗೆ ಕಾಣುತ್ತಾರೆ. ತಮ್ಮ ಉಬ್ಬಿದ ಹೊಟ್ಟೆ ಹೊತ್ತು ಯಮ ಸದೃಶಃ ಪರ್ವತವನ್ನು ಏರಲಾಗದೇ ಬೆಟ್ಟವೇರುವವರು. 



ಜೀವನೋಪಾಯಕ್ಕೆ ಇಲ್ಲಿ ಹಲವು ವೇಷ ತೊಟ್ಟವರು ಇಲ್ಲಿ ಕಾಣಸಿಗುತ್ತಾರೆ. ದಾರಿಗುಂಟ ಚಾಟಿಯನು ಮೈಗೆ ನಗುತ ಬಾರಿಸಿಕೊಂಡು ಜೀವನ ನಿರ್ವಹಿಸುವ ನಿರ್ಮೋಹಿ ಅಮಾಯಕರು. ಕಿಲೋಮೀಟರ್‌ ಆಚೆಗೂ ಕೇಳಿಸುವ ಚಾಟಿ ಶಬ್ದ. ಇವರ ಕುರಿತೊಂದು ಮಹಾ ಮರುಕ ಹುಟ್ಟುವಂತೆ ಮಾಡುತ್ತದೆ. ಬಿಸಿಲ ಜಗುಲಿಗೆ ಕೂತು ಬೇಡುವವರು. ಭಕ್ತಾದಿಗಳಿಗೆ ಉಣ್ಣಲು ಬನ್ನಿ ಎನ್ನುವವರು. ಒಂದೇ ಎರಡೇ. ಎಷ್ಟೇ ಇದ್ದರೂ ಮತ್ತಷ್ಟು ಬೇಕೆನ್ನುವ ನಮ್ಮನ್ನು ಕಂಡರೆ ಅವರಿಗೂ ಹಾಗೇ ಅನಿಸಬಹುದೇ ಗೊತ್ತಿಲ್ಲ. ಅಹೋಬಿಲಂ ಎಂಬ ಮಾಯಾಲೋಕದಲ್ಲಿ ಕಳೆಯುವ ಇನ್ನೆಷ್ಟು ಜನರಿದ್ದಾರೋ ಗೊತ್ತಿಲ್ಲ.

ಅಚ್ಚರಿಯ ಅಹೋಬಿಲಂ.



ಈ ಒಂಭತ್ತು ದೇವಾಲಯಗಳು ನಲ್ಲಮಾಲಾ ಕಾಡೊಳಗೆ ಅವಿತಿದೆ ಎನ್ನುವುದೇ ಅಚ್ಚರಿ. ಕಾಡೊಳಗೆ ನಿರ್ಮಿಸುವ ದುರ್ದು ಏನಿತ್ತೊ. ಕಾಡ ಕಟ್ಟೆಯಲ್ಲಿ ಕಟ್ಟಿದ ಅಹೋಬಿಲಂನಲ್ಲಿ ಎರಡು ದೇವಾಲಯಗಳು ಕಾಡಿನಂಚಿನಲ್ಲಿವೆ. ಹೆಚ್ಚಿನ ಎಲ್ಲಾ ದೇವಾಲಯ 14 ಮತ್ತು 15 ನೆಯ ಶತಮಾನದ ಅಂಚಿನಲ್ಲಿ ವಿಜಯನಗರದ ಕಾಲದಲಿ ನಿರ್ಮಿಸಿದಂತವು. ನಾಲ್ಕು ದೇವಾಲಯ ಬೆಟ್ಟದ ಬುಡದಲ್ಲೂ ನಾಲ್ಕು ಬೆಟ್ಟದ ಮೇಲೆ ಹಾಗೂ ಒಂದು ಕಾಡೊಳಗೆ ಅವಿತಿದೆ. ಯೋಗಾನಂದ ಚತ್ರವಟ ನರಸಿಂಹ ಕಾಡಂಚಿನಲ್ಲಿದೆ.



ಯೋಗಾನಂದ ನರಸಿಂಹ ಶನಿಯನ್ನು ಆಳುತ್ತಾನೆಂದು ಪ್ರತೀತಿ ಇದೆ. ಇಲ್ಲಿನ ನರಸಿಂಹ ದೇವರನ್ನು ಅಹೋಬಾಲ ಎಂದೂ ಕರೆಯುತ್ತಾರೆ. ಅಂದರೆ ಮಹಾ ಶಕ್ತಿ ಶಾಲಿ ಎಂದು. ಯೋಗಾನಂದ ನರಸಿಂಹ ಯೋಗಾಸನದಲ್ಲಿದ್ದಾನೆ.


ಚತುರ್ವಾತ ನರಸಿಂಹ ಹಾಹಾ ಮತ್ತು ಹೋ ಹೋ ಎಂಬಿಬ್ಬರು ಗಂಧರ್ವರು ನರಸಿಂಹನಿಗೆ ಸಂಗೀತ ಸೇವೆ ಮಾಡಿ ಖುಷಿ ಪಡಿಸಿದರು. ಆ ಸಲುವಾಗಿಯೇ ಇಲ್ಲಿನ ನರಸಿಂಹನಲ್ಲಿ ಸಂಗೀತ ಮತ್ತು ಕಲೆಯ ಆರಾಧಕರು ಇಲ್ಲಿ ಬೇಡಿಕೊಂಡರೆ ಅವರಿಗೆ ಕಲೆ ಸಿದ್ಧಿಸುತ್ತದೆ ಎಂಬ ಪ್ರತೀತಿಯೂ ಇದೆ.

ಕೆಳಗಿನ ಎರಡು ದೇವಾಲಯ ದರ್ಶಿಸಿ ಮೇಲಿನ ದೇವಾಲಯ ದರ್ಶಿಸುವ ಹೊತ್ತು. ಇದೊಂದು ಅಚ್ಚರಿಯ ಪಯಣ! ಕಾಡು ತನ್ನ ಬಾಹು ಕವಚಿದ ಏಳು ದೇವಾಲಯಗಳ ತೋರಲೊಬ್ಬ ಕನ್ನಡ ಬಲ್ಲ ಗೈಡ್‌ಗಾಗಿ ತಡಕಾಡಿ ಗೆದ್ದೆವು. ಆತನೋ ನಮಗೆ ಮೂರು ಸಾವಿರಕ್ಕೆ ಬೇಡಿಕೆ ಇಟ್ಟ! ಆತನ ಬ್ರಹ್ಮಾಂಡ ಕನ್ನಡ ಪಾಂಡಿತ್ಯಕ್ಕೆ ಮೂರು ಸಾವಿರ ಬಹಳ ಕಡಿಮೆ!! ಹೊಕ್ಕ ದಾರಿ ಅಲ್ಲದೆ ಹೊರ ಬರುವ ಬೇರೊಂದು ದಾರಿ ಇರುವುದರಿಂದ ಈತನನ್ನೇ ಆಯ್ಕೆ ಮಾಡಿ ಕೊಂಡೆವು. ದಾರಿಯಾದರೂ ತೋರು ರಾಘವೇಂದ್ರನೇ ಎನ್ನುತ್ತ ಪುಟ್ಟ ಮಕ್ಕಳಂತೆ ಅವನ ಹಿಂದೆ ಹೆಜ್ಜೆ ಇಟ್ಟೆವು.

ಬೃಹತ್‌ ಮರಳು ಶಿಲೆಯೊಂದು ನಿಮ್ಮನ್ನು ಕೆಳಗಿನಿಂದಲೇ ಕರೆಯುತ್ತದೆ. ಬಹೃತ್‌ ಶಿಲೆಯ ಜಟೆಯಿಂದ ಧುಮುಕುವ ನೀರ ಹನಿಗಳ ಪ್ರೋಕ್ಷಣೆಗೈದು ದೇವಾಲಯ ಪ್ರವೇಶಿಸಬೇಕಾಗುವುದು ಇಲ್ಲಿನ ವಿಶೇಷ. ಮೂರು ಜಲಕನ್ನಿಕೆಯರು ನಿಮ್ಮ ಬರುವಿಕೆಗಾಗಿ ಕಾಯುವರು. ಬನ್ನಿ ಹಾಗೆ ಮುಂದೆ ಹೋಗೋಣ. 

ಯಗುವಾ ಅಹೋಬಿಲ ನರಸಿಂಹ-



ಭವನಾಶಿನಿ ನದಿ ದಡದ ನರಸಿಂಹ ಸ್ವಯಂ ಭೂ. ಅಂದರೆ ಉದ್ಭವ ನರಸಿಂಹ. ಇಲ್ಲಿ ಹತ್ತಾರು ಪೇರಳೆ ನಮ್ಮ ಚೀಲ ಸೇರಿದವು. ಭಕ್ತರು ಬೆಳಗಿದ ನೂರಾರು ಹಣತೆ ದೇವಾಲಯದೆದುರು ಪ್ರಜ್ವಲಿಸುತಲಿತ್ತು. ಯಾರೋ ಮಹಾಶಯನೊಬ್ಬ ನಮ್ಮ ಹಣೆಗೆ ನಾಮವೆಳೆದ ಸುಮ್ಮನಿದ್ದು ಎಳೆಸಿಕೊಂಡೆವು! ಬೆಟ್ಟವೇರಲು ಮೂರನೆ ಕಾಲಾಗಿ ಒಂದು ಕೋಲು ಕೊಟ್ಟರು ಬರೇ ಐದು ರೂಪಾಯಿಗೆ. ಇಸ್ಕೊಂಡೆವು. ಯಾರಿಗೆ ಹೊಡೆಯಲೋ ಗೊತ್ತಿಲ್ಲ. 

ಬೃಹತ್‌ ಪರ್ವತದ ಬುಡದಲ್ಲಿ ದೇವಾಲಯವಿದೆ. ಗಡಿಬಿಡಿಯಲ್ಲಿ ದೇವಾಲಯ ದರ್ಶನಕ್ಕೆ ಹೊರಟು ನಿಂತೆವು. ಸುಖಾಸೀನನಾದ ನರಸಿಂಹ ಹಿರಣ್ಯ ಕಶುಪುವಿನ ಎದೆ ಬಗೆಯುತ್ತಿದ್ದಾನೆ. ಇನ್ನೆರಡು ಕೈಗಳಿಂದ ಹಿರಣ್ಯಕಶುಪುವಿನ ಕಾಲು ತಲೆ ಹಿಡಿದು ಉಗ್ರರೂಪಿಯಾಗಿದ್ದಾನೆ. ಬಲ ತುದಿಯಲಿ ಅಬಲಾನಾದ ಪ್ರಹ್ಲಾದನು ಕೈ ಮುಗಿಯುವಂತೆ ಚಿತ್ರಿಸಿದ್ದಾನೆ ಶಿಲ್ಪಿ. ಯಗುವಾ ನರಸಿಂಹ ದರ್ಶನ ಮುಗಿಸಿ ಹಲಗೆಯ ಸೇತುವೆಯಲ್ಲಿ ಭವನಾಶಿನಿಯನ್ನು ದಾಟಿ ಹೊಸ ಲೋಕಕ್ಕೆ ಕಾಲಿಟ್ಟೆವು. 


ಕಾಡು ನಮ್ಮೊಳಗೋ ನಾವೇ ಕಾಡಿನೊಳಗೋ ಎಂಬಂತೆ ಕಾಡಿಗೆ ಕಾಲಿಟ್ಟೆವು. ಚಿತ್ರ ವಿಚಿತ್ರವಾಗಿ ಪ್ರಕೃತಿಯ ನಮ್ಮೆದುರು ತನ್ನ ಭವ್ಯತೆಯನ್ನು ತೋರುತಲಿತ್ತು. ಮಳೆಗಾಲದಲ್ಲಿ ಮೈದುಂಬಿ ಹರಿವ ಭವನಾಶಿನಿ ಹೊಳೆ ದಾಟಲು ಹಲವು ಕಡೆ ಹಗ್ಗ ಹಾಕಲಾಗಿತ್ತು. ಮಳೆಗಾಲದ ಮೂರು ತಿಂಗಳು ಅಸಾಧ್ಯ ವೇಗದಿಂದ ಹರಿವ ಇವಳನ್ನು ಹರಿಯುವುದು ಅಸಾಧ್ಯ. ಯಗುವಾ ನರಸಿಂಹ ದೇವಾಲಯದ ಸನಿಹವಂತು 6-7 ಅಡಿ ನೀರು ಧುಮ್ಮಿಕ್ಕುತ್ತದೆ. ಅಹೋಬಿಲಂ ಜಲಪಾತ ಮತ್ತು ಉಗ್ರ ಸ್ತಂಭ ಕಾಣಿಸುವ ಬ್ರಿಡ್ಜ್‌ ಮೇಲೆ ನಿಂತೆವು. ನಾವು ಗುರಿಯ ಸನಿಹವೆಂದು ಕೊಂಡೆವು. ನೀವಿನ್ನೂ 450 ಮೆಟ್ಟಿಲು ಏರುವುದಿದೆ ಎಂದು ಹೇಳಿ ಗೈಡ್‌ ನಮ್ಮನ್ನು ಗಾಬರಿ ಬೀಳಿಸಿದ. ಉಗ್ರ ಸ್ತಂಭದ ಸನಿಹದಲ್ಲೇ ಜ್ವಾಲಾ ನರಸಿಂಹ ದೇವಾಲಯವಿದೆ. ಇಲ್ಲಿಂದ ಮುಂದೆ ಏರುವುದೇ ಅತಿ ಕಠಿಣ ಹಾದಿ. ಉಗ್ರ ಸ್ತಂಭದ ಬಳಿಯ ಅಹೋ ಬಿಲಂ ಜಲಪಾತ ಅಂದು ತನ್ನ ಉಗ್ರ ರೂಪ ತೊರೆದು ಶಾಂತವಾಗಿತ್ತು.

ನರಸಿಂಹ ಜಯಂತಿ ಮತ್ತು ಸ್ವಾತಿ ನಕ್ಷತ್ರ!

ಸ್ವಾತಿ ನಕ್ಷತ್ರದಂದೇ ನರಸಿಂಹ ಸ್ವಾಮಿಯ ಜನ್ಮ ದಿನ. ಬೆಳಗಾವಿ ಬಾಗಲಕೋಟೆಯ ಹತ್ತಾರು ಭಕ್ತರು ಅಂದು ದರ್ಶನಕ್ಕೆ ಬಂದಿದ್ದರು. ನೀವು ಪುಣ್ಯವಂತರು, ಇಂದು ನವ ನರಸಿಂಹನ ದರ್ಶನ ಮಾಡಿದವರಿಗೆ ಮೋಕ್ಷ ಪ್ರಾಪ್ತಿ ಎಂದ ನಮ್ಮ ಗೈಡ್.‌ ನಿನ್ನೊಂದಿಗೆ ನಡೆಯುವ ಎಲ್ಲರಿಗೂ ಮೋಕ್ಷ ಖಾತರಿ ಮರಾಯ ಎಂದು ಅವನನ್ನು ಚೇಡಿಸುತ್ತ ಹೆಜ್ಜೆ ಹಾಕಿದೆವು. ಉಗ್ರ ಸ್ತಂಭದಿಂದ ಧುಮುಕುವ ನೀರಲ್ಲಿ ಅಭಿಶೇಕ ಮಾಡಿಸಿಕೊಂಡು ಬಲ ಭಾಗದ ಕೆಂಪು ಕೊಳವನ್ನು ನೋಡುತ್ತಾ ಜ್ವಾಲಾ ನರಸಿಂಹನ ಸೇರಿಕೊಂಡೆವು. 



ಕೆಂಪು ಆಲ್ಗೆ ತುಂಬಿದ ಈ ಕೊಳವನ್ನು ಹಿರಣ್ಯ ಕಶುಪುವಿನ ರಕ್ತ ತೊಳೆದ ಕೊಳವೆಂದು ಜನ ಈಗಲೂ ನಂಬುತ್ತಾರೆ. ಜ್ವಾಲಾ ನರಸಿಂಹ ದೇವಾಲಯದ ಹಿಂದೆ 80 ಡಿಗ್ರಿ ಕೋನದಲ್ಲಿದ್ದ ದಾರಿಯಲ್ಲಿ ಕೇವಲ ಹಗ್ಗದ ಸಹಾದಿಂದ ಏರಬೇಕು. ಕೈ ಕಾಲುಗಳಲ್ಲಿ ಕಸುವಿಲ್ಲದ ಕಾರಣ ಕೈ ಬಿಟ್ಟೆವು. 




ಮೈ ತೋಯಿಸಿಕೊಂಡ ನಿಮಗೆ ಇಲ್ಲಿ ಕತೆಗಳು ನಿಮ್ಮ ಮನಸ್ಸು ತೋಯಿಸುವವು. ಪ್ರಕೃತಿ ಮಡಿಲಲ್ಲಿ ಇಂತಹದೊಂದು ಅಚ್ಚರಿಯ ತಾಣವ ಹುಡುಕಿ ತೆಗೆದು ಅದಕೊಂದು ಕತೆಗಳನ್ನು ಜೋಡಿಸಿದ ಮಹಾ ಪುರುಷನಿಗೆ ಶರಣು. ದೇಶ ಕಾಲಾತೀತದಲ್ಲಿ ಹಬ್ಬಿ ಹರಡಿದ ನೂರಾರು ಕತೆಗಳು ನಿಜಕ್ಕೂ ನಿಮ್ಮನ್ನು ಕಾಡುವವು. 

ಕಾಡೊಳಗಿನ ಅಚ್ಚರಿ ಮೂಡಿಸುವ ಕಾಡುವ ಕತೆಗಳು 

ಚುಂಚೂ ಬುಡಕಟ್ಟು ಮತ್ತು ನರಸಿಂಹ-


ಇಲ್ಲಿನ ಚುಂಚೂ ಆದಿವಾಸಿಗಳು ನರಸಿಂಹನನ್ನು ತಮ್ಮ ಅಳಿಯನ್ನನ್ನಾಗಿಸಿದ ಪರಿಗೆ ಅಚ್ಚರಿಗೊಂಡೆ. ನರಸಿಂಹನಿಗೆ ಆದಿವಾಸಿ ಲಕ್ಷ್ಮೀಯನ್ನು ಮದುವೆ ಮಾಡಿಸಿ ಇವರು ತಮ್ಮವನನ್ನಾಗಿ ಮಾಡಿ ಕೊಂಡಿದ್ದಾರೆ! ಹಾಗಾಗಿ ಹೋಗಿ ಬರುವವರಿಗಾಗಿ ಇಲ್ಲಿನ ಬುಡಕಟ್ಟು ಜನರು ದಾರಿ ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಕಾದು ಕೂರುವುದು ನಮಗಂತೂ ಅಚ್ಚರಿ. ಸಾಕ್ಷಾತ್‌ ದೈವ ಸಂಭೂತರಾದ ಸರಳ ಜನ! ಇವರ ಚೇತನವೇ ಒಂದು ಒಗಟು. ನಮ್ಮ ದಾರಿಯಲ್ಲೊಬ್ಬಳೂ ನರಸಿಂಹ ಲಕ್ಷೀಗಾಗಿ ರಂಗೋಲಿ ಹಾಕಿ ಕುಳಿತಿದ್ದಳು. ಭಕ್ತರು ನೀಡಿದ ಅಷ್ಟೋ ಇಷ್ಟೋ ಇವರಿಗೆ ಆದಾಯ! ಅಬ್ಬಬ್ಬಾ ಎಂದರೂ ೨೦೦ ದಾಟದ ಸಂಪಾದನೆ. ಮತ್ತು ಮಗದೊಂದು ಯೋಚಿಸದ ಯೋಜಿಸದ ತೃಪ್ತ ಜನ.

ಮಾಲೋಲ ನರಸಿಂಹನೆಡೆಗೆ….

ಅಹೋಬಿಲಂನ ಜ್ವಾಲಾ ನರಸಿಂಹನಿಗೆ ಶರಣು ಬಂದು ನಿಧ ನಿಧಾನಕ್ಕೆ ಒಂದೊಂದು ಹೆಜ್ಜೆ ಇಟ್ಟು ನೀರ ಜೋಕಾಲಿಯಲಿ ಮಿಂದು ಕ್ಯಾಮರಕ್ಕೂ ಎರಡು ಹನಿ ಮೀಯಿಸಿ ನಮ್ಮ ಗೈಡ್‌ ಜೊತೆ ಹೊರಟು ನಿಂತೆವು.

ಕ್ಷೀಣ ಜಲಪಾತವೊಂದು ನನ್ನ ಕಣ್ಣವೆಯಲ್ಲಿ ತುಂಬಿ ಪೂರ್ಣ ಸೃಷ್ಟಿಯ ಸೊಬಗನ್ನು ಹೆಚ್ಚಿಸುವ, ಕತೆಗಳ ಸೃಷ್ಟಿಸುವ ಪರಿಗೆ ಚಕಿತಗೊಂಡಿರುವೆ.

ಇಲ್ಲಿಂದ ಹೊರಟು ಮಾಲೋಲ ನರಸಿಂಹನೆಡೆಗೆ ಹೆಜ್ಜೆ ಹಾಕಿದೆವು. ಹಿರಣ್ಯ ಕಶಪುವಿನ ಸಂಹರಿಸಿ ಕುಪಿತಗೊಂಡ ಆತನನ್ನು ಸಂತೈಸಲು ಆದಿವಾಸಿ ಲಕ್ಷ್ಮೀ ಎಂಬ ಮಹಿಳೆಯನ್ನು ಬ್ರಹ್ಮ ಕಳುಹುತ್ತಾನೆ. ಆಗಲೇ ಶಾಂತ ಸ್ವರೂಪಿಯಾಗಿ ಜ್ವಾಲಾ ನರಸಿಂಹ ಮಾಲೋಲ ಸ್ವರೂಪಿಯಾಗಿ ನೆಲೆ ನಿಲ್ಲುತ್ತಾನೆ. ದೇವರ ಸಿಟ್ಟಿಗೆ ಕತೆಯ ಒಗ್ಗರಣೆ ಅನಿಸಿತು. ಅದೇ ಹಾದಿಯಲಿ ಕೆಳಗಿಳಿಯುತ್ತಾ ಬಂದಾಗ ವರಾಹ ರೂಪಿಯಾಗಿ ನರಸಿಂಹ ನೆಲೆ ನಿಂತಿದ್ದಾನೆ. ಭೂ ಭಾರವನ್ನು ಎತ್ತಿದ್ದಾನೆ. ಕತೆಗಳ ಸಿಕ್ಕು ಬಿಡಿಸಲು ಹೋಗದೇ ಸುಮ್ಮನೆ ದರ್ಶನಗೈದು ಬಂದೆವು. 

ಮೇಲೇರುವ ಹಾದಿಯೊಂದು ವಾಪಾಸಾಗುವ ಹಾದಿ ಇನ್ನೊಂದು. ಪ್ರತಿ ಕಲ್ಲಿಗೂ ಇಲ್ಲೊಂದು ಸುಂದರ ಕತೆ ಹೆಣೆಯುವ ಚಾತುರ್ಯ ಇದೆ. ಕತೆಗಳನ್ನು ಕೇಳುತ್ತಾ ಕೇಳುತ್ತಾ ದಾರಿ ಸಾಗಿದ್ದೆ ತಿಳೀಲಿಲ್ಲ.

14 ಕಿಲೋ ಮೀಟರ್‌ ದೂರದ ಪವನ ನರಸಿಂಹ ದರುಶನಕ್ಕೆ ಅಹೋಬಿಲಂ ವೃತ್ತಕ್ಕೆ ಬಂದು ಜೀಪು ಹತ್ತಿ ಹೊರಟೆವು. ಕಾಡೊಳಗೆ ಜೀಪು ಸರ್ಕಸ್ ಮಾಡುತ್ತಾ ನರಸಿಂಹ ದೇವಾಲಯ ತಲುಪಿತು. ಮುಚ್ಚಿದ ಬಾಗಿಲ ನಡುವೆ ಹಣಕಿ ಹಾಕಿ ದರ್ಶನ ಮುಗಿಸಿ ಹಿಂದಿರುಗಿದೆವು. ಹೀಗೆ ಒಂಭತ್ತು ದೇವಾಲಯ ದರುಶನವಾದರೂ ನೋಡಿದ ಸಂಪೂರ್ಣತೆ ನನಗೆ ದಕ್ಕಲಿಲ್ಲ. ಇನ್ನೂ ನೋಡಬೇಕು ಅಲ್ಲೇ ಇನ್ನೆರಡು ದಿನವಿರಬೇಕೆಂಬ ಹಂಬಲ. ಆದರೆ ಕಾಲ ಪುರುಷನೆದುರು ನಾವು ಮಂಡಿ ಊರಲೇ ಬೇಕಲ್ಲ. ಹೊರಡಲೇ ಬೇಕಾಯಿತು.

ಮೇಲೇರಿದ ಜಾಗದ ಸನಿಹದಲ್ಲೇ ವಿಶಿಷ್ಟ ವನ ಭೋಜನವೊಂದು ನಮಗಾಗಿ ಕಾಯುತಲಿತ್ತು. ಅಣಬೆ ಗಸಿ ಮತ್ತು ಕಡಲೆ ಬೇಳೆ ಪಾಯಸವನ್ನು ಹಿತಮಿತವಾಗಿ ಸೇವಿಸಿ ಗಂಡೀಕೋಟದತ್ತ ಓಟ ಕಿತ್ತೆವು .


Saturday, July 27, 2024

ನಿಶ್ಚಲವಾದ ಊರುಗಳ ನಡುವೆ

 


ಯಾರೋ ಹರವಿದ ಕ್ಯಾನವಾಸ ಮೇಲೆ ಹದವಾಗಿ ಬಿಡಿಸಿಟ್ಟ ಊರು. ಚಿತ್ರಕಾರ ತನ್ನ ಕುಂಚದಿಂದ ರಚಿಸಿದಂತಹ ರಚನೆಗಳು. ಊರಿನ ಜನರಂತೆ ಇಲ್ಲಿನ ದೇವಾಲಯಗಳೂ ಅನಾಥರಂತೆ ಅಲ್ಲಲ್ಲಿ ಹರಡಿವೆ.


ಎಲ್ಲೋ ಕಳೆದು ಹೋದ ಹಿಂದಿನ ಶತಮಾನದ ಮಾನಸ ಪುತ್ರ ರತ್ನರಂತೆ, ಕಾಲದೊಂದಿಗೆ ಋಜುತ್ವ ಸಾಧಿಸಿದವರಂತೆ ಈ ಪುಟಾಣಿ ಹಳ್ಳಿಯಲ್ಲಿ ಬಂದಿಯಾದವರು ಶಾಪಗ್ರಸ್ಥ ಅಹಲ್ಯೆಯ ನೆನಪಾಗುವಂತೆ ಮಾಡುತ್ತಾರೆ. ಅವಳ ಚಂಚಲತೆಗೆ ಶಾಪ, ಇವರಿಗೆ ನಿಶ್ಚಲವಾಗಿರುವಂತಹ ಶಾಪ! ಎರಡೂ ಶಾಪವೇ. ಚಂಚಲತೆ ಮತ್ತು ನಿಶ್ಚಲತೆಯ ನಡುವಿನ ಗಡಿ ರೇಖೆಯೊಂದನ್ನು ಗುರುತಿಸಬೇಕಿದೆ.

ಇಲ್ಲಿನವರು ಎಲ್ಲೂ ಗಡಿಬಿಡಿ ಇಲ್ಲದೆ, ಯಾವುದಕ್ಕೂ ಹಪಹಪಿಸದೇ ಕಾಲ ದೇಶದ ಗಡಿ ಮೀರಿದವರಂತೆ, ಯಾರಿಗೋ ಕಾದು ಕುಳಿತವರಂತೆ ಭಾಸವಾಗುತ್ತಾ, ಕಿರು ವ್ಯಾಪಾರಕ್ಕೂ ಖುಷಿ ಪಡುತ್ತಾ ಇಟ್ಟಿಗೆ ಗೂಡಿನಂತಹ ಮನೆಗಳಲ್ಲಿ ವಾಸ ಮಾಡುತ್ತ ಬದುಕುತ್ತಿದ್ದಾರೆ. ಪೆನ್ನಾ ನದಿಯೂ ಯಾವುದೇ ಗಡಿ ಬಿಡಿ ಇಲ್ಲದೆ ಪ್ರಶಾಂತವಾಗಿ ಪ್ರವಹಿಸುತ್ತಾ ಇಲ್ಲಿನ ಬದುಕಿಗೆ ರೂಪಕವಾಗಿದೆ. ಮುಂದೆಲ್ಲೋ ಇದಕ್ಕೆ ಅಣೆಕಟ್ಟು ಕಟ್ಟಿದಂತೆ ನೀರು ನಿಂತಂತೆ ಹರಿಯುತ್ತಿದೆ.  




ಭಾರತದ ಎರಡನೇ ದೊಡ್ಡ ಕ್ಯಾನ್ಯಾನ್‌ ಎಂದು ಕರೆಯಿಸಿಕೊಳ್ಳುವ ಇಲ್ಲಿನ ನದಿ, ಅದರ ಹರಿವ ಸೌಂದರ್ಯ ಪದಗಳಲ್ಲಿ ಹಿಡಿದಿಡಲಾಗದು. ಶಾಪ ಗ್ರಸ್ಥ ಕೋಟೆಯೊಳಗೆ ಮಾಧವ ಮತ್ತು ರಂಗಸ್ವಾಮಿ ದೇವಾಲಯವಿದೆ.  

 ಗಂಡೀಕೊಟ ಒಂದು ಕಾಲದ ಶ್ರೀಮಂತ ಬೀಡು, ಇಂದು ಬಡತನ ಮತ್ತು ಅವಜ್ಞೆಯ ಕತೆ ಹೇಳುತ್ತದೆ. ಹಿಂದೆ ಸರಿಯಲಾರದ ಮುಂದೆ ಹೋಗಲಾರದ ಒಂದಿಷ್ಟು ಮಂದಿ ಮಾತ್ರ ಉಳಿದಿದ್ದಾರೆ. ಅರ್ಥವೇ ಇಲ್ಲದ ಅನಾಥರು. ಯಾವ ರಾಮನ ಬರುವಿಕೆಗಾಗಿ ಕಾದಿರುವರೋ? ಒಂದಿಡಿ ಬದುಕು ರಾಮನ ಬರುವಿಕೆಗಾಗಿ ಕಾದಂತಿರುವ ನೂರಾರು ಶಬರಿಯರು. ಯಾರೋ ಅವರನ್ನು ಸ್ವಯಂ ಆಗಿ ನಿಯಂತ್ರಿಸುವಂತೆ ಪ್ರೊಗ್ರಾಂ ಮಾಡಿರುವರೋ ಎಂಬಂತಿದ್ದಾರೆ.  ಪೆನ್ನಾರನ ಗಾಢ ಹಸಿರಿನಂತಿರದೆ ಬದುಕು ಇವರದು ಕಡು ಕಷ್ಟ. ದಿನಕ್ಕೆರಡು ಬಸ್ಸು ಬಿಟ್ಟರೆ ಬೇರೆ ಸೌಲಭ್ಯಗಳಿಲ್ಲದೂರು. ಬಂದರೆ ಬಂತು  ಇಲ್ಲವಾದರೆ ಇಲ್ಲ. ಭಗ್ನಗೊಂಡ ಕೋಟೆ ಮತ್ತು ಊರು ಬಿಕೋ ಅನ್ನುತ್ತಿತ್ತು. ಭಗ್ನತೆಗೆ ತುಪ್ಪ ಸುರಿದಂತೆ ಆಕಾಶ ಬಿಕ್ಕ ತೊಡಗಿತು! ಹೊಟೆಲ್‌ ಹರಿತಾ ಬಿಟ್ಟರೆ ಬೇರೆ ವ್ಯವಸ್ಥೆಗಳಿಲ್ಲ. ಇತಿಹಾಸದ ಪ್ರಜ್ಞೆ ಮತ್ತು ತೀವ್ರ ಅವಜ್ಞೆಗೆ ಮತ್ತೊಂದು ಹೆಸರೇ ಗಂಡೀಕೊಟ!!



ಕಲೆ, ಇತಿಹಾಸ ಮತ್ತು ಪ್ರಾಕೃತಿಕ ಅಚ್ಚರಿಗಳ ಸಂಮ್ಮಿಶ್ರಣದಂತಿರುವ ಕೋಟೆಯೂರು ಗಂಡಿಕೋಟ. ಆಂಧ್ರದ ನಂದ್ಯಾಲ ಜಿಲ್ಲೆಯ ಅಹೋಬಿಲಂನಿಂದ ೮೦ ಕಿಲೋ ಮೀಟರ್. ಗಂಡಿಕೊಟವು ಆಂಧ್ರದ ಕಡಪಾ ಜಿಲ್ಲೆಯ ಕೊಟೆಯೂರು.

            ಚಿದ್ರಗೊಂಡ ಊರಿನಿಂದ ಭಗ್ನ ಮನಸ ಹೊತ್ತು ಹೊರಟು ನಿಂತಾಗ ಇಳಿ ಸಂಜೆ.

Monday, May 3, 2021

ಪ್ರಿಯಕರನಿಗೆ ಉಚಿತ ಸವಾರಿ!!

     ನನ್ನ ಹೆಡ್ಡಿಂಗ್ ಬೇರೇಯದೇ ಇತ್ತು. 'ಹೆಂಡತಿ ಮೇಲೆ ಗಂಡನ ಸವಾರಿ' ಎಂದು ಹಾಕ ಬೇಕೆಂದಿದ್ದೆ. ಮಹಿಳಾವಾದಿಗಳು, ಮಹಿಳಾ ಸಂಘಟನೆಗಳು ಚಕಾರ ಎತ್ತಬಹುದೆಂದು ಬದಲಾಯಿಸಿದೆ! ಅನೇಕ ಮಹಿಳಾ ಮಣಿಗಳು ತಪ್ಪು ತಿಳಿಯಬಹುದೆಂದು ಬದಲಾಯಿಸಿದೆ. ಮಹಿಳೆಯರ ಮೇಲೆ ಯಾವಾಗಲೂ ಪುರುಷರದ್ದೇ ಸವಾರಿ ಎಂದು ಯಾವಾಗಲೂ ಇವಳು ಹೇಳುತ್ತಿರುತ್ತಾಳೆ. ನಮ್ಮ ಶಿಕ್ಷಕಿ ವೃಂದದವರದ್ದೂ ಇದೇ ಅಭಿಪ್ರಾಯ.


ಸವಾರಿ  ಹೊರಟ ಕ್ರ್ಯಾಬ್ ಸುಂದ್ರಿ.

ನಾನಿವತ್ತು ಹೇಳ ಹೊರಟಿರುವುದು ಜೇಡಗಳ ಒಂದು ಅನನ್ಯ ಅಭ್ಯಾಸದ ಕುರಿತು. ನನ್ನ ಅನೇಕ ಜೇಡ ಮಿತ್ರರು ಈ ಚಿತ್ರವನ್ನು ಹಾಕಿ ನನ್ನ ಹೊಟ್ಟೆಯುರಿ ಹೆಚ್ಚಿಸಿದ್ದರು. ನನಗೆ ಈ ವಿಚಿತ್ರ ನೋಡಲು ಸಾಧ್ಯವಾಗಲಿಲ್ಲ. ಪ್ರಕೃತಿ ನನ್ನ ಮಟ್ಟಿಗಂತೂ ಕರುಣಿ. ತನ್ನೊಡಲಲ್ಲಿ ಅಡಗಿರುವ ಅನೇಕ ವಿಚಿತ್ರವನ್ನು ಸ್ವಲ್ಪ ಸ್ವಲ್ಪವೇ ತೆರೆದು ತೋರಿಸುತ್ತಿದೆ. ಕಳೆದ ಅಕ್ಟೋಬರ್ಲ್ಲಿ ಅನೇಕ ವಿಚಿತ್ರಗಳನ್ನು ಕಂಡಿರುವೆ. ಬಸವನ ಹುಳವನ್ನು ತಿನ್ನುತ್ತಿರುವ ಮಿಂಚುಹುಳದ ಲಾರ್ವ, ಹೀಗೆ ಹತ್ತು ಹಲವು ಅನನ್ಯತೆಯನ್ನು ತೆರೆದು ತೋರಿದೆ. ಈ ಬೇಸಿಗೆಯಲ್ಲಿ ಅದು ಮತ್ತೊಂದು ಅನನ್ಯತೆಯನು ಅದು ತೆರೆದು ತೋರಿದೆ.


ಕ್ರ್ಯಾಬ್ ಸುಂದ್ರಿಯ ಬೆನ್ನ ಮೇಲೆ ಸುಂದ್ರ.

ಥಾಮಸಿಡೆ ಕುಟುಂಬಕ್ಕೆ ಸೇರಿದ ಕ್ರ್ಯಾಬ್ ಸುಂದ್ರಿ ಚಿಕ್ಕ ನೇರಳೆಗಿಡದಲ್ಲಿ ಪವಡಿಸಿತ್ತು. ಯಾವುದೋ ಕಸವೆಂದು ಮುಂದುವರಿಯಲಿದ್ದೆ. ಆದರೂ ನೋಡೋಣವೆಂದು ಕಣ್ಣು ಹಾಯಿಸಿದೆ, ಅಚ್ಚರಿ! ಸುಂದ್ರಿಯ ಬೆನ್ನ ಮೇಲೆ ಸುಂದ್ರ. ಕೆಳಗಿಳಿದರೆ ಗಂಡಿಗೆ ಸಾವು! (ಹೆಣ್ಣು ಜೇಡಗಳು ಗಂಡು ಜೇಡಗಳನ್ನು ತಿನ್ನುತ್ತವೆ.) ಸುಮ್ಮನೆ ಹೆಣ್ಣು ಗಂಡನ್ನು ಹೊತ್ತು ತಿರುಗತಲಿತ್ತು. ಏನೇ ಮಾಡಿದರೂ ಇಳಿಯಲೊಲ್ಲದು ಈ ಪುರುಷೋತ್ತಮ. ಎಷ್ಟೋ ಹೊತ್ತಿನಿಂದ ಕಾಯುತಲಿದ್ದ ಮತ್ತೊಂದು ಗಂಡು ಜೇಡ ಉದ್ದ ಜಿಗಿತದ ಸ್ಪರ್ಧಿಯಂತೆ ಓಡಿ ಬಂದು ಹೆಣ್ಣು ಜೇಡದ ಮೇಲೆ ಹತ್ತಿ ಕುಳಿತಿತು. ಮೊದಲಿನ ಜೇಡದ ಮೇಲೆ ಆಕ್ರಮಣ ಮಾಡಿತು(ನನ್ನ ಅನಿಸಿಕೆ). ತುಂಬಾ ಹೊತ್ತು ಆ ಎರಡು ಜೇಡಗಳು ಹೆಣ್ಣು ಜೇಡದ ಮೇಲೆ ಕುಳಿತು ಪಟ್ಟಾಂಗ ಹೊಡೆದವು! ನಮ್ಮ ಹೆಣ್ಣು ಜೇಡ ಮಾತ್ರ ಎರಡೂ ಜೇಡಗಳನ್ನು ಹೊತ್ತು ನೇರಳೆ ಮರಕ್ಕೆ ಸುತ್ತು ಬರತೊಡಗಿತು. ಎರಡಕ್ಕೂ ಇಳಿಯುವ ಮನಸ್ಸಿಲ್ಲ! ಕೊನೆಗೆ ಒಂದಕ್ಕೆ ಬೇಜಾರು ಬಂದಿತೋ, ಇವುಗಳ ಸಹವಾಸ ಸಾಕೆನಿಸಿತೊ ಏನೊ ಒಂದು ಗಂಡು ಜೇಡ ಇಳಿದು ಹೋಗಿ ಎಲೆಯಡಿಯಲ್ಲಿ ಅವಿತಿತು. ಅಂತೂ ದೂರಾದ ಜೇಡ ಮತ್ತೆ ಇವುಗಳ ಸಹವಾಸಕ್ಕೆ ಬರಲೇ ಇಲ್ಲ. ಮತ್ತೊಂದು ಜೇಡ ಇದಕ್ಕೇನು ಹೇಳಿತೊ ತಿಳಿಯದು. ಹೆಣ್ಣು ಜೇಡ ಒಂದು ಗಂಡು ಜೇಡವನ್ನು ಇಳಿಸದೇ ನೇರಳೆ ಮರದ ಪರಿಕ್ರಮದಲ್ಲಿ ನಿರತವಾಗಿ ಸ್ವಲ್ಪ ಹೊತ್ತಿಗೆ ಮೌನವಾಯಿತು. ಜೇಡಗಳ ಈ ವಿಶಿಷ್ಟ ಗುಣಗಳ ಬಗ್ಗೆ ಜೇಡ ಸ್ನೇಹಿತರು ಬೆಳಕು ಚೆಲ್ಲುವಿರಾ?
 

Monday, December 28, 2020

ಜೀವಂತ ಸೇತುವೆಗಳ ಸೆರಗು!-ನಾನ್ ಬ್ಲಾಂಗ್!

ನಾಲಗೆ ಹೊರಳದ ನಾಡಿನಲ್ಲಿ ಮೂರು ದಿನ...

ಸಂಪುಟ-೩




ಅದೇಕೋ ಗೊತ್ತಿಲ್ಲ ಸಣ್ಣ ಸಣ್ಣ ಊರುಗಳ ಸೆಳೆತವೇ ವಿಚಿತ್ರ. ದೊಡ್ಡ ಶಹರಕ್ಕಿಂತ ಪುಟಾಣಿ ಊರುಗಳೇ ನನಗಿಷ್ಟ. ಒಂದೆರಡು ಅಂಗಡಿ ಬಿಟ್ಟರೆ ಮತ್ತೇನೂ ಇಲ್ಲಿಲ್ಲ!  ಮಿಕ್ಕೆಲ್ಲವೂ ಮೊಗೆವಷ್ಟು ಇವೆ.




ಎಲ್ಲರೂ ಎಲ್ಲರಿಗೂ ಪರಿಚಯಸ್ಥರು. ಅಪರಿಚಿತತೆ ಎಂಬುದೇ ಇಲ್ಲಿ ಇಲ್ಲ. ಮಳೆಗೆ ಮನ ತಣಿಸಿದ ಭಾವದಲ್ಲಿರುವ ಜನ. ಹಾಸಿ ಹೊದ್ದು ಮಲಗಿ ಮಿಗುವಷ್ಟು ಸಮಯ. ನೆಟ್ಟಿನಲೇ(ಇಂಟರ್ ನೆಟ್)  ನೇತಾಡಿಕೊಂಡಿರಬೇಕಾದ ಅಗತ್ಯತೆ ಇಲ್ಲ. ಡಾಟಾ ಮುಗಿವ ಚಿಂತೆ ಇಲ್ಲ. ಝರಿ, ಕೊಳ, ಹೊಳೆಯ ಸಾನಿಧ್ಯವಿದ್ದರಂತೂ ಇನ್ನೂ ಅಪ್ಯಾಯಮಾನ. ದೊಡ್ಡ ಸೌಲಭ್ಯಗಳೂ ಇಲ್ಲ. ಸಣ್ಣ ಊರು ಕೊಡುವ ಕುಷಿ ಮೆಟ್ರೋಪಾಲಿಟನ್
 ನೀಡದು. ಅಲ್ಲಿ ಎಲ್ಲವಿದ್ದು ಒಂಟಿ ಎಂಬ ಭಾವ. ಸಣ್ಣ ಊರುಗಳಲ್ಲಿ ಏನಿಲ್ಲದೆಯೂ ಸಂತೃಪ್ತ ಭಾವ. 
ಇಲ್ಲಿ ಸಣ್ಣ ಪುಟ್ಟ ಜಗಳಗಳಿರಬಹುದು. ಅದರ ಎರಡರಷ್ಟು ನೆಮ್ಮದಿ ಇದೆ. ದೈವತ್ವಕ್ಕೆ ಸಮಾನವಾದ ಶುಚಿತ್ವವಿದೆ. ಬೇಜಾರು ಕಳೆಯಲು ಹಸಿರುಕ್ಕಿಸುವ ಮರಗಳಿವೆ. ಸಂಬಂಧಗಳೂ ಮರಗಳಂತೆ ಹಸಿರಾಗಿವೆ. ನಾಳೆಗಳ ಬರವಸೆ ಇದೆ. ಆಪತ್ಕಾಲಕ್ಕಾಗುವ ನೆಂಟರಿದ್ದಾರೆ. ಇಂತಹ ಊರುಗಳಲ್ಲಿ ಹುಟ್ಟಿ ಬರಲು ಪುಣ್ಯ ಮಾಡಿರಬೇಕಷ್ಟೆ. ಇಂತಹ ಸಣ್ಣ ಊರಿನ ಸೆರಗಿಡದ ಹಸಿ ಬಿಸಿ ಅನುಭವವೇ ಈಗ ನಿಮ್ಮ ಮುಂದೆ.

ಗೆಳೆಯ ನಾಗರಾಜ್ ನಾನ್ ಬ್ಲಾಂಗ್ ಊರಿಗೆ ಹೋಗೋಣ ಎಂದು ಹೇಳಿದರೂ ಈ ಹೆಸರು ನನ್ನ ಸುಲಭದ ನೆನಪಿಗೆ ದಕ್ಕದು. ಶಿಲ್ಲಾಂಗ್ನಿಂದ ಡಾಕಿಗೆ ಹೋಗುವ ದಾರಿಯಲ್ಲೇ ಒಂದರ್ದ ಗಂಟೆಯ ದಾರಿಯಲ್ಲಿ ಚಲಿಸಿದರೆ ಪುಟಾಣಿ ಗ್ರಾಮ 'ನಾನ್ ಬ್ಲಾಂಗ್!'. ಹೆಸರ ತಜರ್ುಮೆಗೆ ನಿಲುಕದ ಹಳ್ಳಿ. ತಪ್ಪಿದ್ದರೆ ಕ್ಷಮಿಸಿ. ಕಾಡಿನ ಪುಟಾಣಿ ಬಳ್ಳಿ. ಊರಿನ ಅನುಕೂಲಕ್ಕೆ ಮಾಡಿಕೊಂಡ ವಿಚಿತ್ರ ಜೀವಂತ ಸೇತುವೆಗಳನ್ನು ಮಾತನಾಡಿಸುವ ಮಾತಾಗಿತ್ತು. 
 ನಾಗರಾಜ್ನ 'ಖಾಸಿ' ಭಾಷೆ ಮಾತನಾಡಬಲ್ಲ ಗೆಳೆಯರೂ ಬಂದಿದ್ದರು. ಶಿಲ್ಲಾಂಗನ ಮುಖ್ಯ ರಸ್ತೆಯಿಂದ ಬಲಕ್ಕೆ ಹೊರಳಿ ಹರಡಿಕೊಂಡ ಕಾಲು ಹಾದಿ ಹಿಡಿಯಲು ಸುಮಾರು ಅರ್ಧ ತಾಸು ಬೇಕಾಯ್ತು. ಊರ ಬಾಗಿಲಲಿ ಸಿಕ್ಕ ಇಬ್ಬರು ಖಾಸಿ ಮಂದಿಯನ್ನು ಜೊತೆ ಮಾಡಿಕೊಂಡೆವು.
ನೀರವ ಏಕಾಂತದಲಿ ಇನಿಯನ ಬರುವಿಕೆಗೆ ಕಾದು ಕುಳಿತಂತಿರುವ ಒಂಟಿ ಮನೆಗಳು. ಮನೆ ಎದುರಿಗೆ ಬಿದರ ಬೇಲಿಯಲಿ ನಿಂತು ಇಣುಕುವ ಪುಟಾಣಿ ಪೋರರು. ರಗ್ಗು ಹೊದ್ದುಕೊಂಡೆ ಬೀಡಿ ಎಳೆವ ಮುಗ್ಧ ಜನರ ವಿಚಿತ್ರ ನೋಟ. 
ಚಳಿಗೆ ಪ್ರಿಯತಮೆಯ ಅಪ್ಪುಗೆಯಂತಹ ಸೂರ್ಯ ಮಾಮನ ಬಿಸಿಲು. ಪ್ರತಿಯುಸಿರಿಗೂ ಏಲಕ್ಕಿಯ ಘಮಲು. 




ದೂರದಲ್ಲಿ ಕಾಣುವ ಹಳ್ಳಿ. 
ಅರಳಿನಿಂತ ಮುಖಾರವಿಂದವನು ಹೊತ್ತು 9ರ ಹೊತ್ತಿಗೆ ನಾನ್ ಬ್ಲಾಂಗ್ನ ಹೊರಳು ದಾರಿ ಎದುರಿಗಿದ್ದೆವು. ನಿರುದ್ದೀಶವಾಗಿ ನೇತುಬಿದ್ದ 'ನಾನ್ ಬ್ಲಾಗ್' ಹಳ್ಳಿಗೆ ದಾರಿ ಎಂಬ ಫಲಕ. ಮಳೆರಾಯ ರಾತ್ರಿ ಬಂದು ದಾರಿ ತೊಳೆದಿಟ್ಟಿದ್ದ. ಕೆಂದುಟಿ ಹೊತ್ತು, ನಮ್ಮನ್ನು ಹಿಂದಿಕ್ಕಿ, ಮತ್ತೆಲ್ಲೋ ಹೊರಟ ಅರವತ್ತರ ಹರಯದ ಯುವತಿ! ನಮಗೂ ಮೇಘಾಲಯದ ಎಲೆ ಅಡಿಕೆ ತಿನ್ನಿಸಿದಳು. ಬೆನ್ನ ಮೇಲೆ ಬೆತ್ತದ
 ಚೀಲ. ಉಳಿದ ಪ್ರಶ್ನೆಗಳ ಸರಪಳಿ. ಭಾಷಾ ತೊಡಕು.
ಸರಿ ಸುಮಾರು 5-6 ಕಿ.ಮೀ ಉದ್ದದ ಪ್ರಪಾತದ ಹಾವಿನ ಹಾದಿಗೆ ಅವರಿಬ್ಬರು ತಂದು ನಿಲ್ಲಿಸಿ ಇಳಿಯಿರಿ ಎನ್ನುವುದೆ! ಅಕ್ಷರಶಃ ಆತ್ಮಹತ್ಯೆಗೆ ಸಜ್ಜಾದವರಂತೆ ನಿಂತುಬಿಟ್ಟೆವು. ನಮ್ಮ ಗ್ರಹಚಾರಕ್ಕೆ ಬುತ್ತಿ ಗಂಟು ಮರೆತು ಗಾಡಿಯಲ್ಲೇ ಬಿಟ್ಟು ಬಂದಿದ್ದೆವು. ಇನ್ನೇನು ಮಾಡುವುದು ಬಂದಾಯಿತೆಂದು ಏರಿಳಿವ ಸಾಹಸಕ್ಕೆ ಅಂಟಿಕೊಂಡೆವು. 
ಬಿದಿರ ಹಿಂಡಿಲುಗಳ ನಡುವೆ ಪ್ರಪಾತದ ಹಾದಿ ನುಂಗುವಂತೆ ಬಾಯಿ ಕಳೆದಿತ್ತು. ಅಬ್ಬಾ ಎನಿಸುವ ಇಳಿಜಾರಿಗೆ ಮುಖಮಾಡಿದ್ದೆವು. ಹೆಜ್ಜೆ ಜಾರಿದರೆ ಪ್ರಪಾತದ ಆ ತುದಿಗೆ. ಯಾರೋ ಬೇಕಂತಲೇ ಬೇಕಾಬಿಟ್ಟಿ ಎಸೆದ ಅನಾಥ ಅಂಕುಡೊಂಕಿನ ನಡು ಹರಿವ ನಟೋರಿಯಸ್ ಹಾದಿ. 


ಇಳಿಕೆಯೇ ಎದೆ ಹಾರಿಸುತ್ತೆ.. 

ಎಲ್ಲೋ ಹೊರಟ ಮುದುಕಿ.. 
ಹಳ್ಳಿಯಿಂದ ಕೇಳುವ ಮಕ್ಕಳ ಕೇಕೆ. ದೊಡ್ಡವರ ದನಿಯ ಪ್ರತಿಧ್ವನಿ! ಗಾಳಿಗೆ ಮೂಗೊಡ್ಡಿದರೆ ಕಾಡು ಏಲಕ್ಕಿಯ ಘಮಲು. ಇಳಿವ ಪ್ರತಿ ಹೆಜ್ಜೆಯಲೂ ಸೊಂಟದ ನೆಟ್ಟು ಬೊಲ್ಟುಗಳ ಟಿಕ್ ಟಿಕ್ ಸದ್ದು. ಬಾಕಿ ಎಲ್ಲಾ ಮೌನ.
	ಮೊದಲಿದ್ದ ದೊಡ್ಡ ಮರಗಳ ದಟ್ಟನೆ ಕಡಿಮೆಯಾಗಿ ಬಿದಿರ ಹೊದ್ದ ಬೆಟ್ಟ ಸಾಲು ಶುರುವಾಗಿತ್ತು. ಇಲ್ಲಿನ ಬಿದಿರಿಗೆ ಅದರದೇ ಆದ ಅಸ್ಮಿಯತೆ ಇದೆ. ತೀರಾ ಉದ್ದವಾಗಿ ಬೆಳೆಯದ ಕುಳ್ಳ ಜಾತಿಯ ಸದೃಡವಾದ ಬಿದಿರು ಇಲ್ಲಿನದು.  ಸ್ಥಳೀಯ ಹೆಂಗಸರು ಮತ್ತು ಗಂಡಸರು ಎಲೆ ಅಡಿಕೆ ಜಗಿಯುತ್ತಲೊ, ಹಾಡು ಕೇಳುತ್ತಲೊ, ಕೆಲವರು ಮಕ್ಕಳನ್ನು ತಮ್ಮ ಸೊಂಟಕ್ಕೆ ಸಿಕ್ಕಿಸಿಕೊಂಡು ಆರಾಮಾಗಿ ಇಳಿದು ಹೋಗುತ್ತಿದ್ದರು! ಕೆಲವರು ನಿಧಾನಕ್ಕೆ ಏರಿ ಬರುತಲಿದ್ದರು! ಅವರು ತಮ್ಮೊಳಗೆ ಚಯಾ ಪಯಾವೆಂದು ಹರಟುತ್ತಿದ್ದ ಖಾಸಿ ನುಡಿಗಳೊಂದೂ ನನ್ನ ಮಿದುಳಿನಲ್ಲಿ ದಾಖಲಾಗಲೇ ಇಲ್ಲ! ನಮ್ಮ ನಡುವಿನ ಸಾಮಾನ್ಯ ಶಬ್ದ ಶಿಲ್ಲಾಂಗ್ ಒಂದೇ ಎಂದು ಗೆಳೆಯ ನಾಗರಾಜ್ ತಮಾಷಿ ಮಾಡುತ್ತಾ ಇಳಿಯ ತೊಡಗಿದೆವು. ಪುಣ್ಯಕ್ಕೆ ಶಿಲ್ಲಾಂಗ್ ಒಂಟಿ ಪದವು ನಮ್ಮ ನಾಲಗಗೆ ತೊಂದರೆ ಕೊಡದೆ ಉಳಿದು ಕೊಂಡಿದ್ದು ನಮ್ಮ ಅದೃಷ್ಟವೇ!

ಇಳಿಯುವ ಸರ್ಕಸ್ ನಲ್ಲಿ ನಿರತ ನಮ್ಮ ಗುಂಪಿನ ಲಕ್ಷ್ಮೀ ನಾರಾಯಣ್ 


ಬಿದಿರ ಹಿಂಡಲುಗಳ ನಡುವಿನ ಹರ ದಾರಿ. .. 

ಅರಳಿನಿಂತ ಕಾಡು ಹೂ..  





ಖಾಸಿ ಜನಾಂಗದ ಅಜ್ಜನೊಬ್ಬ ನಮ್ಮಿಬ್ಬರನ್ನು ( ನಾನು ಗೆಳೆಯ ನಾಗರಾಜ್) ತಬ್ಬಿಕೊಂಡು ಖುಷಿಪಟ್ಟ! ಕಣಿವೆಯ ಎಡ ಮತ್ತು ಬಲ ಮಗ್ಗಲುಗಳಲ್ಲಿ ಜೀವಂತ ಸೇತುವೆಗಳ ತೋರಣಗಳನ್ನೇ ನಿಮರ್ಿಸಿದ್ದಾರೆ ಇಲ್ಲಿನ ಸ್ಥಳೀಯರು. ಅರ್ಧ ದಾರಿಗೆ ಕ್ರಮಿಸುತ್ತಲೆ ನಮ್ಮ ತಂಡದ ಲಕ್ಷೀ ನಾರಾಯಣ್ ದಾರಿ ತಪ್ಪಿ ಮುಂದೆ ಹೋಗಿದ್ದರು. ಜೊತೆಯಾದ ಸ್ಥಳೀಯ ಖಾಸಿ ಗೆಳೆಯ 'ಸ್ಮಾಯಿಲ್' ಆತನನ್ನು ಕರೆತರಲು ಪುಟ ಪುಟನೇ ಕೆಳಗೋಡಿ ಕ್ಷಣಾರ್ಧದಲ್ಲಿ ಮೇಲೆ ಬಂದಿದ್ದ. ಇನ್ನೊಬ್ಬ ನಮ್ಮ ಖಾಸಿ ಜೊತೆಗಾರ 'ಸಿಮಜಿನ್' ಕೈಲ್ಲೊಂದು ವಿಚಿತ್ರ ಕತ್ತಿ ಯಾವಾಗಲೂ ತೊನೆದಾಡುತ್ತಲೇ ಇರುತ್ತಿತ್ತು. ಆತ ಮೇಲೆ ಬರುವುದರೊಳಗೆ ಎರಡು ಬೀಡಿ ಎಳೆದು ಬಿಸಾಕಿದ್ದ ಆಸಾಮಿ. 

ಬೆರಗಿನ ಬೇರುಗಳ ಮಾಯಾ ಲೋಕ:-

ಲಕ್ಷ್ಮೀ ನಾರಾಯಣ್ ಮೇಲೆ ಬರುತ್ತಲೇ ಆತನನ್ನು ಜೀವಂತ ಸೇತುವೆಗಳಿರುವ ದಾರಿಗೆ ಹಚ್ಚಿದೆವು. ಇಡಿ ಊರಿಗೂರೇ ಹಳ್ಳ ಕೊಳ್ಳ. ಈ ಕೊಳ್ಳಗಳನ್ನು ದಾಟಿಕೊಳ್ಳಲು ಅವರೇ ರಚಿಸಿಕೊಂಡ ನೂರಾರುವರ್ಷ ಹಳೆಯ ಜೀವಂತ ಸೇತುವೆಗಳು. ಮನುಜನ ಸೃಜನಶೀಲತೆಯ ಪರಾಕಾಷ್ಠೆ. ಸಿಮೆಂಟು ರಾಡುಗಳಿಲ್ಲದ ಕಾಲದಲ್ಲಿ ಬೇರು ನಾರುಗಳನ್ನು ಪಳಗಿಸಿದ ಪರಿ ಅನನ್ಯ. ಆಲದಂತಹ ಮರಗಳನ್ನು ಬಿದಿರಿನ ಬೊಂಬಿನೊಳಗೆ ತೂರಿಸಿ ಮತ್ತೊಂದು ಕಡೆ ಬರುವಂತೆ ನೋಡಿಕೊಳ್ಳುವರು. ಹೀಗೆ ತೂರಿದ ಬೇರಿಗೆ ಆಚೆ ಕಡೆಯ ಮತ್ತೊಂದು ಬೇರಿನೊಂದಿಗೆ ಹೆಣಿಗೆ ಹಾಕಲಾಗುತ್ತದೆ. ಅಂತಹುದೇ ಇನ್ನೊಂದು ಮರದ ಬೇರನ್ನು ಆಚೆಯ ತುದಿಯಿಂದ ಇಚೆಗೆ ಹರಿಯ ಬಿಡಲಾಗುತ್ತದೆ. ಒಟ್ಟು ಎರಡು ದೊಡ್ಡ ಬೇರುಗಳ ಮಹಾ ಜಾಲವೇರ್ಪಟ್ಟು ಒಂದರೊಳಗೆ ಬೆಸೆದು ಸೇತುವೆ ತಯಾರಾಗುತ್ತದೆ. ಕಾಲದ ತೆಕ್ಕೆಯಲಿ ಕರಗದ ಈ ಸೇತುವೆಗಳು ಇನ್ನೂ ಜೀವಂತ. ಇಂತಹ 25 ಸೇತುವೆಗಳಿವೆ ಎಂದ ಖಾಸಿ ಮಾರ್ಗದರ್ಶಕ ಗೆಳೆಯ! ಪ್ರತೀ ಸೇತುವೆಗೂ ಒಂದೊಂದು ಹೆಸರು. ನಾಮಫಲಕ ತೂಗುಹಾಕಲಾಗಿದೆ. ಕೆಲವು ಬೋಡರ್ುಗಳು ಮಳೆ ಗಾಳಿಗೆ ಹಾರಿ ಹೋಗಿವೆ. ಹೀಗೆ ಒಂದಾದ ಮೇಲೊಂದರಂತೆ 8 ಜೀವಂತ ಸೇತುವೆಗಳನ್ನು ನೋಡಿದೆವು. ಪ್ರತಿಯೊಂದು ಮತ್ತೊಂದರಂತಿಲ್ಲ! ಕೊನೆಗೆ ನೋಡಿದ ಎಂಟನೆಯ ಸೇತುವೆಯಂತೂ ಅತ್ಯದ್ಭುತ!





ಊಟವಿಲ್ಲದೆ ಹೊಟ್ಟೆ ಚುರುಗುಟ್ಟುತಲಿತ್ತು. ಅಂತೂ ಸರಪಂಚನ ಮನೆಯಲ್ಲಿ ಚಹ ಸತ್ಕಾರವಾಯಿತು. ಚಹದ ಜೋಡಿ ಬಿಸ್ಕೀಟು ಬಂತು. ಮುಲಾಜಿಲ್ಲದೆ ಹೊಟ್ಟೆಗಿಳಿದ ಬಿಸ್ಕೀಟುಗಳ ಲೆಕ್ಕ ಸಿಕ್ಕಲಿಲ್ಲ. ಮತ್ತೆ ಆಸಾಮಿ ಬಿಸ್ಕೀಟು ಬೇಕೆಂದರೆ ಬರೋಬ್ಬರಿ 4 ರಿಂದ 5 ಗಂಟೆ ನಡೆಯಲೇಬೇಕು. ದುಡ್ಡು ಕೊಟ್ಟರೆ ಬೇಡವೆಂದ. ಪಾಪದವ! 'ನೀವು ನನ್ನ ಅತಿಥಿಗಳು ನಿಮ್ಮಲ್ಲಿ ದುಡ್ಡು ತೆಗೆದುಕೊಳ್ಳುವುದಾ?' ಅವನ ಮುಗ್ಧ ಪ್ರಶ್ನೆ. ಅತಿಥಿ ದೇವೋಭವ. ಹಾಂ ಹೇಳುವುದನು ಮರೆತೆ ಈ ಜಾಗದಲ್ಲೇ ಗುಡ್ಡಗಾಡು ಓಟ ನಡೆಯುವುದು! ನಡೆಯುವಂತಿಲ್ಲ ಓಡಬೇಕು. ಹ್ಹ ಹ್ಹ. ನನ್ನಂಥವರಿಗಲ್ಲ ಬಿಡಿ. ಗುಡ್ಡ ಹತ್ತಿಳಿಯುವುದೇ ಕಷ್ಟ! ಹಂಬಲದ ಬೆಂಬಲವೊಂದೇ ನನ್ನ ಪಾಲಿಗೆ ಉಳಿದಿರುವ ಕೃತತ್ವ ಶಕ್ತಿ.




















ಪೂವರ್ೋತ್ತರ ರಾಜ್ಯಗಳಲ್ಲಿ ಹಗಲು ಬೇಗ ಇಳಿಯುವುದರಿಂದ ಮೂರಕ್ಕೆ ವಾಪಾಸು ಹೊರಡಲೇ ಬೇಕಾಯ್ತು. ದಾರಿ ಸನಿಹದ ಎರಡು ಬಿಳಲುಗಳ ಸೇತುವೆಗೆ ಇನ್ನೊಮ್ಮೆ ಬರುತ್ತೇವೆಂದು ನಮ್ಮೂರಿನ ದಾರಿ ಹಿಡಿದೆವು. ದಾರಿಯುದ್ದಕ್ಕೂ ತಂದ ಉಂಡೆ ಚಕ್ಕುಲಿಗಳನ್ನು ಹೆಗ್ಗಣಗಳಂತೆ ಹೊಡೆಯುತ್ತಾ, ಹರಟುತ್ತಾ ಗುಡ್ಡವೇರಿದೆವು. ಗುಡ್ಡದ ತುದಿಯಲ್ಲೊಮ್ಮೆ ಕತ್ತಲಾದುದರಿಂದ ದಾರಿ ತಪ್ಪಿ ಮತ್ತೆ ಸರಿ ದಾರಿಗೆ ಬಂದೆವು. ಸುಂದರ ಸೂರ್ಯ ಮಾಮ ಕೆಲಸ ಮುಗಿಸಿ ಮನೆಗೆ ಹೊರಟಿದ್ದ. ಸೂರ್ಯ ಮಾಮನ ಚಂದದ ಪಟ ಒಂದೆರಡು ನೆನಪ ಜೋಳಿಗೆಗೆ ಹಾಕಿಕೊಂಡೆ. 6 ಗಂಟೆಯ ಕಡು ಕತ್ತಲೆಗೆ ಬೆಟ್ಟದ ನೆತ್ತಿಯಲ್ಲಿದ್ದೆವು. ಕಾಲು ಮತ್ತು ಸೊಂಟ ಯಾವೊತ್ತೊ ನನ್ನ ಮಾತು ಕೇಳುವುದನ್ನು ನಿಲ್ಲಿಸಿಯಾಗಿತ್ತು!
	ಸ್ಫಟಿಕ ಶುಭ್ರ ನೀರಿನ ಇಲ್ಲಿನ ಜಲಧಾರೆಗಳನ್ನು ನೋಡುವ ಹಂಬಲದೊಂದಿಗೆ ಅಂದಿನ ದಿನಕ್ಕೆ ಮಂಗಳಹಾಡಿದೆವು. ನಿಮ್ಮ ಕಿಸೆಗೆ ಭಾರವಾಗದ ಅನೇಕ ಹೋಟೆಲುಗಳು ರೆಸ್ಟುರೆಂಟ್ಗಳು ಶಿಲ್ಲಾಂಗಿನಲ್ಲಿದೆ. ಯಾಕಿನ್ನು ತಡ?



ಶ್ರೀಧರ್. ಎಸ್. ಸಿದ್ದಾಪುರ.
						ರಥ ಬೀದಿ ಸಿದ್ದಾಪುರ.
						ಕುಂದಾಪುರ ತಾಲೂಕು
						ಉಡುಪಿ ಜಿಲ್ಲೆ-576229.

ವಾರೆ ನೋಟ

ಅಲೆಮಾರಿಯ ಆಗುಂಬೆ ಹಾಗೂ ಟ್ರೋಗನ್

  ‌ಆಗುಂಬೆ ಎಂಬ ಲಾಂಚ್‌ ಪ್ಯಾಡ್‌  ನಾನಿದನ್ನು ಮಲೆನಾಡಿನ ಹೆಬ್ಬಾಗಿಲೆಂದೇ ಕರೆಯುವೆ. ಯಾವುದೇ ಊರಿಗೆ ಹೋಗಬೇಕಾದರೂ ಉಡುಪಿಯ ನೀವು ಆಗುಂಬೆಯ ದಾಟಿಯೇ ಹೋಗಬೇಕು. ಮೂಡಿಗೆರೆ...