Saturday, June 5, 2021

ಇತಿಹಾಸ ಹೊಸೆದ ಹೂ ಬಳ್ಳಿ ಹೊಸಗುಂದ...






ಹೂ ಅರಳುವ ಹೊತ್ತು. ಮಲಗಲು ಹೋದ ರವಿ ಇನ್ನೂ ಎದ್ದಿರಲಿಲ್ಲ. ಒಮ್ನಿಯ ಲಾಟಾನು ಬೆಳಕನು ಮುಂದ್ಹಾಯಿಸಿ ಮಂಜಿನ ಪರದೆ ಸೀಳಿ ನಮ್ಮ ವಾಹನ ಸಾಗರ ತಾಲೂಕಿನ ಆನಂದಪುರದ ಸನಿಹದ ಹೊಸಗುಂದದತ್ತ ಧಾವಿಸುತಲಿತ್ತು. ಗೂಗಲ್ ಗುರುವಿಗೆ ಸಹಾಯಕ್ಕಾಗಿ ಪದೇ ಪದೇ ಯಾಚಿಸಿದರೂ ನಿಮ್ಮ ಮೊಬೈಲ್ ನೆಟ್ವಕರ್್ ಕ್ಷೇತ್ರದಲ್ಲಿಲ್ಲವೆಂದು ಸಂದೇಶ ತೋರಿಸುತ್ತಾ ಮುಷ್ಕರ ಹೂಡಿತ್ತು. ಆನಂದಪುರದಲಿ ಎಡಕ್ಕೆ ಹಾಯ್ದು, ಆಕಾಶಕ್ಕೆ ಚಪ್ಪರ ಹಾಸಿದ ಮರಗಳ ನಡುವೆ ಹುದುಗಿದ ಹೊಸಗುಂದವೆಂಬ ಹೊಸಲೋಕವನ್ನು ಹಳೇ ಒಮ್ನಿ ಕಾರಿನಲ್ಲೇ ತಲುಪಿಕೊಂಡೆವು.


ಹೊಸನಗರದಿಂದ ಉತ್ತರಾಭಿಮುಖವಾಗಿ ಹೊರಟು ಆನಂದಪುರದಲ್ಲಿ ಎಡಕ್ಕೆ ಹೊರಳಿದರೆ ಹೊಸಗುಂದದ ದೇವಾಲಯಗಳ ಹೆಬ್ಬಾಗಿಲಿಗೆ ಬಂದು ಬೀಳುತ್ತೀರಿ. ಇಲ್ಲಿಂದ ಕೇವಲ 12 ಕಿಲೋ ಮೀಟರ್. ಸುತ್ತಲೂ ಆವರಿಸಿದ ಭತ್ತದ ಬಯಲು. ಊರಿಗೆ ಹೊಸಗುಂದ ಹೆಸರು ಹೇಗೆ ಬಂತೆದು ಇಲ್ಲಿನವರಿಗಿನ್ನೂ ಗೊತ್ತಿಲ್ಲ. ಮನ ಸೆಳೆವ ಆಕರ್ಷಕ ಶೈಲಿಯ 12ನೆಯ ಶತಮಾನದ ದೇಗುಲ.

ಸುತ್ತೋಣ ಬನ್ನಿ...

ಪನ್ನೀರ ಪುಷ್ಕರಣಿಯಲಿ ಕಾಲು ತೋಯಿಸಿ ಮೆಟ್ಟಿಲೇರಿದಾಗ ಕಾಣಿಸಿದ್ದು ರಾಶಿ ರಾಶಿ ವೀರಗಲ್ಲು. ಕಾಲನ ಹೊಡೆತಕ್ಕೆ ಕೆಲವು ಕಂಗಾಲಾಗಿ ಮಲಗಿದ್ದರೆ ಕೆಲವೇ ಕೆಲವು ನಿಂತಿದ್ದವು. ತಮ್ಮ ಮೇಲಿನ ಅಕ್ಷರಗಳನ್ನೆಲ್ಲಾ ನುಂಗಿಕೊಂಡಿದ್ದವು ಕೆಲವು! ವೀರಗಲ್ಲಿನ ಮೇಲೂ ಕಲಾ ನೈಪುಣ್ಯ. ಚಿತ್ರ ವಿಚಿತ್ರ ಚಿತ್ರಗಳ ವಿಶಿಷ್ಟ್ಯ ವೀರಗಲ್ಲುಗಳ ಸಮೂಹವೇ ಇಲ್ಲಿದೆ. ಇಲ್ಲಿ ನಡೆದಿರಬಹುದಾದ ಯುದ್ಧಗಳ ಸಣ್ಣ ಚಳಕನ್ನು ಈ ವೀರಗಲ್ಲುಗಳು ನಮಗೆ ತೋರಿಸುತ್ತವೆ. ನಮ್ಮವರ ಇತಿಹಾಸದ ದರ್ಪಣಗಳಿವು ಎಂಬುದನ್ನೂ ಅರಿಯದೇ ಸಾಯಲು ಬಿಟ್ಟಂತಿದೆ. ಕಲ್ಲಿಗೆ ಭಾಷೆ ಬಂದಿದ್ದರೆ ಹರಟ ಬಹುದಿತ್ತು, ಇತಿಹಾಸ ಕೆದಕಬಹುದಿತ್ತು!




ಮುಂದೆ ಸಿಗುವುದೇ ದೇವಾಲಯ ಸಮುಚ್ಚಯ. ಹಾಸುಗಲ್ಲಿನ 18 ಕಂಬಗಳ ಮೇಲೆ ಅರಳಿ ನಿಂತ ನವರಂಗದ ಶೋಭೆ. ಕಲಾತ್ಮಕತೆಯಂತೂ ಅತ್ಯದ್ಭುತ. ಸ್ಫಟಿಕರೂಪಿ ಶಿವಲಿಂಗ ಲಿಪ್ಸ್ಟಿಕ್ ಹಾಕಿದಂತೆ ಕೆಂಪು. ಉಳಿದರ್ಧ ಕಂದು! ವರ್ನಾನಾತೀತ. ನೇಪಾಳದಿಂದ ತರಿಸಲಾದ ಶಿವಲಿಂಗ ಎಂಬುದು ಅರ್ಚಕರ ಅಂಬೋಣ. ದಕ್ಷಿಣ ಭಾರತದಲ್ಲೆಲ್ಲೂ ಇಂತಹ ಅಪೂರ್ವ ಲಿಂಗವಿಲ್ಲವೆನ್ನುತ್ತಾರೆ! ಮತ್ತೆ ಮತ್ತೆ ನೋಡುವಷ್ಟು ಚೆಲವು. ಶಿವಲಿಂಗ ಜೊತೆಗಿರುವ ಪ್ರಸನ್ನ ನಾರಾಯಣ ದೇವಾಲಯವೋ ಮಹದ್ಭುತಗಳಲ್ಲೊಂದು. ನಾರಾಯಣನ ಮೂರುತಿ ಪೀಠ ಸೇರಿದಂತೆ ಸುಮಾರು 7 ಅಡಿ. ಶಿವಲಿಂಗದೊಂದಿಗೆ ಪೈಪೋಟಿಗಿಳಿದಂತಿರುವ ಪ್ರಸನ್ನ ನಾರಾಯಣನ ಮೂರುತಿ. ನವರಂಗದ ಹೊರ ಭಿತ್ತಿಯಲ್ಲಿ ಅನೇಕ ಕತೆಗಳನ್ನು, ಮಿಥುನ ಶಿಲ್ಪಗಳನ್ನು ಕೆತ್ತಲಾಗಿದೆ! ಕೆತ್ತನೆಯ ನಾಜೂಕು ನಿಮ್ಮನ್ನು ಸೂರೆಗೊಳಿಸುತ್ತದೆ.





ಕೋಟೆ ಇದ್ದಿರಬಹುದೇ?

ದೇವಾಲಯದ ಸನಿಹದಲ್ಲೇ 12 ಅಡಿಗಳೆಷ್ಟು ಎತ್ತರದ ಮಣ್ಣಿನ ಗೋಡೆಗಳಿವೆ. ಯಾವುದೋ ಸಾಮಂತ ರಾಜ ಆಳ್ವಿಕೆ ಮಾಡಿರುವ ಸಾಧ್ಯತೆಗಳಿವೆ. ಕೆದಕಿದರೆ ಇತಿಹಾಸದ ಕುರುಹುಗಳು ಕಾಣ ಸಿಕ್ಕಾವು. ದೇವಾಲಯದ ಸನಿಹದ ಕಾಡು ಅಮೂಲ್ಯ ವನ ಸಂಪತ್ತಿನ ಆಗರ. 600 ವರುಷ ಹಳೆಯ ಮಾವಿನ ಮರವೊಂದು ನಾವು ಆರು ಜನ ಮುತ್ತಿಗೆ ಹಾಕಿದರೂ ಕೈ ಸಾಲದಾಯಿತು!! 500 ವರುಷ ಹಳೆಯ ಬಳ್ಳಿಗಳು, ವಿಶಿಷ್ಟ್ಯ ಪೊದೆಗಳು ಅನೇಕ ದಿನಗಳ ವರೆಗೆ ನಿಮ್ಮ ಮನಸ್ಸನ್ನು ಆವರಿಸದೇ ಬಿಡದು. 600 ಎಕೆರೆಯಲಿ ಹರಡಿದ ಹೊಸಗುಂದದ ದೇವಾಲಯ ನಿಶ್ಚಯವಾಗಿ ನಿಮಗೆ ಹೊಸ ಸ್ಟೋರಿ ನೀಡುವಲ್ಲಿ ಖಂಡಿತ ಸೋಲದು. ಇಲ್ಲಿನ ವನ ಸಂಪತ್ತನ್ನು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಸರ್ವೆ ನಡೆಸಿ 540ಕ್ಕೂ ಹೆಚ್ಚು ಅಳಿವಿನಂಚಿನ ಗಿಡಗಳಿವೆಯೆಂದು ಗುರುತಿಸಿದ್ದಾರೆ! ಅಬ್ಬಾ ಎಂದಿತು ಮನ.

ವಿಶಿಷ್ಟ್ಯ ವಿನ್ಯಾಸದ ಕಾಳಿ ದೇವಾಲಯವನ್ನು ನೋಡದೆ ಬಂದರೆ ಖಂಡಿತ ಏನೋ ಒಂದು ಕಳೆದುಕೊಂಡಂತೆ. ಕೇರಳೀಯ ಶೈಲಿಯಲ್ಲಿ ಕೆಂಪು ಕಲ್ಲಿನಲ್ಲಿ ಕಡೆದು ಕೆತ್ತಿದ್ದಾರೆ. ಅಂದವಾಗಿ ಅದಕ್ಕೆ ಮಂಗಳೂರು ಹೆಂಚು ಹೊದಿಸಲಾಗಿದೆ. ಸುತ್ತಲೂ ಸುಂದರ ಪೌಳಿಯನ್ನು ನಿರ್ಮಿಸಿದ್ದಾರೆ.

ಇತಿಹಾಸ

ಇತಿಹಾಸವನು ಕೆದಕಿದರೆ ಕ್ರಿ ಶ 9 ನೆಯ ಶತಮಾನಕ್ಕೆ ನಮ್ಮನ್ನು ಒಯ್ಯುತ್ತದೆ. ಕೆಲವೇ ವರ್ಷಗಳ ಕೆಳಗೆ ಮಣ್ಣಿನಡಿಯಲ್ಲಿ ಮಲಗಿದ್ದ ದೇವಾಲಯವು ಊರಿನವರ (ನಾರಾಯಣ ಶಾಸ್ತ್ರಿ ದಂಪತಿಗಳು) ಮತ್ತು ಉಮಾ ಮಹೇಶ್ವರ ಸೇವಾ ಟ್ರಸ್ಟ್ನ ಕಾಳಜಿಯಿಂದ ಜೀರ್ಣೋದ್ದಾರಗೊಂಡಿದೆ. ಎಲ್ಲಾ ದೇವಾಲಯಗಳನ್ನು ಮೊದಲಿದಂತೆ ನಿರ್ಮಿಸಲಾಗಿದೆ.

ಎ. ಸುಂದರಂ, ಜಿ.ವಿ ಕಲ್ಲಾಪುರ, ಸಾಮಕ್ ಅವರ ಸಂಶೋಧನೆಯ ಪರಿಶ್ರಮ ಎದ್ದು ಕಾಣುತ್ತದೆ. ಇಲ್ಲಿನ ಶಾಸನಗಳನ್ನು ಓದಿ ಇದರ ಐತಿಹ್ಯದ ಗಂಟನ್ನು ಬಿಡಿಸಿದ್ದಾರೆ. ಉತ್ಖನನ ಗೊಂಡಾಗ ಶಿಲಾಯುಗದ ಆಯುಧಗಳೂ, ಗಂಗರ ಕಾಲದ ನಾಣ್ಯಗಳೂ ಸಿಕ್ಕಿವೆ ಎಂದು ಹೇಳಲಾಗುತ್ತದೆ. 

ನಿರ್ಮಾಣ:-

ಪ್ರಸನ್ನ ನಾರಾಯಣಿ ದೇವಾಲಯವನ್ನು ಬಲದೇವನೆಂಬುವವನು 1242ರಲ್ಲಿ ನಿರ್ಮಿಸಿದನೆಂದು ಐತಿಹ್ಯ ಹೇಳುತ್ತದೆ. ಕ್ರಿ. ಶ 1320ರಲ್ಲಿ ಹೊಯ್ಸಳರ ವೀರ ಬಲ್ಲಾಳ ದೇವರಸನು ಕಂಚಿ ಕಾಳಮ್ಮದೇವಾಲಯಕ್ಕೆ ಭೂ ದಾನ ನೀಡಿದ ಶಾಸನ ಪತ್ತೆಯಾಗಿದೆ. ಗಣಪತಿ, ವೀರ ಭದ್ರ, ಮಹಿಷ ಮರ್ಧಿನಿ, ಸುಬ್ರಹ್ಮಣ್ಯ ದೇವಾಲಯ ನಿರ್ಮಿಸಿದನೆಂದು ಅಳಿಯದೇ ಉಳಿದ ಶಾಸನಗಳು ಸಾರುತ್ತವೆ. 

ಇಲ್ಲಿನ ದೇವಾಲಯಗಳು ದ್ರಾವಿಡ, ಹೊಯ್ಸಳ, ಪಲ್ಲವ , ಕೇರಳೀಯ ಶೈಲಿಗಳಲ್ಲಿ ನಿರ್ಮಿಸಲಾಗಿದೆ. ಅತ್ಯದ್ಬುತವಾದ ದೇವಾಲಯ ಸಮುಚ್ಚಯದ ಜೊತೆಗೆ 600 ಎಕರೆ ದೇವರ ಕಾಡು ಪರಿಸರಾಸಕ್ತರಿಗೆ, ಇತಿಹಾಸ ಪ್ರಿಯರಿಗೆ ಸುಗ್ರಾಸ ಭೋಜನವನುಣ ಬಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ. 

ಶ್ರೀಧರ್. ಎಸ್. ಸಿದ್ದಾಪುರ


 

Tuesday, May 18, 2021

ಓದಲಾರೆ ಓದದೆಯೂ ಇರಲಾರೆ!!



ತೀವ್ರತೆ, ತುಮುಲ, ಕಲ್ಪನೆಗಳಿದ್ದರೆ ಮಾತ್ರ ಕವಿತೆ ಹುಟ್ಟಬಹುದೇನೊ? ಕತೆ ಕಟ್ಟಬಹುದೇನೋ? ತೀವ್ರ ತಿರಸ್ಕಾರ, ವಿಷಾದ ಜೊತೆಯಾದಾಗ ಹುಟ್ಟುವ ಭಾವಕ್ಕೆ ಕತೆಯ ಚೌಕಟ್ಟು ತೊಡಿಸಬಹುದೇನೋ? 

ಸಣ್ಣಗೆ ಜಿನುಗುವ ಲಾಟಾನು ಬೆಳಕಿನಲಿ ಕವಿ ಅನುಭವಿಸಿದ ಅತೀವ ಭಾವನೆಗಳನ್ನು ಕೊನೆ ಮೊದಲಿಲ್ಲದ ವಿಷಾದದಲ್ಲಿ ಅದ್ದಿ ತೆಗೆದಂತಹ ಬರೆಹ. 

ಅಪ್ಪ, ಲೀಲಾವತಿ ಮತ್ತು 'ನಾನು' ಎಂಬ ಮೂರು ಭಿನ್ನ ಟಿಸಿಲುಗಳಲ್ಲಿ ಹಬ್ಬಿ ಹರಡಿದ  ಕಥನ ಕವನ! ಹೃದಯದ ರಕ್ತ ಬಸಿದು ಬಿಡುವಂತಹ ನಿಗಿ ನಿಗಿ ಸುಡು ಸಾಲುಗಳ ನಡುವೆ ಹರಡಿದ ಕತೆ. ಭಿನ್ನ ರೂಪಕಗಳಲ್ಲಿ ಕಸಿ ಕಟ್ಟಲಾದ ಕತೆ. ಈ ಪದಗಳು ಹುಟ್ಟು ಹಾಕುವ ಭಾವ ತೀವ್ರತೆ ನನ್ನಲ್ಲಿ ಮಾತ್ರವಾ ಎಂದು ಆಲೋಚಿಸುತ್ತೇನೆ. ಇಲ್ಲ. ಮುಂಬರಹ, ಹಿಂಬರದ ನುಡಿಗಳಲ್ಲೂ ಅವೇ ಮಾತು. ಕೆಲವೊಮ್ಮೆ ಆಲೋಚಿಸುತ್ತೇನೆ ಓದು, ಬರೆಹ ಎಲ್ಲವೂ            ನಿರರ್ಥಕವೆಂದು. ಎಲ್ಲವೂ ಅಯೋಮಯ. 

ಕಾದಂಬರಿಯ ಕೆಲವು ಸಾಲುಗಳು...

1. ನಿರಾಕರಣವೇ ಬಾಳಿನ ಬೆಳಕು.

ಒಮ್ಮೆಯಾದರೂ ಯಾರಿಂದಲಾದರೂ ತಿರಸ್ಕೃತಗೊಳದೇ ಹೋದರೆ ಕವಿತೆ ಜಾಳಾಗುತ್ತದೆ. ತಿರಸ್ಕೃತಗೊಂಡ ಜೀವಕ್ಕೂ ಕವಿತೆಗೂ ಜಗತ್ತನ್ನೇ ಗೆಲ್ಲುವ ಧೈರ್ಯ ಬರುತ್ತದೆ.

2. ನಿರೂಪಕ ಹೇಳುತ್ತಾನೆ...

ಪದ್ಯ ಬರೆಯಬಾರದು.

ಬರೆದರೆ ಅದು ಮತ್ತೊಬ್ಬರ ವಶವಾಗುತ್ತದೆ. ನಾವು ಪಳಗಿಸದೇ ಹೋದರೂ ಅವರು ಅದನ್ನು ಪಳಗಿಸುತ್ತಾರೆ. ಕವಿತೆಯನ್ನು ಪಳಗಿಸಿದರೆ ಕವಿಯನ್ನು ಪಳಗಿಸಿದಂತೆ ಅಂದುಕೊಳ್ಳುತ್ತಾರೆ. ನೀವು ನನ್ನನ್ನು ಪಳಗಿಸಲಾರಿರಿ. ನನ್ನ ಕವಿತೆಯನ್ನು ಕೂಡ ಎಂದು ಸಿಟ್ಟಿನಿಂದ ಹೇಳಬೇಕು ಅಂದುಕೊಳ್ಳುತ್ತೇನೆ, ಸಿಟ್ಟು ಕೂಡ ಪದ್ಯದ ಹಾಗೆಯೇ. ಮತ್ತೊಬ್ಬರ ವಶವಾದರೆ ಅದನ್ನೂ ಅವರು ಪಳಗಿಸಬಲ್ಲರು.

3. ....

ನಾನು ಕವಿತೆಗಳನ್ನು ಅನುವಾದಿಸಲಿಕ್ಕೇ ಹೋಗಲಿಲ್ಲ. ಅನುವಾದವೆಂದರೆ ಮಕ್ಕಳ ಪೋಟೋ ತೆಗೆದಂತೆ. ಮಕ್ಕಳಂತೆಯೇ ಕಾಣಿಸುತ್ತದೆ. ಜೀವ ಇರುವುದಿಲ್ಲ.

ಜೀವ ಇಲ್ಲದ ಪದ್ಯ ಬರೆಯುವುದಕ್ಕೆ ಹೋಗಬಾರದು.

ಅಂಥ ಪದ್ಯ ಬರೆದರೆ ಒಂದೋ ಕವಿ ಸತ್ತಿರುತ್ತಾನೆ. ಅಥವಾ ಪದ್ಯ.

ಎರಡೂ ಸತ್ತಿರುವುದನ್ನೂ ನೋಡಿದ್ದೇನೆ. ಸತ್ತ ಕವಿ ಸತ್ತು ಹೋದ ಪದ್ಯಗಳನ್ನು ಹೆರುತ್ತಾನೆ. ಅವುಗಳನ್ನು ತೋರಿಸಿ ನನ್ನ ಪದ್ಯಗಳಿವು ಅಂತ ಹೇಳುತ್ತಾನೆ.

4. ..

ಕವಿತೆ ಬರೆಯುವುದು ಅಂದರೆ ಕಳೆದುಕೊಳ್ಳುವುದು. ಬೇರೆ ಯಾರಿಗೋ ಕೊಟ್ಟು ಬಿಡುವುದು. ಸೆರೆಮನೆಯಲ್ಲಿ ಹೆತ್ತ ಮಗುವನ್ನು ನಂದನದಲ್ಲಿ ಬಿಟ್ಟು ಬರುವುದು. ಮತ್ತೆ ಸೆರೆಯಾಗಿ ಏಕಾಂಗಿಯಾಗಿ ಬದುಕುವುದು. ಹಾಗಾಗಿ ಪದ್ಯ ಬರೆಯಲೇ ಬಾರದು. ಹಾಗಾದರೂ ಅದು ನನ್ನ ಜೊತೆಗಿರುತ್ತದೆ.

5. 

ಈ ಕಾದಂಬರಿಯನ್ನು ಮತ್ತೊಮ್ಮೆ ಓದಬೇಕು, ಓದಿಯೂ ಎಲ್ಲೋ ಬಿಟ್ಟುಹೋದ ಒಳ್ಳೆಯ ಇಮೇಜುಗಳು, ಒಳ್ಳೆಯ ಸಾಲುಗಳು ಸಾವಿರಾರು ಇವೆ, ಅವುಗಳನ್ನು ಹಿಡಿಯಬೇಕು. ಈ ಕಾದಂಬರಿ ಒಂದು ಥರ ಅಷ್ಟು ಸುಲಭಕ್ಕೆ ಅರ್ಥಕ್ಕೆ ಸಿಗದ ಒಂದು ಮೊಂಡು ಕವಿತೆಯೇ. ನಾವೂ ಆಗಾಗ ಮೊಂಡು ಹಿಡಿದು, ಒಲಿಸಿಕೊಂಡು, ಹಿಂದೆ ಹೋಗಿ, ಕಾಡಿ, ಕಂಗೆಟ್ಟು, ವಿರಹ ಪಟ್ಟು ಅರ್ಥದೆಡೆಗೆ ಬರಸೆಳೆದುಕೊಳ್ಳಬೇಕು. ಅಥವಾ ಅದರ ಗುಂಗಲ್ಲೇ ಇದ್ದು ಬಿಡಬೇಕು. ಥೇಟು ಲಕ್ಷ್ಮಣ ನೀಲಂಗಿ ಅರ್ಥಾತ್ ಎಲ್, ತನ್ನ ಲೀಲಾಳ ಗುಂಗಲ್ಲೇ ಇದ್ದು ಬಿಡುವಂತೆ.

- ಹಿಂಬರಹದಿಂದ ವಿಕಾಸ್.



***

ಕೆಂಡದಂತೆ ಹಿಡಿದಿಡಲಾಗದ ಕವಿತೆ ಇದ್ದರೆಷ್ಟು ಬಿಟ್ಟರೆಷ್ಟು. ಎನ್ನುವ ತೀವ್ರ ಸಾಲುಗಳನ್ನು ನೆನಪಿಸುತ್ತಾ ಕವಿಯ ಅಸಾಹಕತೆ ಜೊತೆಗೆ ಕವಿತೆಯ ನಿರರ್ಥಕತೆ ಕಾಡುತ್ತಾ ಇರುವಾಗ... ಹೀರಿಬಿಟ್ಟ ಕಾಫಿ ಲೋಟದ ಘಮಲು ಹಾಗೆಯೇ ಉಳಿದಿದೆ. ಈ 'ಎಲ್' ನಂತೆ.


 

Monday, May 3, 2021

ಪ್ರಿಯಕರನಿಗೆ ಉಚಿತ ಸವಾರಿ!!

     ನನ್ನ ಹೆಡ್ಡಿಂಗ್ ಬೇರೇಯದೇ ಇತ್ತು. 'ಹೆಂಡತಿ ಮೇಲೆ ಗಂಡನ ಸವಾರಿ' ಎಂದು ಹಾಕ ಬೇಕೆಂದಿದ್ದೆ. ಮಹಿಳಾವಾದಿಗಳು, ಮಹಿಳಾ ಸಂಘಟನೆಗಳು ಚಕಾರ ಎತ್ತಬಹುದೆಂದು ಬದಲಾಯಿಸಿದೆ! ಅನೇಕ ಮಹಿಳಾ ಮಣಿಗಳು ತಪ್ಪು ತಿಳಿಯಬಹುದೆಂದು ಬದಲಾಯಿಸಿದೆ. ಮಹಿಳೆಯರ ಮೇಲೆ ಯಾವಾಗಲೂ ಪುರುಷರದ್ದೇ ಸವಾರಿ ಎಂದು ಯಾವಾಗಲೂ ಇವಳು ಹೇಳುತ್ತಿರುತ್ತಾಳೆ. ನಮ್ಮ ಶಿಕ್ಷಕಿ ವೃಂದದವರದ್ದೂ ಇದೇ ಅಭಿಪ್ರಾಯ.


ಸವಾರಿ  ಹೊರಟ ಕ್ರ್ಯಾಬ್ ಸುಂದ್ರಿ.

ನಾನಿವತ್ತು ಹೇಳ ಹೊರಟಿರುವುದು ಜೇಡಗಳ ಒಂದು ಅನನ್ಯ ಅಭ್ಯಾಸದ ಕುರಿತು. ನನ್ನ ಅನೇಕ ಜೇಡ ಮಿತ್ರರು ಈ ಚಿತ್ರವನ್ನು ಹಾಕಿ ನನ್ನ ಹೊಟ್ಟೆಯುರಿ ಹೆಚ್ಚಿಸಿದ್ದರು. ನನಗೆ ಈ ವಿಚಿತ್ರ ನೋಡಲು ಸಾಧ್ಯವಾಗಲಿಲ್ಲ. ಪ್ರಕೃತಿ ನನ್ನ ಮಟ್ಟಿಗಂತೂ ಕರುಣಿ. ತನ್ನೊಡಲಲ್ಲಿ ಅಡಗಿರುವ ಅನೇಕ ವಿಚಿತ್ರವನ್ನು ಸ್ವಲ್ಪ ಸ್ವಲ್ಪವೇ ತೆರೆದು ತೋರಿಸುತ್ತಿದೆ. ಕಳೆದ ಅಕ್ಟೋಬರ್ಲ್ಲಿ ಅನೇಕ ವಿಚಿತ್ರಗಳನ್ನು ಕಂಡಿರುವೆ. ಬಸವನ ಹುಳವನ್ನು ತಿನ್ನುತ್ತಿರುವ ಮಿಂಚುಹುಳದ ಲಾರ್ವ, ಹೀಗೆ ಹತ್ತು ಹಲವು ಅನನ್ಯತೆಯನ್ನು ತೆರೆದು ತೋರಿದೆ. ಈ ಬೇಸಿಗೆಯಲ್ಲಿ ಅದು ಮತ್ತೊಂದು ಅನನ್ಯತೆಯನು ಅದು ತೆರೆದು ತೋರಿದೆ.


ಕ್ರ್ಯಾಬ್ ಸುಂದ್ರಿಯ ಬೆನ್ನ ಮೇಲೆ ಸುಂದ್ರ.

ಥಾಮಸಿಡೆ ಕುಟುಂಬಕ್ಕೆ ಸೇರಿದ ಕ್ರ್ಯಾಬ್ ಸುಂದ್ರಿ ಚಿಕ್ಕ ನೇರಳೆಗಿಡದಲ್ಲಿ ಪವಡಿಸಿತ್ತು. ಯಾವುದೋ ಕಸವೆಂದು ಮುಂದುವರಿಯಲಿದ್ದೆ. ಆದರೂ ನೋಡೋಣವೆಂದು ಕಣ್ಣು ಹಾಯಿಸಿದೆ, ಅಚ್ಚರಿ! ಸುಂದ್ರಿಯ ಬೆನ್ನ ಮೇಲೆ ಸುಂದ್ರ. ಕೆಳಗಿಳಿದರೆ ಗಂಡಿಗೆ ಸಾವು! (ಹೆಣ್ಣು ಜೇಡಗಳು ಗಂಡು ಜೇಡಗಳನ್ನು ತಿನ್ನುತ್ತವೆ.) ಸುಮ್ಮನೆ ಹೆಣ್ಣು ಗಂಡನ್ನು ಹೊತ್ತು ತಿರುಗತಲಿತ್ತು. ಏನೇ ಮಾಡಿದರೂ ಇಳಿಯಲೊಲ್ಲದು ಈ ಪುರುಷೋತ್ತಮ. ಎಷ್ಟೋ ಹೊತ್ತಿನಿಂದ ಕಾಯುತಲಿದ್ದ ಮತ್ತೊಂದು ಗಂಡು ಜೇಡ ಉದ್ದ ಜಿಗಿತದ ಸ್ಪರ್ಧಿಯಂತೆ ಓಡಿ ಬಂದು ಹೆಣ್ಣು ಜೇಡದ ಮೇಲೆ ಹತ್ತಿ ಕುಳಿತಿತು. ಮೊದಲಿನ ಜೇಡದ ಮೇಲೆ ಆಕ್ರಮಣ ಮಾಡಿತು(ನನ್ನ ಅನಿಸಿಕೆ). ತುಂಬಾ ಹೊತ್ತು ಆ ಎರಡು ಜೇಡಗಳು ಹೆಣ್ಣು ಜೇಡದ ಮೇಲೆ ಕುಳಿತು ಪಟ್ಟಾಂಗ ಹೊಡೆದವು! ನಮ್ಮ ಹೆಣ್ಣು ಜೇಡ ಮಾತ್ರ ಎರಡೂ ಜೇಡಗಳನ್ನು ಹೊತ್ತು ನೇರಳೆ ಮರಕ್ಕೆ ಸುತ್ತು ಬರತೊಡಗಿತು. ಎರಡಕ್ಕೂ ಇಳಿಯುವ ಮನಸ್ಸಿಲ್ಲ! ಕೊನೆಗೆ ಒಂದಕ್ಕೆ ಬೇಜಾರು ಬಂದಿತೋ, ಇವುಗಳ ಸಹವಾಸ ಸಾಕೆನಿಸಿತೊ ಏನೊ ಒಂದು ಗಂಡು ಜೇಡ ಇಳಿದು ಹೋಗಿ ಎಲೆಯಡಿಯಲ್ಲಿ ಅವಿತಿತು. ಅಂತೂ ದೂರಾದ ಜೇಡ ಮತ್ತೆ ಇವುಗಳ ಸಹವಾಸಕ್ಕೆ ಬರಲೇ ಇಲ್ಲ. ಮತ್ತೊಂದು ಜೇಡ ಇದಕ್ಕೇನು ಹೇಳಿತೊ ತಿಳಿಯದು. ಹೆಣ್ಣು ಜೇಡ ಒಂದು ಗಂಡು ಜೇಡವನ್ನು ಇಳಿಸದೇ ನೇರಳೆ ಮರದ ಪರಿಕ್ರಮದಲ್ಲಿ ನಿರತವಾಗಿ ಸ್ವಲ್ಪ ಹೊತ್ತಿಗೆ ಮೌನವಾಯಿತು. ಜೇಡಗಳ ಈ ವಿಶಿಷ್ಟ ಗುಣಗಳ ಬಗ್ಗೆ ಜೇಡ ಸ್ನೇಹಿತರು ಬೆಳಕು ಚೆಲ್ಲುವಿರಾ?
 

Saturday, May 1, 2021

ಯಾಮಿನಿ ಬಂದಿದ್ದಳು!!



12 ವರ್ಷಗಳ ಬಳಿಕ ಯಾಮಿನಿ ಬಂದಿದ್ದಳು. ಅನೇಕ ಬಾರಿ ಬಾ ಎಂದರೂ ಬಂದಿರಲಿಲ್ಲ.  ಅವಳ ಜೊತೆ ಗೆಳೆಯ ಚಿರಾಯು  ಸಹ ಬಂದಿದ್ದ. ಹಗಲು ರಾತ್ರಿ ಅವಳೊಂದಿಗೇ ಮಾತೇ ಮಾತು. ಕಾಫಿ ಕಪ್ ಹಿಡಿದು ಅದನ್ನೇ ಮರೆತು ಅವಳ ಕತೆಯಲ್ಲಿ ತೇಲಿದ್ದಿದೆ. ನಿದ್ದೆಯಲ್ಲೂ ಅವಳ ಕನವರಿಕೆ. ಹೆಂಡತಿಗಂತೂ ವಿಪರೀತ ಹೊಟ್ಟೆ ಕಿಚ್ಚು. ಎನಷ್ಟು ಅವಳೊಂದಿಗೆ ಮಾತು. ಏನೋ ಕುತೂಹಲ ಅವಳಿಗೆ. ಸಣ್ಣ ಸಂಶಯ. ಅಂತಹದ್ದೆನಿದೆ ಅವಳಲ್ಲಿ? ಇವಳ ಪ್ರಶ್ನೆ. ಚೂಪು ಮೂಗಿನ ನವಿರು ಗಲ್ಲದ ಮುದ್ದಾದ ಹುಡುಗಿ. ಏನಿಲ್ಲ ಅವಳಲ್ಲಿ? ವಿವರಣೆಗೆ ಕುಳಿತರೆ ತೇಜಸ್ವಿಯ ಕತೆಗಿಂತಲೂ ರೋಚಕವಾಗಿ ಹೇಳಬಲ್ಲಳು. ಹಾಡಲು ಹೇಳಿದರೆ ಗಂಗೂಬಾಯಿ. ಅತ್ಯುತ್ತಮ ವಿಮರ್ಶಕಿ. ಎದೆಯಲ್ಲೊಂದು ಪ್ರೀತಿಯ ಝರಿ ಜೀವಂತ. ಇಂತಿಪ್ಪ ಯಾಮಿನಿ...

12 ವರ್ಷಗಳ ತನ್ನ ಕತೆಯನ್ನು ಬಿಚ್ಚಿಟ್ಟಳು. ಕರೋನ ಬರುತ್ತದೆಂದು ಹೆಂಡತಿ ಹೆದರಿಸಿದರೂ ಕೇಳದೆ ನಾವಿಬ್ಬರೂ ಒಂದೆರಡು ದಿನ ಹಾಯಾಗಿ ಬೆಂಗಳೂರಿಗೆ, ಶಿವಮೊಗ್ಗಕ್ಕೆ, ಯಲ್ಲಾಪುರ, ಸುಬ್ರಮಣ್ಯ ಸುತ್ತಿ ಸುಳ್ಯದ ಅವಳ ಕಾಡುಮನೆಯಲ್ಲಿ ಒಂದೆರಡು ದಿನವಿದ್ದು ಬಂದೆವು. ಪ್ರಯಾಣದ ನಡುವೆ ಶೃದ್ಧಾ ಶರ್ಮಾ ಸೇರಿಕೊಂಡಳು.

ನಮ್ಮೆಲ್ಲರ ಕಣ್ಮಣಿಯಾದವಳು ಒಲಿದದ್ದು ಮಾತ್ರ ಚಿರಾಯುವಿಗೆ. ನಾವು ಒಲಿಸಿಕೊಳ್ಳಲು ಪ್ರಯತ್ನಿಸಿಲ್ಲವೆಂಬುದು ಶುದ್ಧ ಸುಳ್ಳು! ಒಲಿದಿಲ್ಲವಷ್ಟೇ. ಹಾಗಂತ ಚಿರಾಯುವಿನ ಹೆಂಡತಿ ಅಂದುಕೊಂಡರೆ ನಿಮ್ಮ ಊಹೆ ತಪ್ಪು! ಒಲಿದಿದ್ದು ಗಿರೀಶ್ ಗೆ ಇರುವುದು ಚಿರಾಯುವಿನ ಜೊತೆ!!

ಅವಳು ಬಂದ ದಿನ ರಾತ್ರಿ ಪೂರಾ ಜಾಗರಣೆ. ಓರೆ ಕೋರೆ ಗೆರೆಗಳಂತೆ ಚದುರಿದ ರೇಖೆಗಳಂತೆ ತನ್ನ ಕತೆ ಹೇಳುತ್ತಾ ಕೂತಿದ್ದಳು. ತಾನೇ ಕನ್ನಡಿ ಮುಂದೆ ನಿಂತು ಕತೆ ಹೇಳಿ ಕೊಳ್ಳತೊಡಗಿದಳು. ತನ್ನ ತುಮುಲಗಳನ್ನು, ಒಳತೋಟಿಗಳನ್ನು ಹೇಳುತ್ತಾ ಬೆತ್ತಲಾಗತೊಡಗಿದಳು. 

ಕಮಲಶಿಲೆಯಲ್ಲಿ, ಶಿವಮೊಗ್ಗೆಯಲ್ಲಿ ಚಿರಾಯು ಕಳೆದ ದಿನಗಳು, ಅವನೊಂದಿಗಾದ ಮಾತು ಕತೆಯ ವಿವರಗಳು. ಆತನ ಕತೆಗಳು. ಚಿರಾಯುವಿನ ತಂದೆಯ ತಿರಸ್ಕಾರ, ಸಿಕ್ಕ ಪುರಸ್ಕಾರ. ಯಾವುದು ಶಾಶ್ವತ? ಯಾವುದು ನಶ್ವರ? ಎಂಬ ತೊಳಲಾಟಗಳು. ಅವನ ಹೋರಾಟದ ದಿನಗಳು ಎಲ್ಲವೂ ಮಾತಿನ ನಡುವೆ ಜಾಗ ಮಾಡಿಕೊಂಡವು. ಬದುಕಿನ ನಾಜೂಕಿನ ಸಂದರ್ಭದಲ್ಲಿ ಚಿರಾಯುವಿನಿಂದ ದೂರಾಗಲು ಇಂಗ್ಲೆಂಡ್ಗೆ ಹೊರಟು ನಿಂತ ಕ್ಷಣಗಳು. ವರುಷಗಳ ಬಳಿಕ ಮತ್ತೆ ಚಿರಾಯುವನ್ನೇ ಸೇರಿಕೊಂಡ ಕತೆ. ಆತನನ್ನು ಪ್ರೇರೇಪಿಸಿ ಬರೆಯಿಸಿದ ಕತೆಗೆ ಬಹುಮಾನ ಬಂದಿದ್ದು. ಜೀವನದಲ್ಲಿ ನಡೆದ ಕತೆಗಳನ್ನು ಹೆಕ್ಕಿ ಹೇಳಿದ್ದಳು. ಯಾವುದೂ ಇಲ್ಲಿ ನೇರವಿಲ್ಲ. ಆದರೂ ವಕ್ರವಲ್ಲ. ಅವಳು ಅವನ ಬದುಕಿನ ವಿವರಗಳ ಗುಚ್ಚಗಳು ಅಚ್ಚರಿ ಹುಟ್ಟಿಸುವಂತಹುದು. ಹೀಗೆ ಆಕೆ ಹೇಳಿದ ಸಣ್ಣ ಸಣ್ಣ ವಿವರಗಳು ಎರಡು ದಿನದಿಂದ ನನ್ನ ಎದೆಯಲ್ಲಿ ಗುಂಯ್ ಗುಡುತ್ತಿದೆ. ಹೀಗೂ ಜೀವನವಿರಬಹುದೇ ಎಂಬ ತುಮುಲದಲ್ಲಿರುವೆ. ಕತೆಗಳಿಗಿಂತಲೂ ಕೆಲವರ ಬದುಕುಗಳು ವಿಚಿತ್ರ. ಎರಡು ತಿಂಗಳಿಗಾಗುವಷ್ಟು ಕತೆ ಹೇಳಿ ಹೋಗಿದ್ದಾಳೆ. ಒಂದೊಂದೇ ನವಿಲುಗರಿಯಂತಹ ಕತೆಗಳನ್ನು ಎದೆಯ ಗೂಡಲ್ಲಿ ಬಚ್ಚಿಡಲು ಪ್ರಯತ್ನಿಸುತ್ತಿರುವೆ ಆಗುತ್ತಿಲ್ಲ. ಕತೆಗಾರ್ತಿ ಯಾಮಿನಿಯ ಚಮಕ ಪ್ರತಿ ವಾಕ್ಯದಲ್ಲೂ ಅನುರಣಿಸುತಿದೆ. ನನ್ನ ಎದೆಯ ಗೂಡಲ್ಲಿ ಅರಳಲು ತವಕಿಸುತ್ತಿದೆ. ಕಣ್ಣು ಮಾತಿಗಿಳಿದಾಗ ಬಾಯಿ ಬಲು ಮೌನ! ಅವಕಾಶ.

ಇಂದು ಆಕೆ ಹೊರಟು ನಿಂತಾಗ ಎದೆ ಭಾರ. ಮತ್ತೆ ಕೇಳಿದೆ ಭೇಟಿ ಯಾವಾಗ?

 



 

Sunday, April 11, 2021

ಎಲೆಲೆ ಕೀಟ!!



ಎಲೆಯಂತಿರುವ ಹೊಟ್ಟೆಯ ಭಾಗ.



ಹೊಸಬನಲ್ಲನಿವ ಹಳೆಯ ಗಿರಾಕಿ
ಹೊಡೆಯುತಿದ್ದ ಮನೆ ಸನಿಹವೇ ಗಿರಕಿ 
ನನ್ನ ಹಳೆಯ ಗೆಳೆಯ!

ಬಾಯದು ಬಾಯಲ್ಲ
ಕಣ್ಣದು ಕಣ್ಣಲ್ಲ
ಇರುವಲ್ಲ್ಯಾವುದೂ ಇಲ್ಲ
ನೋಟಕನ ನೋಟ 
ಎಲ್ಲವೂ ಚಿತ್ತ ಬ್ರಾಂತಿ!!!







ಮಳೆಗಾಲದ ಒಂದು ಮುಂಜಾನೆ ಸಣ್ಣಗೆ ಮೋಡ ಕವಿದಿತ್ತು. ತಣ್ಣನೆ ಗಾಳಿ ಹೊಯ್ಯುತ್ತಿತ್ತು. ಅಜ್ಜಿ ನರುಕಿದಂತೆ, ಹುಡುಗಿ ಮಿಡುಕಿದಂತೆ  ಸುರಿಯುತ್ತಿತ್ತು ಮಳೆ. ಕೊಡೆಯೊಂದನು ಕೊಂಡು ಸರ್ಕಸ್ ಮಾಡುತ್ತಾ ಮನೆಯ ಸನಿಹದ ಕಾಡು ತಲುಪಿ, ಕ್ಯಾಮರಕ್ಕೆ ಬೇಕಾದ ಸಲಕರಣೆಗಳನು ಜೋಡಿಸುವ ಹೊತ್ತಿಗೆ ಮಳೆ ನಿಂತಿತು. ಕಾಡು ಹಬ್ಬಿದ್ದ ಕಡೆ ಕಣ್ಣು ಹಾಯಿಸಿದರೆ ಯಾವ ಕೀಟವೂ ಕಣ್ಣಿಗೆ ಬೀಳಲೇ ಇಲ್ಲ. ಕೆಲವು ಹೂಗಳ ಚಿತ್ರ ತೆಗೆಯೋಣವೆಂದು ಪರಿಮಳ ರಹಿತ ಕಾಡು ಹೂಗಳ ಸಾಂಗತ್ಯಕ್ಕೆ ನಿಂತೆ. ಕೆಲವು ಬಿರಿದಿದ್ದವು ಕೆಲವು ಬಿರಿಯುವ ತಯಾರಿಯಲ್ಲಿದ್ದವು. ಆಗಲೇ ಕಾಂಗ್ರೆಸ್ ಗಿಡದ ಬುಡದಲ್ಲೇನೋ ಅಲ್ಲಾಡಿದ ಅನುಭವವಾಯಿತು. ಅದೊಂದು ಒಣಗಿದ ಎಲೆಯಂತಿದೆಯೆಲ್ಲಾ ಎಂದು ಸುಮ್ಮನಾದೆ. ಮತ್ತೆ ಒಣಗಿದೆಲೆಯಲಿ ಸಣ್ಣ ಅಲುಗಾಟ. ಇದೇನೆಂದು ನೋಡೋಣವೆಂದು ಸನಿಹಕೆ ಹೋದರೆ ಯಾವುದೋ ಹುಳುವೊಂದನು ಗುಳಕಾಯಿಸಿ ಗಮ್ಮತ್ತಿನಲಿ ಕುಂಡೆ ಅಲ್ಲಾಡಿಸುತ್ತಿತ್ತು ಈ ಕೀಟ. ಅರೆರೆ ಇದು ಎಲೆಯಂತಿದೆ. ಎಲೆಲೆ ಕೀಟ. ಸಾಮಾನ್ಯ ನೋಟಕೆ ಸುಲಭಕ್ಕೆ ಯಾಮಾರಿಸುವ ಕಲೆ ಕರಗತ ಮಾಡಿಕೊಂಡಿದೆ. ಇದ್ದರೂ ಇಲ್ಲದಂತಿರುತ್ತದೆ. ಅದರ ಕಣ್ಣಿನಂತಿರುವ ಭಾಗ ಕಣ್ಣಲ್ಲ. ಬಾಯಿಯಂತೆ ರಚಿತಗೊಂಡಿರುವ ಭಾಗ ಬಾಯಲ್ಲ. ಎಲ್ಲವೂ ಮಾಯೆ ಬ್ರಾಂತಿ. ಕೆಳಗೆ ಬಾಯಿಯಂತಿರುವ ಅಂಗ ನಿಜಕ್ಕೂ ಅದರ ಬಾಯಿಯಲ್ಲ! ಅದರ ಒಳ ಪದರ ಗುಲಾಬಿ ಬಣ್ಣದಿಂದ ಕೂಡಿದ್ದು ತುಂಬಾನೇ ಆಕರ್ಷಕವಾಗಿದೆ. ಈ ಒಂದು ಕೀಟದಲ್ಲೇ ಅನೇಕ ಪ್ರಭೇದಗಳಿದ್ದು ಪ್ರತಿಯೊಂದು ಒಂದರಿಂದ ಒಂದು ಭಿನ್ನವಾಗಿವೆ. ಡ್ರಾಗನ್ ಹಾತೆ, ಇರುವೆ ಮುಂತಾದವೆ ಇವುಗಳ ಆಹಾರ. ಒಟ್ಟಾರೆಯಾಗಿ ಆಹಾರ ಸೂಕ್ಷ್ಮ ಸರಪಳಿಯ ಭಾಗವಾಗಿರುವ ಇವು ಅನನ್ಯ ಜೀವಿಗಳು. ಸೂರ್ಯನ ಕುದುರೆಗಳೆಂದು ಕರೆಯಿಸಿಕೊಳ್ಳುವ ಇವು ಕೀಟ ಜಗತ್ತಿನ ವಿಶಿಷ್ಟ ಮುಕುಟ ಮಣಿಗಳು. 

ಶ್ರೀಧರ್ ಎಸ್. ಸಿದ್ದಾಪುರ.
 


 

Friday, March 19, 2021

ಕಥನದ ಜಾಡು ಹಿಡಿದು..

ಅಂದು ಆಕೆ 9 ನದಿಗಳನ್ನು ದಾಟಿ ವಾಸುದೇವನನ್ನು ನಡೆಸಿಕೊಂಡು ತನ್ನ 6 ತಿಂಗಳ ಕೂಸು ದೇವಕಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಸತತ ಹತ್ತು ದಿನಗಳ ಕಾಲ ನಡೆಯದೇ ಹೋಗಿದ್ದರೆ, ಮೊಗೆಕಾಯಿ ತೆಳ್ಳೇವು , ಜೋನಿ ಬೆಲ್ಲದ ಆಸೆಗೆ ಬಲಿಯಾಗದೇ ಶಿವಾನಂದ ಕಳವೆಯವರು ಪಟ್ಟಣ ಸೇರಿದ್ದರೆ ಈ ಅತ್ಯಪೂರ್ವ ಕಥನದ ಹಾದಿ ತುಳಿಯುವ ಅಗತ್ಯ ಬರುತ್ತಲೇ ಇರುತ್ತಿರಲಿಲ್ಲ. ಈ ಅಭೂತಪೂರ್ವ ಘಟನಾವಳಿ ನಮ್ಮನ್ನು ಈಗ ನಿಮ್ಮನ್ನು ಬೆಸೆದಿದ್ದು. 


ಬಂಡೆ ತಬ್ಬಿದ ಮರ....ಚಾರಣದ ನಡುವೆ.

 
ಕಾಡಿನ ಕಥನ ಕಾಡುವ ಕಥನದ ಜಾಡು ಹಿಡಿದು...
ಶಿರಸಿ ಸೀಮೆಯ ಪುಟಾಣಿ ಹಳ್ಳಿಯ ಕಥನವೇ ಮಧ್ಯಘಟ್ಟದ ಹೂರಣ. ಕಾದಂಬರಿಯ ಹೂರಣವನ್ನು ಹೊಂದಿದ ಜನ-ಜೀವನದ ದಸ್ತಾವೇಜು. ಶಿರಸಿಯಿಂದ 37 ಕಿ. ಮೀ ದೂರದ ಮತ್ತಿಘಟ್ಟವೆಂಬ ಘಟ್ಟದ ಮಧ್ಯ ಭಾಗದಲ್ಲಿ ನಡೆವ ಕಥನ. ಇಲ್ಲಿನ ಕಷ್ಟ ಕಾರ್ಪಣ್ಯಗಳು, ಹಬ್ಬಗಳು, ಬಳಸುವ ಔಷಧೀಯ ಮೂಲಿಕೆಗಳು, ತಂಬುಳಿಗೆ ಬೇಕಾಗುವ ಚಿಗುರು ಕುಡಿಗಳ ವಿವರಗಳು, ಆಹಾರ ಸಂಸ್ಕೃತಿ, ಇಲ್ಲಿನ ಪಲ್ಲಟಗಳನ್ನು ನವಿರಾಗಿ ಚಿತ್ರಿಸಿದ ಕಾದಂಬರಿ. ಈ ಕಾದಂಬರಿಯ ಪಾತ್ರಗಳು ಸವೆಸಿದ ಹಾದಿಯಲ್ಲಿ ಸಾಗುವ ಅನನ್ಯ ಅನುಭವ. ಸುಮಾರು 75 ವರುಷಗಳ ಕೆಳಗೆ ತಾಯಿಯೊಂದಿಗೆ ನಡೆದು ಬಂದ ವಾಸುದೇವ ಹೆಗಡೆಯವರೊಂದಿಗೆ ಸಂವಾದಿಸುವ ಅಪೂರ್ವ ಅವಕಾಶ.

ಗೋಪಯ್ಯ ಹೆಗಡೆ ಮನೆಯಲ್ಲಿ....

ವಾಸುದೇವ ಹೆಗಡೆ ಮನೆ  ಎದುರು 

ತೇಜಸ್ವಿ ಕಾದಂಬರಿ ಬಿಟ್ಟರೆ ಇದೇ ಮೊದಲು ಕಾದಂಬರಿಯ ಪಾತ್ರವೊಂದು ಓದುಗರೊಂದಿಗೆ, ಲೇಖಕರೊಂದಿಗೆ ಸಂವಾದಿಸಿದ ವಿಶೇಷ ಸಂದರ್ಭವೊಂದು ಸೃಷ್ಟಿಯಾಯಿತು! ಎಲ್ಲದಕ್ಕೂ ಶಿವಾನಂದ ಕಳವೆಯವರು(ಮಧ್ಯಘಟ್ಟದ ಲೇಖಕರು) ಮೂಲ ಸೇತುವಾದರು. ಬನ್ನಿ ಕಥನದ ಜಾಡು ಹಿಡಿಯೋಣ.

ಗೋಪಯ್ಯ ಹೆಗಡೆ ಮನೆ....

ಕಥನದ ಜಾಡು ಹಿಡಿದು ಸಾಗಿದ್ದು ವೆಂಕಟರಮಣ ವೈದ್ಯರ ಮನೆಯಿಂದ. ದೇಸಿ ತಿಂಡಿಯಾದ ಕಡಬು, ಅವಲಕ್ಕಿ, ಜೋನಿ ಬೆಲ್ಲ, ತುಪ್ಪದ ನೈವೇದ್ಯ ನಡೆದು ಪನಿವಾರ ಸೇವಿಸಿ ಕಾಡು ಹರಟೆಯಲಿ ಲೀನವಾಗಿ ವಾಸುದೇವ ಹೆಗಡೆ ಮನೆಯತ್ತ ಕಾಲಿರಿಸಿದೆವು. ಮನೆಯ ಸನಿಹ ಹರಿವ ಹಸೆ ಹಳ್ಳದ ಆರ್ಭಟವ ಆಲಿಸುತ್ತಾ ಮುಂದೆ ಸಾಗಿ ಬಂದೆವು. ಹಸೆ ಹಳ್ಳ ಬೋರ್ಗೆಯುತ್ತಾ ಕಣಿವೆಗೆ ಮುಖಮಾಡಿ ಧುಮುಕುವ ಸೊಬಗೇ ಅಪ್ಯಾಯಮಾನ. ಮುಖಚಿತ್ರಕ್ಕೆ ಅಂಟಿಸುವ ಸಲುವಾಗಿ ಕೆಲವು ಚಿತ್ರಗಳನ್ನು ವಾಸುದೇವರ ಮನೆಯಲ್ಲಿ ತೆಗೆದುಕೊಂಡೆವು. ವಯಸ್ಸಿನ ಕಾರಣದಿಂದ ವಾಸುದೇವ ಹೆಗಡೆಯವರು ಬೆಂಗಳೂರಿನ ತಮ್ಮ ಮಗನ ಮನೆಯಲ್ಲಿ ವಾಸವಾಗಿದ್ದಾರೆ. ಹಾಗಾಗಿ ಆ ಮನೆ ಈಗ ಖಾಲಿ. 

ಬಾಯಾರಿಕೆ ನೀಗಿಸುವ ನುರುಕಲು.


ಶೋಭಾ, ಗಜಪತಿ ಹೆಗಡೆ ಹಲಸಿನ ಸೊಳೆ ಚೆರಿಗೆಯೊಂದಿಗೆ.



ಮುಂದೆ ವಾಸುದೇವ ಹೆಗಡೆಯ ಅಕ್ಕನ ಮನೆ ಅಂದರೆ ಗೋಪಯ್ಯ ಹೆಗಡೆ ಮನೆಗೆ ಪಯಣ. ಅವರದು ಮೂರಂತಸ್ತಿನ ಹೆಂಚಿನ ಮನೆ. ಮಣ್ಣು ಕಲ್ಲಿನ ಮಿಶ್ರಣಕ್ಕೆ ಸಿಮೆಂಟ್ನ ಹೊದಿಕೆ. 75-80 ವರುಷ ಸಂದರೂ ಗಟ್ಟಿ ಮುಟ್ಟಾಗಿದೆ. ದೇಸಿ ತಂತ್ರಜ್ಞಾನದಲಿ ಅರಳಿದ ಮನೆ. ವಿಶಾಲವಾದ ಜಗಲಿ, ವಿಶಾಲ ತಂಪಾದ ಹಜಾರ, ಸ್ವಚ್ಚ ಉಪ್ಪರಿಗೆ, ಅಡಿಕೆ ಒಣಗಿಸೊ ಚಾವಣಿ, ಮನೆ ಸುತ್ತ ಹೂವಿನ ಗಿಡಗಳು, ಅದರಲ್ಲೂ ವಿಶೇಷವಾಗಿ ಆಕರ್ಷಿಸಿದ್ದು 20 ವಿಧದ ಮಲ್ಲಿಗೆ ತಳಿಗಳು, ತರವಾರಿ ತರಕಾರಿಗಳು ಕಣ್ಮನ ಸೆಳೆದವು. ನಾವು ಗೋಪಯ್ಯ ಹೆಗಡೆಯವರ ಮಗ ಗಜಪತಿ ಹೆಗಡೆ ಮತ್ತು ಶೋಭಾರು ತಮ್ಮ ನೆನಪ ಕನ್ನಡಿಯ ಬಿಂಬಗಳಿಂದ ನಮ್ಮನ್ನು ತೋಯಿಸಿದರು. 250 ಹಲಸಿನ ಹಣ್ಣಿನ ಸೊಳೆ ಹಿಡಿಸುವ ದೊಡ್ಡ ಹಲಸಿನ ಮರದ ಚರಿಗೆಯೊಂದು ನಮ್ಮ ಪರಂಪರಾಗತ ಜ್ಞಾನದ ಕೊಂಡಿಯಾಗಿ ಇನ್ನೂ ಅವರ ಮನೆ ಎದುರಿಗೆ ಮೂಕ ಸಾಕ್ಷಿಯಾಗಿ ನಿಂತಿದೆ.


ಶಿವಾನಂದ ರ ಮೂಲಿಕೆ ಪರಿಚಯ ...

ದಾರಿಯಲ್ಲಿ ಸಿಕ್ಕ ಮೀಸೆ ಮಾವ.






ಇಂತಹ ಹಲವಾರು ವಸ್ತುಗಳು ಅವರ ಮನೆಯಲ್ಲಿದೆ.  ಅಡಿಕೆ ಬೆಳೆಗಾರರಾಗಿದ್ದ ಅವರಿಗೆ ಮಳೆಗಾಲದಲ್ಲಿ ಹೊರ ಹೋಗಲು ಆಗದೇ ಊಟಕ್ಕೆ ಅಕ್ಕಿಯ ದಾಸ್ತಾನು ಮುಗಿದಾಗ, ಲಭ್ಯವಿಲ್ಲದಾದಾಗ ಹಲಸಿನ ಹಣ್ಣಿನ ಸೊಳೆ ತಿಂದು ದಿನ ದೂಡಿದ ನೆನಪುಗಳನ್ನು ನಮ್ಮೊಂದಿಗೆ ಹಂಚಿಕೊಂಡರು. ಹಿಂದಿನವರಿಗೆ ತಿಳಿದ ವಿಜ್ಞಾನದ ಜ್ಞಾನ, ಸಾಮಾನ್ಯ ಜ್ಞಾನ ಇಂದಿನವರಿಗೆ ಇಲ್ಲ! ಹಾಗೆಯೇ ಬಾಳೆ ಕಾಯಿ ತಿಂದು ಬದುಕಿದ ತಮ್ಮ ನೆನಪ ಜೋಳಿಗೆಯಿಂದ ಹರಿದು ಬಂದವು.




ನಮ್ಮ ಹಿಂದಿನವರ ವಸ್ತು ವಿಜ್ಞಾನದಲಿ ಪಳಗಿದವರು, ಹಲಸಿನ ಸೊಳೆ ಒಣಗಿಸಲು ಒಂದು ಜಾತಿಯ ಮರವಾದರೆ, ದೊಣಪೆಗೆ ಒಂದು ಜಾತಿ, ಮನೆಯ ಪಕಾಸಿ, ಜಂತಿ, ತೊಲೆ, ದಿಂಡುಗಳಿಗೆ ಬಳಸಿದ ಮರಗಳು ಬೇರೆ ಬೇರೆ. ಯಾವ ಮರವೂ ಒರಲೆ ಹಿಡಿಯದೇ ಹಾಗೆಯೇ ಉಳಿದು ನಮ್ಮನ್ನು ಅಚ್ಚರಿಗೆ ಕೆಡವಿದೆ. ಕಡಿಯುವ ಸಮಯ, ನಾಜೂಕು ಎಲ್ಲವೂ ಮರದ ಭವಿಷ್ಯವನ್ನು ನಿರ್ಧರಿಸುತ್ತವೆ ಎನ್ನುತಾರೆ ಶಿವಾನಂದ ಅವರು. ಮರ ಕೊಯ್ಯುವಾಗಲೂ  ಹುಣ್ಣಿಮೆ, ಅಮಾವಾಸ್ಯೆಯನ್ನು ಗಮನದಲ್ಲಿರಿಸಿ ಕಡಿಯಲಾಗುತ್ತದೆ!! ಇಂತಹ ಪಾರಂಪರಿಕ ಜ್ಞಾನಕ್ಕೆ ನಾವು ಬೆರಗಾದೆವು. 



ಮುಂದಿನ ಕಾಡಿನ ಹಾದಿಯಲಿ ಪರಿಚಯಗೊಂಡ ಗಿಡ ಮೂಲಿಕೆಗಳು ಅನೇಕ. ಬಾಯರಿಕೆ ನೀಗಿಸಲು ಬಳಸುತ್ತಿದ್ದ ನುರುಕಲು ಗಿಡ, ನೀರನ್ನು ಒಸರುವ ಮರಗಳ ಪರಿಚಯವನ್ನು ಶಿವಾನಂದ ಕಳವೆಯವರು ಮಾಡಿಕೊಟ್ಟರು. ಕಣಗಿಲೆ, ಬಿಳಿಸಾರೆ ಮರ, ಕರಿ ಮತ್ತಿ, ಬಿಳಿ ಮತ್ತಿ, ಹಿಂದಿನವರು ಸೋಪಿನಂತೆ ಬಳಸುತ್ತಿದ್ದ ಗಣಪೆ ಬಳ್ಳಿ ಪರಿಚಯಗೊಂಡ ಮರ ಬಳ್ಳಿಗಳು. ತಂಬಳಿ ಮಾಡಬಹುದಾದ ನಡೆತೆ ಕುಡಿ, ಕೆಂದಿಗೆ ಕುಡಿಯನ್ನು ಪರಿಚಯಿಸಿದರು. ದಕ್ಷಿಣ ಆಫ್ರಿಕಾದಿಂದ ಬಂದ ಸಿದ್ದಿಗಳ ಹಬ್ಬ, ಅವರ ದೇವರಾದ ಸಿದ್ದಿ ನ್ಯಾಸದ ಕುರಿತೂ ಮಾತು ಕತೆಯಾಯಿತು.
ಮತ್ತೆ ಮತ್ತೆ ನೆನಪ ಜೋಳಿಗೆಯಿಂದ ಮೊಗೆವಷ್ಟು ಸಂತಸವನ್ನು ಕೊಟ್ಟ 8 ಕಿ.ಮೀ ಚಾರಣವು ಪ್ರಮೋದ್ ವೈದ್ಯರ ಮನೆ ವಸತಿಯಲ್ಲಿ ಕೊನೆಗೊಂಡಿತು. ಮಾತಿಗೆ ಮಾತು ಜೋಡಿಸಿಕೊಂಡು ಮುಗಿದಂತೆ ಕಂಡರೂ ಅವರವರ ನೆನಪ ಬುತ್ತಿಯಲಿ ಅನುರಣಿಸುತಿದೆ. ಹೊಸ ಕಲಿಕೆಗೆ ಹಾದಿ ತೆರೆದಿದೆ.

ಶ್ರೀಧರ್. ಎಸ್. ಸಿದ್ದಾಪುರ
ಕುಂದಾಪುರ ತಾಲೂಕು
ಉಡುಪಿ ಜಿಲ್ಲೆ-576229.

Saturday, January 30, 2021

ಬೈರಪ್ಪನ ದಾಟು ತಂದ ಪೇಚಾಟ!

ಬೈರಪ್ಪನ ದಾಟು ತಂದ ಪೇಚಾಟ! ಕೆಲಸಕ್ಕೆ ಸೇರಿದ್ದಷ್ಟೇ. ನಾಲ್ಕು ತಿಂಗಳಿನಿಂದ ಸಂಬಳವೇ ಆಗಿರಲಿಲ್ಲ. ಮನೆಯಿಂದ ಹೊರಟಾಗ ಕಿಸೆಯಲ್ಲಿ ಕೇವಲ ನೂರು ರೂ ಮಾತ್ರವಿತ್ತು. ಕೈಯಲ್ಲಿ ಭೈರಪ್ಪನವರ ದಾಟು ಕಾದಂಬರಿ ಹಿಡಿದು 7.30ಕ್ಕೆ ಬಂದ ಗಜಾನನ ಬಸ್ಸಿಗೆ ಹತ್ತಿ ಕಂಡಕ್ಟರ್ಗೆ ನೂರು ರೂಪಾಯಿ ಕೊಟ್ಟು, ಟಿಕೀಟು ಇಸಕೊಂಡು ದಾಟು ಕಾದಂಬರಿಯಲ್ಲಿ ಮುಳುಗಿದೆ. 








 ಕಥೆಯು ಆಸಕ್ತಿಕರ ಹಂತಕ್ಕೆ ಬಂದಿತ್ತು. ಅಂದು ಕಾದಂಬರಿಯಲ್ಲಿ ಎಷ್ಟು ತಲ್ಲೀನನಾದೆನೆಂದರೆ ಜಗತ್ತೆಲ್ಲಾ ಶೂನ್ಯವಾದಂತೆನಿಸಿತು. ನಾನಿಳಿಯುವ ಸ್ಥಳ ಹಾಲಾಡಿ ಬಂದರೂ ತಿಳಿಲೇ ಇಲ್ಲ. ಪಕ್ಕವೇ ಕುಳಿತಿದ್ದವರೊಬ್ಬರು ನೀವಿಳಿವ ಸ್ಥಳ ಬಂತು ಎಂದು ಎಬ್ಬಿಸಿದರು. ಇಲ್ಲವಾದರೆ ಉಡುಪಿಯವರೆಗೆ ಹೋಗಿ ಬರುತಲಿದ್ದೆ! ಕಾದಂಬರಿಯನ್ನು ಹೆಗಲ ಚೀಲಕ್ಕೆ ತುರುಕಿ ಲಘುಬಗೆಯಿಂದ ಇಳಿದೆ. ಮುಂದಿನ ಬಸ್ಸಿಗೆ ಕಾದು ಕುಳಿತೆ. ನಡುವೆ ಕಿಸೆಗೆ ಕೈ ಹಾಕಿ ನೋಡಿದರೆ ಒಂದು ರೂಪಾಯಿಯೂ ಇರಲಿಲ್ಲ! ಅಚ್ಚರಿ, ಭಯ, ಉದ್ವೇಗ ಮುಂತಾದ ಭಾವಗಳೆಲ್ಲಾ ಒಟ್ಟಿಗೆ ಉಂಟಾದವು. ಈ ಊರಿಗೆ ಹೊಸಬ. ಸಾಲ ಹುಟ್ಟುವುದಾದರೂ ಹೇಗೆ? ತಲೆ ತುಂಬಾ ಮುಜುಗರ. ಕೇಳುವುದಾದರು ಯಾರಲ್ಲಿ? ಆಗಲೇ ಗೊತ್ತಾಗಿದ್ದು ಕಂಡಕ್ಟರ್ ಬಳಿ ಚಿಲ್ಲರೆ ತೆಗೆದುಕೊಳ್ಳದೇ ಇಳಿದು ಬಿಟ್ಟಿದ್ದು. ಕಂಡಕ್ಟರ್ ಹೊಸಬ. ನಾಳೆ ಕೇಳುವಂತಿಲ್ಲ. ಏನು ಮಾಡುವುದೆಂದು ತೋಚದೆ ಕುಳಿತೆ. ಮುಂದಿನ ಬಸ್ಸು ಹತ್ತುವಂತಿಲ್ಲ, ಹಿಂದಿರುಗಲೂ ಸಾಧ್ಯವಿಲ್ಲ್ಲ. ಪೋನ್ಗಳಿಲ್ಲದ ಕಾಲ. ಪುಣ್ಯಕ್ಕೆ ಬಸ್ಸಿನ ಟಿಕೆಟ್ ಕಿಸೆಯೊಳಗೆ ಕುಳಿತಿತ್ತು. ಬಳಿಗೆ ಬಂದ ಬಸ್ ಎಜೆಂಟ್ನ ಬಳಿ ಈ ಬಸ್ಸು ಎಷ್ಟು ಹೊತ್ತಿಗೆ ಹಿಂದಿರುಗುತ್ತೆ ಮರಾಯ ಎಂದು ಕೇಳಿದೆ. "12 ಗಂಟೆ" ಎಂದ. ಅಲ್ಲಿಯ ತನಕ ಕಾಯುವುದೆಂದು ನಿಶ್ಚಯಿಸಿ ಮತ್ತೆ ದಾಟು ಕಾದಂಬರಿಯಲ್ಲಿ ಮುಳುಗಿದೆ. ಅಂತೂ 12ಕ್ಕೆ ಬಸ್ಸು ಬಂದಿತು. ಬಸ್ಸು ಹತ್ತಿ ಕಂಡಕ್ಟರ್ ಬಳಿ ಚಿಲ್ಲರೆಗಾಗಿ ಕೇಳಿದೆ. ಪುಣ್ಯಾತ್ಮ ತಕರಾರಿಲ್ಲದೇ ಉಳಿದ ಚಿಲ್ಲರೆ ನೀಡಿದ. ಚಿಲ್ಲರೆ ಕಿಸೆಗಿಳಿಸಿ ಹಾಲಾಡಿಯಲ್ಲೇ ಉಂಡು ಕೆಲಸಕ್ಕೆ ತೆರಳಿದೆ.

ಶ್ರೀಧರ್ ಎಸ್. ಸಿದ್ದಾಪುರ. 

ಕುಂದಾಪುರ ತಾಲೂಕು 

 ಉಡುಪಿ ಜಿಲ್ಲೆ.

Monday, December 28, 2020

ಜೀವಂತ ಸೇತುವೆಗಳ ಸೆರಗು!-ನಾನ್ ಬ್ಲಾಂಗ್!

ನಾಲಗೆ ಹೊರಳದ ನಾಡಿನಲ್ಲಿ ಮೂರು ದಿನ...

ಸಂಪುಟ-೩




ಅದೇಕೋ ಗೊತ್ತಿಲ್ಲ ಸಣ್ಣ ಸಣ್ಣ ಊರುಗಳ ಸೆಳೆತವೇ ವಿಚಿತ್ರ. ದೊಡ್ಡ ಶಹರಕ್ಕಿಂತ ಪುಟಾಣಿ ಊರುಗಳೇ ನನಗಿಷ್ಟ. ಒಂದೆರಡು ಅಂಗಡಿ ಬಿಟ್ಟರೆ ಮತ್ತೇನೂ ಇಲ್ಲಿಲ್ಲ!  ಮಿಕ್ಕೆಲ್ಲವೂ ಮೊಗೆವಷ್ಟು ಇವೆ.




ಎಲ್ಲರೂ ಎಲ್ಲರಿಗೂ ಪರಿಚಯಸ್ಥರು. ಅಪರಿಚಿತತೆ ಎಂಬುದೇ ಇಲ್ಲಿ ಇಲ್ಲ. ಮಳೆಗೆ ಮನ ತಣಿಸಿದ ಭಾವದಲ್ಲಿರುವ ಜನ. ಹಾಸಿ ಹೊದ್ದು ಮಲಗಿ ಮಿಗುವಷ್ಟು ಸಮಯ. ನೆಟ್ಟಿನಲೇ(ಇಂಟರ್ ನೆಟ್)  ನೇತಾಡಿಕೊಂಡಿರಬೇಕಾದ ಅಗತ್ಯತೆ ಇಲ್ಲ. ಡಾಟಾ ಮುಗಿವ ಚಿಂತೆ ಇಲ್ಲ. ಝರಿ, ಕೊಳ, ಹೊಳೆಯ ಸಾನಿಧ್ಯವಿದ್ದರಂತೂ ಇನ್ನೂ ಅಪ್ಯಾಯಮಾನ. ದೊಡ್ಡ ಸೌಲಭ್ಯಗಳೂ ಇಲ್ಲ. ಸಣ್ಣ ಊರು ಕೊಡುವ ಕುಷಿ ಮೆಟ್ರೋಪಾಲಿಟನ್
 ನೀಡದು. ಅಲ್ಲಿ ಎಲ್ಲವಿದ್ದು ಒಂಟಿ ಎಂಬ ಭಾವ. ಸಣ್ಣ ಊರುಗಳಲ್ಲಿ ಏನಿಲ್ಲದೆಯೂ ಸಂತೃಪ್ತ ಭಾವ. 
ಇಲ್ಲಿ ಸಣ್ಣ ಪುಟ್ಟ ಜಗಳಗಳಿರಬಹುದು. ಅದರ ಎರಡರಷ್ಟು ನೆಮ್ಮದಿ ಇದೆ. ದೈವತ್ವಕ್ಕೆ ಸಮಾನವಾದ ಶುಚಿತ್ವವಿದೆ. ಬೇಜಾರು ಕಳೆಯಲು ಹಸಿರುಕ್ಕಿಸುವ ಮರಗಳಿವೆ. ಸಂಬಂಧಗಳೂ ಮರಗಳಂತೆ ಹಸಿರಾಗಿವೆ. ನಾಳೆಗಳ ಬರವಸೆ ಇದೆ. ಆಪತ್ಕಾಲಕ್ಕಾಗುವ ನೆಂಟರಿದ್ದಾರೆ. ಇಂತಹ ಊರುಗಳಲ್ಲಿ ಹುಟ್ಟಿ ಬರಲು ಪುಣ್ಯ ಮಾಡಿರಬೇಕಷ್ಟೆ. ಇಂತಹ ಸಣ್ಣ ಊರಿನ ಸೆರಗಿಡದ ಹಸಿ ಬಿಸಿ ಅನುಭವವೇ ಈಗ ನಿಮ್ಮ ಮುಂದೆ.

ಗೆಳೆಯ ನಾಗರಾಜ್ ನಾನ್ ಬ್ಲಾಂಗ್ ಊರಿಗೆ ಹೋಗೋಣ ಎಂದು ಹೇಳಿದರೂ ಈ ಹೆಸರು ನನ್ನ ಸುಲಭದ ನೆನಪಿಗೆ ದಕ್ಕದು. ಶಿಲ್ಲಾಂಗ್ನಿಂದ ಡಾಕಿಗೆ ಹೋಗುವ ದಾರಿಯಲ್ಲೇ ಒಂದರ್ದ ಗಂಟೆಯ ದಾರಿಯಲ್ಲಿ ಚಲಿಸಿದರೆ ಪುಟಾಣಿ ಗ್ರಾಮ 'ನಾನ್ ಬ್ಲಾಂಗ್!'. ಹೆಸರ ತಜರ್ುಮೆಗೆ ನಿಲುಕದ ಹಳ್ಳಿ. ತಪ್ಪಿದ್ದರೆ ಕ್ಷಮಿಸಿ. ಕಾಡಿನ ಪುಟಾಣಿ ಬಳ್ಳಿ. ಊರಿನ ಅನುಕೂಲಕ್ಕೆ ಮಾಡಿಕೊಂಡ ವಿಚಿತ್ರ ಜೀವಂತ ಸೇತುವೆಗಳನ್ನು ಮಾತನಾಡಿಸುವ ಮಾತಾಗಿತ್ತು. 
 ನಾಗರಾಜ್ನ 'ಖಾಸಿ' ಭಾಷೆ ಮಾತನಾಡಬಲ್ಲ ಗೆಳೆಯರೂ ಬಂದಿದ್ದರು. ಶಿಲ್ಲಾಂಗನ ಮುಖ್ಯ ರಸ್ತೆಯಿಂದ ಬಲಕ್ಕೆ ಹೊರಳಿ ಹರಡಿಕೊಂಡ ಕಾಲು ಹಾದಿ ಹಿಡಿಯಲು ಸುಮಾರು ಅರ್ಧ ತಾಸು ಬೇಕಾಯ್ತು. ಊರ ಬಾಗಿಲಲಿ ಸಿಕ್ಕ ಇಬ್ಬರು ಖಾಸಿ ಮಂದಿಯನ್ನು ಜೊತೆ ಮಾಡಿಕೊಂಡೆವು.
ನೀರವ ಏಕಾಂತದಲಿ ಇನಿಯನ ಬರುವಿಕೆಗೆ ಕಾದು ಕುಳಿತಂತಿರುವ ಒಂಟಿ ಮನೆಗಳು. ಮನೆ ಎದುರಿಗೆ ಬಿದರ ಬೇಲಿಯಲಿ ನಿಂತು ಇಣುಕುವ ಪುಟಾಣಿ ಪೋರರು. ರಗ್ಗು ಹೊದ್ದುಕೊಂಡೆ ಬೀಡಿ ಎಳೆವ ಮುಗ್ಧ ಜನರ ವಿಚಿತ್ರ ನೋಟ. 
ಚಳಿಗೆ ಪ್ರಿಯತಮೆಯ ಅಪ್ಪುಗೆಯಂತಹ ಸೂರ್ಯ ಮಾಮನ ಬಿಸಿಲು. ಪ್ರತಿಯುಸಿರಿಗೂ ಏಲಕ್ಕಿಯ ಘಮಲು. 




ದೂರದಲ್ಲಿ ಕಾಣುವ ಹಳ್ಳಿ. 
ಅರಳಿನಿಂತ ಮುಖಾರವಿಂದವನು ಹೊತ್ತು 9ರ ಹೊತ್ತಿಗೆ ನಾನ್ ಬ್ಲಾಂಗ್ನ ಹೊರಳು ದಾರಿ ಎದುರಿಗಿದ್ದೆವು. ನಿರುದ್ದೀಶವಾಗಿ ನೇತುಬಿದ್ದ 'ನಾನ್ ಬ್ಲಾಗ್' ಹಳ್ಳಿಗೆ ದಾರಿ ಎಂಬ ಫಲಕ. ಮಳೆರಾಯ ರಾತ್ರಿ ಬಂದು ದಾರಿ ತೊಳೆದಿಟ್ಟಿದ್ದ. ಕೆಂದುಟಿ ಹೊತ್ತು, ನಮ್ಮನ್ನು ಹಿಂದಿಕ್ಕಿ, ಮತ್ತೆಲ್ಲೋ ಹೊರಟ ಅರವತ್ತರ ಹರಯದ ಯುವತಿ! ನಮಗೂ ಮೇಘಾಲಯದ ಎಲೆ ಅಡಿಕೆ ತಿನ್ನಿಸಿದಳು. ಬೆನ್ನ ಮೇಲೆ ಬೆತ್ತದ
 ಚೀಲ. ಉಳಿದ ಪ್ರಶ್ನೆಗಳ ಸರಪಳಿ. ಭಾಷಾ ತೊಡಕು.
ಸರಿ ಸುಮಾರು 5-6 ಕಿ.ಮೀ ಉದ್ದದ ಪ್ರಪಾತದ ಹಾವಿನ ಹಾದಿಗೆ ಅವರಿಬ್ಬರು ತಂದು ನಿಲ್ಲಿಸಿ ಇಳಿಯಿರಿ ಎನ್ನುವುದೆ! ಅಕ್ಷರಶಃ ಆತ್ಮಹತ್ಯೆಗೆ ಸಜ್ಜಾದವರಂತೆ ನಿಂತುಬಿಟ್ಟೆವು. ನಮ್ಮ ಗ್ರಹಚಾರಕ್ಕೆ ಬುತ್ತಿ ಗಂಟು ಮರೆತು ಗಾಡಿಯಲ್ಲೇ ಬಿಟ್ಟು ಬಂದಿದ್ದೆವು. ಇನ್ನೇನು ಮಾಡುವುದು ಬಂದಾಯಿತೆಂದು ಏರಿಳಿವ ಸಾಹಸಕ್ಕೆ ಅಂಟಿಕೊಂಡೆವು. 
ಬಿದಿರ ಹಿಂಡಿಲುಗಳ ನಡುವೆ ಪ್ರಪಾತದ ಹಾದಿ ನುಂಗುವಂತೆ ಬಾಯಿ ಕಳೆದಿತ್ತು. ಅಬ್ಬಾ ಎನಿಸುವ ಇಳಿಜಾರಿಗೆ ಮುಖಮಾಡಿದ್ದೆವು. ಹೆಜ್ಜೆ ಜಾರಿದರೆ ಪ್ರಪಾತದ ಆ ತುದಿಗೆ. ಯಾರೋ ಬೇಕಂತಲೇ ಬೇಕಾಬಿಟ್ಟಿ ಎಸೆದ ಅನಾಥ ಅಂಕುಡೊಂಕಿನ ನಡು ಹರಿವ ನಟೋರಿಯಸ್ ಹಾದಿ. 


ಇಳಿಕೆಯೇ ಎದೆ ಹಾರಿಸುತ್ತೆ.. 

ಎಲ್ಲೋ ಹೊರಟ ಮುದುಕಿ.. 
ಹಳ್ಳಿಯಿಂದ ಕೇಳುವ ಮಕ್ಕಳ ಕೇಕೆ. ದೊಡ್ಡವರ ದನಿಯ ಪ್ರತಿಧ್ವನಿ! ಗಾಳಿಗೆ ಮೂಗೊಡ್ಡಿದರೆ ಕಾಡು ಏಲಕ್ಕಿಯ ಘಮಲು. ಇಳಿವ ಪ್ರತಿ ಹೆಜ್ಜೆಯಲೂ ಸೊಂಟದ ನೆಟ್ಟು ಬೊಲ್ಟುಗಳ ಟಿಕ್ ಟಿಕ್ ಸದ್ದು. ಬಾಕಿ ಎಲ್ಲಾ ಮೌನ.
	ಮೊದಲಿದ್ದ ದೊಡ್ಡ ಮರಗಳ ದಟ್ಟನೆ ಕಡಿಮೆಯಾಗಿ ಬಿದಿರ ಹೊದ್ದ ಬೆಟ್ಟ ಸಾಲು ಶುರುವಾಗಿತ್ತು. ಇಲ್ಲಿನ ಬಿದಿರಿಗೆ ಅದರದೇ ಆದ ಅಸ್ಮಿಯತೆ ಇದೆ. ತೀರಾ ಉದ್ದವಾಗಿ ಬೆಳೆಯದ ಕುಳ್ಳ ಜಾತಿಯ ಸದೃಡವಾದ ಬಿದಿರು ಇಲ್ಲಿನದು.  ಸ್ಥಳೀಯ ಹೆಂಗಸರು ಮತ್ತು ಗಂಡಸರು ಎಲೆ ಅಡಿಕೆ ಜಗಿಯುತ್ತಲೊ, ಹಾಡು ಕೇಳುತ್ತಲೊ, ಕೆಲವರು ಮಕ್ಕಳನ್ನು ತಮ್ಮ ಸೊಂಟಕ್ಕೆ ಸಿಕ್ಕಿಸಿಕೊಂಡು ಆರಾಮಾಗಿ ಇಳಿದು ಹೋಗುತ್ತಿದ್ದರು! ಕೆಲವರು ನಿಧಾನಕ್ಕೆ ಏರಿ ಬರುತಲಿದ್ದರು! ಅವರು ತಮ್ಮೊಳಗೆ ಚಯಾ ಪಯಾವೆಂದು ಹರಟುತ್ತಿದ್ದ ಖಾಸಿ ನುಡಿಗಳೊಂದೂ ನನ್ನ ಮಿದುಳಿನಲ್ಲಿ ದಾಖಲಾಗಲೇ ಇಲ್ಲ! ನಮ್ಮ ನಡುವಿನ ಸಾಮಾನ್ಯ ಶಬ್ದ ಶಿಲ್ಲಾಂಗ್ ಒಂದೇ ಎಂದು ಗೆಳೆಯ ನಾಗರಾಜ್ ತಮಾಷಿ ಮಾಡುತ್ತಾ ಇಳಿಯ ತೊಡಗಿದೆವು. ಪುಣ್ಯಕ್ಕೆ ಶಿಲ್ಲಾಂಗ್ ಒಂಟಿ ಪದವು ನಮ್ಮ ನಾಲಗಗೆ ತೊಂದರೆ ಕೊಡದೆ ಉಳಿದು ಕೊಂಡಿದ್ದು ನಮ್ಮ ಅದೃಷ್ಟವೇ!

ಇಳಿಯುವ ಸರ್ಕಸ್ ನಲ್ಲಿ ನಿರತ ನಮ್ಮ ಗುಂಪಿನ ಲಕ್ಷ್ಮೀ ನಾರಾಯಣ್ 


ಬಿದಿರ ಹಿಂಡಲುಗಳ ನಡುವಿನ ಹರ ದಾರಿ. .. 

ಅರಳಿನಿಂತ ಕಾಡು ಹೂ..  





ಖಾಸಿ ಜನಾಂಗದ ಅಜ್ಜನೊಬ್ಬ ನಮ್ಮಿಬ್ಬರನ್ನು ( ನಾನು ಗೆಳೆಯ ನಾಗರಾಜ್) ತಬ್ಬಿಕೊಂಡು ಖುಷಿಪಟ್ಟ! ಕಣಿವೆಯ ಎಡ ಮತ್ತು ಬಲ ಮಗ್ಗಲುಗಳಲ್ಲಿ ಜೀವಂತ ಸೇತುವೆಗಳ ತೋರಣಗಳನ್ನೇ ನಿಮರ್ಿಸಿದ್ದಾರೆ ಇಲ್ಲಿನ ಸ್ಥಳೀಯರು. ಅರ್ಧ ದಾರಿಗೆ ಕ್ರಮಿಸುತ್ತಲೆ ನಮ್ಮ ತಂಡದ ಲಕ್ಷೀ ನಾರಾಯಣ್ ದಾರಿ ತಪ್ಪಿ ಮುಂದೆ ಹೋಗಿದ್ದರು. ಜೊತೆಯಾದ ಸ್ಥಳೀಯ ಖಾಸಿ ಗೆಳೆಯ 'ಸ್ಮಾಯಿಲ್' ಆತನನ್ನು ಕರೆತರಲು ಪುಟ ಪುಟನೇ ಕೆಳಗೋಡಿ ಕ್ಷಣಾರ್ಧದಲ್ಲಿ ಮೇಲೆ ಬಂದಿದ್ದ. ಇನ್ನೊಬ್ಬ ನಮ್ಮ ಖಾಸಿ ಜೊತೆಗಾರ 'ಸಿಮಜಿನ್' ಕೈಲ್ಲೊಂದು ವಿಚಿತ್ರ ಕತ್ತಿ ಯಾವಾಗಲೂ ತೊನೆದಾಡುತ್ತಲೇ ಇರುತ್ತಿತ್ತು. ಆತ ಮೇಲೆ ಬರುವುದರೊಳಗೆ ಎರಡು ಬೀಡಿ ಎಳೆದು ಬಿಸಾಕಿದ್ದ ಆಸಾಮಿ. 

ಬೆರಗಿನ ಬೇರುಗಳ ಮಾಯಾ ಲೋಕ:-

ಲಕ್ಷ್ಮೀ ನಾರಾಯಣ್ ಮೇಲೆ ಬರುತ್ತಲೇ ಆತನನ್ನು ಜೀವಂತ ಸೇತುವೆಗಳಿರುವ ದಾರಿಗೆ ಹಚ್ಚಿದೆವು. ಇಡಿ ಊರಿಗೂರೇ ಹಳ್ಳ ಕೊಳ್ಳ. ಈ ಕೊಳ್ಳಗಳನ್ನು ದಾಟಿಕೊಳ್ಳಲು ಅವರೇ ರಚಿಸಿಕೊಂಡ ನೂರಾರುವರ್ಷ ಹಳೆಯ ಜೀವಂತ ಸೇತುವೆಗಳು. ಮನುಜನ ಸೃಜನಶೀಲತೆಯ ಪರಾಕಾಷ್ಠೆ. ಸಿಮೆಂಟು ರಾಡುಗಳಿಲ್ಲದ ಕಾಲದಲ್ಲಿ ಬೇರು ನಾರುಗಳನ್ನು ಪಳಗಿಸಿದ ಪರಿ ಅನನ್ಯ. ಆಲದಂತಹ ಮರಗಳನ್ನು ಬಿದಿರಿನ ಬೊಂಬಿನೊಳಗೆ ತೂರಿಸಿ ಮತ್ತೊಂದು ಕಡೆ ಬರುವಂತೆ ನೋಡಿಕೊಳ್ಳುವರು. ಹೀಗೆ ತೂರಿದ ಬೇರಿಗೆ ಆಚೆ ಕಡೆಯ ಮತ್ತೊಂದು ಬೇರಿನೊಂದಿಗೆ ಹೆಣಿಗೆ ಹಾಕಲಾಗುತ್ತದೆ. ಅಂತಹುದೇ ಇನ್ನೊಂದು ಮರದ ಬೇರನ್ನು ಆಚೆಯ ತುದಿಯಿಂದ ಇಚೆಗೆ ಹರಿಯ ಬಿಡಲಾಗುತ್ತದೆ. ಒಟ್ಟು ಎರಡು ದೊಡ್ಡ ಬೇರುಗಳ ಮಹಾ ಜಾಲವೇರ್ಪಟ್ಟು ಒಂದರೊಳಗೆ ಬೆಸೆದು ಸೇತುವೆ ತಯಾರಾಗುತ್ತದೆ. ಕಾಲದ ತೆಕ್ಕೆಯಲಿ ಕರಗದ ಈ ಸೇತುವೆಗಳು ಇನ್ನೂ ಜೀವಂತ. ಇಂತಹ 25 ಸೇತುವೆಗಳಿವೆ ಎಂದ ಖಾಸಿ ಮಾರ್ಗದರ್ಶಕ ಗೆಳೆಯ! ಪ್ರತೀ ಸೇತುವೆಗೂ ಒಂದೊಂದು ಹೆಸರು. ನಾಮಫಲಕ ತೂಗುಹಾಕಲಾಗಿದೆ. ಕೆಲವು ಬೋಡರ್ುಗಳು ಮಳೆ ಗಾಳಿಗೆ ಹಾರಿ ಹೋಗಿವೆ. ಹೀಗೆ ಒಂದಾದ ಮೇಲೊಂದರಂತೆ 8 ಜೀವಂತ ಸೇತುವೆಗಳನ್ನು ನೋಡಿದೆವು. ಪ್ರತಿಯೊಂದು ಮತ್ತೊಂದರಂತಿಲ್ಲ! ಕೊನೆಗೆ ನೋಡಿದ ಎಂಟನೆಯ ಸೇತುವೆಯಂತೂ ಅತ್ಯದ್ಭುತ!





ಊಟವಿಲ್ಲದೆ ಹೊಟ್ಟೆ ಚುರುಗುಟ್ಟುತಲಿತ್ತು. ಅಂತೂ ಸರಪಂಚನ ಮನೆಯಲ್ಲಿ ಚಹ ಸತ್ಕಾರವಾಯಿತು. ಚಹದ ಜೋಡಿ ಬಿಸ್ಕೀಟು ಬಂತು. ಮುಲಾಜಿಲ್ಲದೆ ಹೊಟ್ಟೆಗಿಳಿದ ಬಿಸ್ಕೀಟುಗಳ ಲೆಕ್ಕ ಸಿಕ್ಕಲಿಲ್ಲ. ಮತ್ತೆ ಆಸಾಮಿ ಬಿಸ್ಕೀಟು ಬೇಕೆಂದರೆ ಬರೋಬ್ಬರಿ 4 ರಿಂದ 5 ಗಂಟೆ ನಡೆಯಲೇಬೇಕು. ದುಡ್ಡು ಕೊಟ್ಟರೆ ಬೇಡವೆಂದ. ಪಾಪದವ! 'ನೀವು ನನ್ನ ಅತಿಥಿಗಳು ನಿಮ್ಮಲ್ಲಿ ದುಡ್ಡು ತೆಗೆದುಕೊಳ್ಳುವುದಾ?' ಅವನ ಮುಗ್ಧ ಪ್ರಶ್ನೆ. ಅತಿಥಿ ದೇವೋಭವ. ಹಾಂ ಹೇಳುವುದನು ಮರೆತೆ ಈ ಜಾಗದಲ್ಲೇ ಗುಡ್ಡಗಾಡು ಓಟ ನಡೆಯುವುದು! ನಡೆಯುವಂತಿಲ್ಲ ಓಡಬೇಕು. ಹ್ಹ ಹ್ಹ. ನನ್ನಂಥವರಿಗಲ್ಲ ಬಿಡಿ. ಗುಡ್ಡ ಹತ್ತಿಳಿಯುವುದೇ ಕಷ್ಟ! ಹಂಬಲದ ಬೆಂಬಲವೊಂದೇ ನನ್ನ ಪಾಲಿಗೆ ಉಳಿದಿರುವ ಕೃತತ್ವ ಶಕ್ತಿ.




















ಪೂವರ್ೋತ್ತರ ರಾಜ್ಯಗಳಲ್ಲಿ ಹಗಲು ಬೇಗ ಇಳಿಯುವುದರಿಂದ ಮೂರಕ್ಕೆ ವಾಪಾಸು ಹೊರಡಲೇ ಬೇಕಾಯ್ತು. ದಾರಿ ಸನಿಹದ ಎರಡು ಬಿಳಲುಗಳ ಸೇತುವೆಗೆ ಇನ್ನೊಮ್ಮೆ ಬರುತ್ತೇವೆಂದು ನಮ್ಮೂರಿನ ದಾರಿ ಹಿಡಿದೆವು. ದಾರಿಯುದ್ದಕ್ಕೂ ತಂದ ಉಂಡೆ ಚಕ್ಕುಲಿಗಳನ್ನು ಹೆಗ್ಗಣಗಳಂತೆ ಹೊಡೆಯುತ್ತಾ, ಹರಟುತ್ತಾ ಗುಡ್ಡವೇರಿದೆವು. ಗುಡ್ಡದ ತುದಿಯಲ್ಲೊಮ್ಮೆ ಕತ್ತಲಾದುದರಿಂದ ದಾರಿ ತಪ್ಪಿ ಮತ್ತೆ ಸರಿ ದಾರಿಗೆ ಬಂದೆವು. ಸುಂದರ ಸೂರ್ಯ ಮಾಮ ಕೆಲಸ ಮುಗಿಸಿ ಮನೆಗೆ ಹೊರಟಿದ್ದ. ಸೂರ್ಯ ಮಾಮನ ಚಂದದ ಪಟ ಒಂದೆರಡು ನೆನಪ ಜೋಳಿಗೆಗೆ ಹಾಕಿಕೊಂಡೆ. 6 ಗಂಟೆಯ ಕಡು ಕತ್ತಲೆಗೆ ಬೆಟ್ಟದ ನೆತ್ತಿಯಲ್ಲಿದ್ದೆವು. ಕಾಲು ಮತ್ತು ಸೊಂಟ ಯಾವೊತ್ತೊ ನನ್ನ ಮಾತು ಕೇಳುವುದನ್ನು ನಿಲ್ಲಿಸಿಯಾಗಿತ್ತು!
	ಸ್ಫಟಿಕ ಶುಭ್ರ ನೀರಿನ ಇಲ್ಲಿನ ಜಲಧಾರೆಗಳನ್ನು ನೋಡುವ ಹಂಬಲದೊಂದಿಗೆ ಅಂದಿನ ದಿನಕ್ಕೆ ಮಂಗಳಹಾಡಿದೆವು. ನಿಮ್ಮ ಕಿಸೆಗೆ ಭಾರವಾಗದ ಅನೇಕ ಹೋಟೆಲುಗಳು ರೆಸ್ಟುರೆಂಟ್ಗಳು ಶಿಲ್ಲಾಂಗಿನಲ್ಲಿದೆ. ಯಾಕಿನ್ನು ತಡ?



ಶ್ರೀಧರ್. ಎಸ್. ಸಿದ್ದಾಪುರ.
						ರಥ ಬೀದಿ ಸಿದ್ದಾಪುರ.
						ಕುಂದಾಪುರ ತಾಲೂಕು
						ಉಡುಪಿ ಜಿಲ್ಲೆ-576229.

ವಾರೆ ನೋಟ

ಬೆಣ್ಣಿಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ

ನಮ್ಮ ತಿರುಗಾಲು ತಿಪ್ಪಲುತನಕ್ಕೆ ಕಿಚ್ಚುಹಚ್ಚಿಸಿದ್ದು ಹೊಸ ಕರ್ಮವೀರ! ಕರ್ಮವೀರದ ಜೋಳಿಗೆಯ ತುಂಬಾ ಅರವತ್ತು ಜಲಪಾತಗಳನ್ನು ಕಟ್ಟಿಕೊಟ್ಟಿದ್ದ ಸಂಪಾದಕ ಮಹಾಶಯ. ಗುಣಿಸಿ ಭ...